AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ, ಸ್ಮಾರಕ ವಿಚಾರದಲ್ಲೂ ವಿವಾದ: ಕಾರಣ ಇಲ್ಲಿದೆ ನೋಡಿ

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಸ್ಮಾರಕ ನಿರ್ಮಿಸುವುದಾಗಿಯೂ ಇದಕ್ಕಾಗಿ 3-4 ದಿನಗಳ ಸಮಯ ಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಸ್ಥಳವನ್ನು ನಿರ್ಧರಿಸಲಾಗುವುದು ಎಂದು ಸರ್ಕಾರ ಹೇಳಿದೆ. ಆದರೆ, ಮನಮೋಹನ್ ಸಿಂಗ್ ಅಂತಿಮ ಸಂಸ್ಕಾರವನ್ನು ರಾಜ್‌ಘಾಟ್‌ನಲ್ಲಿ ನಡೆಸಬೇಕು ಮತ್ತು ಸ್ಮಾರಕವನ್ನು ಕೂಡ ಅಲ್ಲಿಯೇ ನಿರ್ಮಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಆದರೆ, ಅಂತ್ಯಕ್ರಿಯೆ ನವದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ನಡೆಯಲಿದೆ. ಇದು ವಿವಾದಕ್ಕೆ ಕಾರಣವಾಗಿದೆ. ಈ ಸಂಬಂಧ ಇಲ್ಲಿವರೆಗಿನ ಒಟ್ಟು ಬೆಳವಣಿಗೆಗಳ ಮಾಹಿತಿ ಇಲ್ಲಿದೆ.

ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ, ಸ್ಮಾರಕ ವಿಚಾರದಲ್ಲೂ ವಿವಾದ: ಕಾರಣ ಇಲ್ಲಿದೆ ನೋಡಿ
ಡಾ. ಮನಮೋಹನ್ ಸಿಂಗ್
Follow us
Ganapathi Sharma
|

Updated on: Dec 28, 2024 | 10:46 AM

ನವದೆಹಲಿ, ಡಿಸೆಂಬರ್ 28: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆಗೆ ಕೆಲವೇ ಗಂಟೆಗಳ ಮೊದಲು, ಅವರ ಸ್ಮಾರಕದ ನಿರ್ಮಾಣದ ಸ್ಥಳದ ಬಗ್ಗೆ ಕಾಂಗ್ರೆಸ್ ತಗಾದೆ ತೆಗೆದಿದೆ. ಇದು ಕೇಂದ್ರ ಸರ್ಕಾರದ ಹಾಗೂ ಕಾಂಗ್ರೆಸ್ ಮಧ್ಯೆ ವಿವಾದಕ್ಕೆ ಕಾರಣವಾಗಿದೆ. ಮಾಜಿ ಪ್ರಧಾನಿ ಹೆಸರಿನಲ್ಲಿ ಕೊಳಕು ರಾಜಕಾರಣ ಮಾಡಬೇಡಿ ಎಂದು ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಆಗ್ರಹಿಸಿದೆ.

ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲಿಯೇ ಸ್ಮಾರಕ ನಿರ್ಮಿಸುವ ಸಾಧ್ಯತೆಯನ್ನು ಪರಿಶೀಲಿಸಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದರು. ಇದು ರಾಜಕಾರಣಿಗಳು ಮತ್ತು ಮಾಜಿ ಪ್ರಧಾನ ಮಂತ್ರಿಗಳ ಅಂತ್ಯಕ್ರಿಯೆಯ ಸ್ಥಳದಲ್ಲಿ ಅವರ ಸ್ಮಾರಕಗಳನ್ನು ನಿರ್ಮಿಸುವ ಸಂಪ್ರದಾಯಕ್ಕೆ ಅನುಗುಣವಾಗಿದೆ ಎಂದು ಖರ್ಗೆ ಹೇಳಿದ್ದರು.

ನಂತರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಡಾ. ಸಿಂಗ್ ಅವರ ಸ್ಮಾರಕಕ್ಕೆ ಸ್ಥಳವನ್ನು ನಿಗದಿಪಡಿಸಲಾಗುವುದು ಎಂದು ಹೇಳಿದ್ದಾರೆ. ಅಂತ್ಯಕ್ರಿಯೆ ಮತ್ತು ಇತರ ವಿಧಿವಿಧಾನಗಳು ಮುಂದುವರಿಯಲಿದೆ. ಸ್ಮಾರಕಕ್ಕೆ ಜಾಗವನ್ನು 2-3 ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಶಾ ಹೇಳಿದ್ದರು. ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಮನಮಹೋಹನ್ ಸಿಂಗ್ ಅಂತ್ಯಕ್ರಿಯೆ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ನೆರವೇರಲಿದೆ.

ಸಿಖ್ ಸಮುದಾಯದ ಏಕೈಕ ಪ್ರಧಾನಿಗೆ ಅವಮಾನ: ಕಾಂಗ್ರೆಸ್

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ ಮತ್ತು ಸ್ಮಾರಕಕ್ಕೆ ಸ್ಥಳ ನಿಗದಿಪಡಿಸದಿರುವುದು ಭಾರತದ ಮೊದಲ ಸಿಖ್ ಪ್ರಧಾನಿಗೆ ಮಾಡುತ್ತಿರುವ ಉದ್ದೇಶಪೂರ್ವಕ ಅವಮಾನವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ರಾಜ್‌ಘಾಟ್ ಬಳಿಯ ರಾಷ್ಟ್ರೀಯ ಸ್ಮಾರಕದಲ್ಲಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಮಾಡಲು ಏಕೆ ಅನುಮತಿ ಇಲ್ಲ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸರ್ಕಾರದ ನಿರ್ಧಾರ ಒಪ್ಪಿಕೊಂಡಿರುವ ಸಿಂಗ್ ಕುಟುಂಬ

ಕೇಂದ್ರ ಸಚಿವ ಸಂಪುಟ ಸಭೆ ಶುಕ್ರವಾರ ನಡೆದಿತ್ತು. ಸಭೆಯಲ್ಲಿ ಮನಮೋಹನ್ ಸಿಂಗ್ ಅವರಿಗೆ 2 ನಿಮಿಷ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿ ಸಂತಾಪ ಸೂಚಕ ನಿರ್ಣಯವನ್ನು ಅಂಗೀಕರಿಸಲಾಯಿತು. ಮೂಲಗಳ ಪ್ರಕಾರ, ಈ ಸಭೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಮನಮೋಹನ್ ಸಿಂಗ್ ಕುಟುಂಬಕ್ಕೆ ಸ್ಮಾರಕ ನಿರ್ಮಾಣದ ಬಗ್ಗೆ ಮಾಹಿತಿ ನೀಡಿದರು. ಅವರ (ಮನಮೋಹನ್ ಸಿಂಗ್) ಅವರ ಸ್ಥಾನಮಾನಕ್ಕೆ ಅನುಗುಣವಾಗಿ ಸ್ಮಾರಕವನ್ನು ನಿರ್ಮಿಸಲು ಸರ್ಕಾರಕ್ಕೆ 3-4 ದಿನಗಳ ಕಾಲಾವಕಾಶ ಬೇಕಾಗುತ್ತದೆ ಎಂದು ಶಾ ಹೇಳಿದ್ದರು. ಸ್ಮಾರಕದ ಬಗ್ಗೆ ಕುಟುಂಬವು ಸರ್ಕಾರದ ನಿರ್ಧಾರವನ್ನು ಒಪ್ಪಿಕೊಂಡಿತ್ತು.

ಕಾಂಗ್ರೆಸ್ ಮೂಲಗಳ ಪ್ರಕಾರ, ಮನಮೋಹನ್ ಸಿಂಗ್ ಅಂತ್ಯಕ್ರಿಯೆ ಮತ್ತು ಅವರ ಸ್ಮಾರಕ ಸ್ಥಳಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ಗಾಂಧಿ ಅವರು ಕೇಂದ್ರ ಸರ್ಕಾರಕ್ಕೆ ಸಲಹೆಗಳನ್ನು ನೀಡಿದ್ದರು. ವೀರಭೂಮಿ (ರಾಜೀವ್ ಗಾಂಧಿ ಸಮಾಧಿ ಸ್ಥಳ) ಮತ್ತು ಶಕ್ತಿ ಸ್ಥಳ (ಇಂದಿರಾ ಗಾಂಧಿ ಸಮಾಧಿ ಸ್ಥಳ) ಬಳಿ ಅವರ ಅಂತಿಮ ಸಂಸ್ಕಾರವನ್ನು ಮಾಡಬೇಕು ಮತ್ತು ಅಟಲ್ ಜೀ ಅವರಿಗೆ ಮಾಡಿದಂತೆ ಅಲ್ಲಿ ಸ್ಮಾರಕವನ್ನು ನಿರ್ಮಿಸಬೇಕು ಎಂದು ಪ್ರಿಯಾಂಕಾ ಹೇಳಿದ್ದರು. ನಿಗಮಬೋಧ ಘಾಟ್ ನಿರ್ಧಾರವನ್ನು ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದರು. ಆದರೆ ಕೇಂದ್ರ ಸರ್ಕಾರವು ದೇಶದ ಮೊದಲ ಸಿಖ್ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ನಿಗಮಬೋಧ ಘಾಟ್‌ನಲ್ಲಿ ಅಂತ್ಯಸಂಸ್ಕಾರ ಮಾಡುವುದಾಗಿ ಘೋಷಿಸುವ ಮೂಲಕ ಅವಮಾನಿಸುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಕಾಂಗ್ರೆಸ್​​ಗೆ ಬಿಜೆಪಿ ತಿರುಗೇಟು

ಸಿಂಗ್ ಸ್ಮಾರಕ ವಿಚಾರದಲ್ಲಿ ಕಾಂಗ್ರೆಸ್ ಕೊಳಕು ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ ತಿರುಗೇಟು ನೀಡಿದೆ. ಈ ವಿಚಾರವಾಗಿ ಪಕ್ಷವು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ, ಹಿಂದೆ ಕಾಂಗ್ರೆಸ್ ಸರ್ಕಾರ ಮಾಡಿರುವ ಎಡವಟ್ಟುಗಳನ್ನು ಉಲ್ಲೇಖಿಇದೆ.

ಇದನ್ನೂ ಓದಿ: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

“ಮಾಜಿ ಪ್ರಧಾನಿ ನರಸಿಂಹ ರಾವ್ ಜೀ ಮರಣದ ನಂತರ ಕಾಂಗ್ರೆಸ್​ನವರು ಹೇಗೆ ನಡೆಸಿಕೊಂಡರು ಎಂಬುದನ್ನು ಕಾಂಗ್ರೆಸ್ ನೆನಪಿಸಿಕೊಳ್ಳಬೇಕು. ಪ್ರಣಬ್ ಮುಖರ್ಜಿ ಅವರ ಪುತ್ರಿ ಕೂಡ ಮಾಜಿ ರಾಷ್ಟ್ರಪತಿಯಾಗಿದ್ದ ತಮ್ಮ ತಂದೆಯನ್ನು ಕಾಂಗ್ರೆಸ್ ಎಷ್ಟು ಹೀನಾಯವಾಗಿ ನಡೆಸಿಕೊಂಡಿದೆ ಎಂದು ಟ್ವೀಟ್ ಮಾಡಿದ್ದರು” ಎಂದು ಬಿಜೆಪಿ ಪ್ರಕರಣೆಯಲ್ಲಿ ಉಲ್ಲೇಖಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ