ಬಿಸಿಲ ಬೇಗೆಯ ನಡುವೆ ತಂಪು ಸುದ್ದಿ: ಮೇ ಮಧ್ಯಭಾಗದಲ್ಲೇ ಮುಂಗಾರು ಎಂಟ್ರಿ!
ದೇಶದಲ್ಲಿ ಸುಡುತ್ತಿರುವ ಬಿಸಿಲಿನ ನಡುವೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಈ ಬಾರಿ ನೈಋತ್ಯ ಮುಂಗಾರು ಅವಧಿಗಿಂತ ಮುಂಚಿತವಾಗಿ ಅಂಡಮಾನ್ ಪ್ರವೇಶಿಸಲಿದ್ದು, ಮೇ ಕೊನೆಯ ವಾರದಲ್ಲೇ ಕೇರಳಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ. ಈ ಬಾರಿಯ ಮಳೆಯ ಮೇಲೆ 'ಎಲ್ ನಿನೊ' ಪ್ರಭಾವ ಬೀರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನವದೆಹಲಿ, ಮೇ 03: ದೇಶದಲ್ಲಿ ತೀವ್ರ ಬಿಸಿಲಿನ ನಡುವೆಯೇ ಮುಂಗಾರು ಮಾರುತ ಕುರಿತಾಗಿ ಹವಾಮಾನ ಇಲಾಖೆ (IMD) ಮಹತ್ವದ ಮುನ್ಸೂಚನೆ ನೀಡಿದೆ. ಈ ಬಾರಿ ನೈಋತ್ಯ ಮುಂಗಾರು ಮಾರುತವು ಅವಧಿಗಿಂತ ಮುಂಚೆಯೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಪ್ರವೇಶಿಸುವ ಸಾಧ್ಯತೆ ಇದೆ. ಮೇ 14ರಿಂದ 16ರ ನಡುವೆ ಮುಂಗಾರು ಅಂಡಮಾನ್ ಪ್ರದೇಶಕ್ಕೆ ತಲುಪುವ ನಿರೀಕ್ಷೆಯಿದ್ದು, ಬಳಿಕ ಜೂನ್ 1ರ ಬದಲು ಮೇ ಕೊನೆಯ ವಾರದಲ್ಲೇ ಕೇರಳ ಕರಾವಳಿಗೆ ಅಪ್ಪಳಿಸಬಹುದು ಎಂದು ಇಲಾಖೆ ತಿಳಿಸಿದೆ.
ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ
ಮೇ ತಿಂಗಳಲ್ಲಿ ದೇಶದ ಹಲವು ಭಾಗಗಳಲ್ಲಿ ವಾಡಿಕೆಯಿಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಇದು ಕೃಷಿ ಚಟುವಟಿಕೆಗಳಿಗೆ ಕೆಲ ಮಟ್ಟಿಗೆ ಸಹಕಾರಿ ಆಗಬಹುದು. ಆದರೆ, ಈಶಾನ್ಯ, ಪೂರ್ವ ಹಾಗೂ ಕೇಂದ್ರ ಭಾರತದ ಕೆಲವು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ವಾಡಿಕೆಯಷ್ಟೇ ಅಥವಾ ಅದಕ್ಕಿಂತ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಇದರ ನಡುವೆ ದೇಶದ ಬಹುತೇಕ ಭಾಗಗಳಲ್ಲಿ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ. ವಿಶೇಷವಾಗಿ ಉತ್ತರ ಭಾರತ ಹಾಗೂ ಹಿಮಾಲಯದ ತಪ್ಪಲಿನ ಪ್ರದೇಶಗಳಲ್ಲಿ ಹೀಟ್ವೇವ್ ಪರಿಣಾಮ ಹೆಚ್ಚು ಕಾಣಿಸಿಕೊಳ್ಳಬಹುದು. ಏಪ್ರಿಲ್ ತಿಂಗಳಲ್ಲಿ ದಕ್ಷಿಣ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗಿದ್ದರೆ, ಇತರ ಭಾಗಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯ ಮಟ್ಟದಲ್ಲೇ ಇತ್ತು.
ಇದನ್ನೂ ಓದಿ ಸುಡುವ ಬಿಸಿಲಿನ ನಡುವೆ ಎಲ್ ನಿನೋ ಆತಂಕ: ಮುಂಗಾರು ಮಳೆಗೆ ಕಂಟಕ, ದೇಶಾದ್ಯಂತ ಬರಗಾಲದ ಭೀತಿ!
ಮಳೆಯ ಮೇಲೆ ಪರಿಣಾಮ ಬೀರಲಿದೆ ‘ಎಲ್ ನಿನೊ’
ಪೆಸಿಫಿಕ್ ಮಹಾಸಾಗರದಲ್ಲಿ ನೀರಿನ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆ ‘ಎಲ್ ನಿನೊ’ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದು ಈ ವರ್ಷದ ಮುಂಗಾರು ಮಳೆಯ ಪ್ರಮಾಣದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಒಟ್ಟಾರೆ ಮಳೆಯ ಪ್ರಮಾಣ ವಾಡಿಕೆಯಿಗಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂಬ ಅಂದಾಜು ವ್ಯಕ್ತವಾಗಿದೆ. ಹವಾಮಾನ ಇಲಾಖೆ ನೀಡಿರುವ ಈ ಮುನ್ಸೂಚನೆ ಹಿನ್ನೆಲೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




