
ಚೆನ್ನೈ, ಜೂನ್ 4: ತಮಿಳುನಾಡು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಮತ್ತು ಡಿಎಂಕೆ ನಡುವೆ ತೀವ್ರ ಭಿನ್ನಾಭಿಪ್ರಾಯ ತಲೆದೋರಿದೆ. ಇದರ ಬೆನ್ನಲ್ಲೇ, ದೆಹಲಿಯಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಇಂಡಿಯ (INDIA) ಒಕ್ಕೂಟದ ಸಭೆಯಿಂದ ದೂರ ಉಳಿಯಲು ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನಿರ್ಧರಿಸಿದ್ದಾರೆ. ಇದು ರಾಷ್ಟ್ರ ಮಟ್ಟದಲ್ಲಿ ವಿರೋಧ ಪಕ್ಷಗಳ ಮೈತ್ರಿಗೆ ದೊಡ್ಡ ಹಿನ್ನಡೆಯಾಗಿದೆ.
ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಲಭಿಸಿರಲಿಲ್ಲ. ವಿಜಯ್ ನೇತೃತ್ವದ ಟಿವಿಕೆ ತಮಿಳುನಾಡಿನ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಸರ್ಕಾರ ರಚಿಸಲು ಬೇಕಾದ ಬಹುಮತವಿರಲಿಲ್ಲ. ಈ ವೇಳೆ ಡಿಎಂಕೆ ಜೊತೆಗಿನ ದಶಕಗಳ ಮೈತ್ರಿ ಮುರಿದುಕೊಂಡ ಕಾಂಗ್ರೆಸ್ ಟಿವಿಕೆಗೆ ಬೆಂಬಲ ಸೂಚಿಸಿತ್ತು. ಇದರಿಂದ ಡಿಎಂಕೆ ಕಾಂಗ್ರೆಸ್ ನೇತೃತ್ವದ ಇಂಡಿಯ ಒಕ್ಕೂಟದಿಂದ ಹೊರಬರಲು ನಿರ್ಧರಿಸಿದೆ.
ಇದನ್ನೂ ಓದಿ: ತಮಿಳುನಾಡು ರಾಜಕೀಯದಲ್ಲಿ ಹೊಸ ತಿರುವು; ಎಐಎಡಿಎಂಕೆಗೆ ರಾಜೀನಾಮೆ ನೀಡಿ ಟಿವಿಕೆಯತ್ತ ಮುಖ ಮಾಡಿದ 3 ಶಾಸಕರು
ರಾಷ್ಟ್ರ ಮಟ್ಟದ ಮೈತ್ರಿಗಿಂತ ತಮಿಳುನಾಡಿನಲ್ಲಿ ತಮ್ಮ ಪಕ್ಷದ ಹಿತಾಸಕ್ತಿ ಮತ್ತು ಪ್ರಾದೇಶಿಕ ಅಸ್ತಿತ್ವವೇ ತಮಗೆ ಮುಖ್ಯ ಎಂಬುದನ್ನು ಡಿಎಂಕೆ ಈ ನಿರ್ಧಾರದ ಮೂಲಕ ಸ್ಪಷ್ಟಪಡಿಸಿದೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದ ಈ ಮೈತ್ರಿಯಲ್ಲಿ ಈಗ ಬಿರುಕು ಮೂಡಿರುವುದು ಇಂಡಿಯ ಒಕ್ಕೂಟದ ಇತರ ನಾಯಕರಲ್ಲಿ ಆತಂಕ ಮೂಡಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ