AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಗಣೇಶನನ್ನೂ ಕಂಬಿ ಹಿಂದೆ ಹಾಕಲಾಗಿದೆ; ಕುರುಕ್ಷೇತ್ರದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಣೇಶೋತ್ಸವದ ಮೆರವಣಿಗೆ ವೇಳೆ ಅನ್ಯಕೋಮಿನವರು ಕಲ್ಲು ತೂರಾಟ ನಡೆಸಿ, ಬೆಂಕಿ ಹಚ್ಚಿ ಗಲಭೆ ಎಬ್ಬಿಸಿದ್ದರು. ಇದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಪ್ರತಿಭಟನಾಕಾರರ ಕೈಯಲ್ಲಿದ್ದ ಗಣೇಶ ವಿಗ್ರಹವನ್ನು ಪೊಲೀಸರು ಪೊಲೀಸ್ ವಾಹನದಲ್ಲಿ ಇಟ್ಟುಕೊಂಡು ಹೋಗಿದ್ದರು. ಈ ಘಟನೆಯ ಕುರಿತು ಕುರುಕ್ಷೇತ್ರದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಕೂಡ ಕಿಡಿ ಕಾರಿದ್ದಾರೆ.

ಕರ್ನಾಟಕದಲ್ಲಿ ಗಣೇಶನನ್ನೂ ಕಂಬಿ ಹಿಂದೆ ಹಾಕಲಾಗಿದೆ; ಕುರುಕ್ಷೇತ್ರದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ
ಕುರುಕ್ಷೇತ್ರದಲ್ಲಿ ಪ್ರಧಾನಿ ಮೋದಿ
ಸುಷ್ಮಾ ಚಕ್ರೆ
|

Updated on: Sep 14, 2024 | 6:32 PM

Share

ಕುರುಕ್ಷೇತ್ರ: ಕರ್ನಾಟಕದ ಮಂಡ್ಯದಲ್ಲಿ ನಡೆದ ಕೋಮುಗಲಭೆ ಈಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆಯನ್ನು ವಿರೋಧಿಸಿ ಬೆಂಗಳೂರಿನಲ್ಲಿ ಹಿಂದೂ ಕಾರ್ಯಕರ್ತರು ಗಣೇಶನ ವಿಗ್ರಹವನ್ನಿಟ್ಟುಕೊಂಡು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಸ್​ಗೆ ಹತ್ತಿಸಿಕೊಂಡು ಪೊಲೀಸರು ಅವರ ಕೈಯಲ್ಲಿದ್ದ ಗಣೇಶನ ವಿಗ್ರಹವನ್ನು ಪೊಲೀಸ್ ವಾಹನದಲ್ಲಿಟ್ಟುಕೊಂಡರು. ಪೊಲೀಸ್ ವಾಹನದೊಳಗೆ ಲಾಕ್ ಆಗಿರುವ ಗಣೇಶನ ಮೂರ್ತಿಯ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಕೂಡ ಮಾತನಾಡಿದ್ದಾರೆ.

ಕುರುಕ್ಷೇತ್ರದಲ್ಲಿ ನಡೆದ ರ್ಯಾಲಿಯ ವೇಳೆ ಮಾತನಾಡಿದ ಪ್ರಧಾನಿ ಮೋದಿ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ. ಹರಿಯಾಣದ ಕುರುಕ್ಷೇತ್ರದಲ್ಲಿ ಪ್ರಧಾನಿ ಮೋದಿ ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ಗಣಪತಿಯನ್ನು ಕೂಡ ಕಂಬಿ ಹಿಂದೆ ಹಾಕಲಾಗಿದೆ. ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಏನು ಬೇಕಾದರೂ ಮಾಡುತ್ತದೆ ಎಂದು ಕಾಂಗ್ರೆಸ್​ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪ್ರತಿಭಟನಾಕಾರರ ಕೈಯಿಂದ ಪೊಲೀಸ್ ಜೀಪ್ ಸೇರಿದ ಗಣೇಶನ ವಿಗ್ರಹ; ವಿಡಿಯೋಗೆ ಭಾರೀ ವಿರೋಧ

ಕಾಂಗ್ರೆಸ್ ಮೀಸಲಾತಿ ವಿರೋಧಿಯಾಗಿದೆ. ಕಾಂಗ್ರೆಸ್ ದಿನಕ್ಕೊಂದು ಹೊಸ ಸುಳ್ಳು ಹೇಳುತ್ತಿದೆ. ಸುಳ್ಳು ಹೇಳಲು ಕಾಂಗ್ರೆಸ್‌ಗೆ ನಾಚಿಕೆ ಆಗುವುದಿಲ್ಲವೇ? ದೇಶದ ಏಕತೆ ಮೇಲೆ ಕಾಂಗ್ರೆಸ್​ನಿಂದ ನಿರಂತರ ದಾಳಿ ನಡೆಯುತ್ತಿದೆ. ಕೇವಲ ಬಿಜೆಪಿಗೆ ಮಾನಹಾನಿ ಮಾಡುವ ಉದ್ದೇಶದಿಂದ ದೇಶದ ಮಾನಹಾನಿ ಮಾಡಲು ನಾಚಿಕೆಯಾಗುವುದಿಲ್ವಾ? ಇದು ಹಳೆಯ ಕಾಂಗ್ರೆಸ್ ಅಲ್ಲ ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಈಗ ಮೊದಲಿನ ಕಾಂಗ್ರೆಸ್ ಆಗಿ ಉಳಿದಿಲ್ಲ. ಇಂದಿನ ಕಾಂಗ್ರೆಸ್ ನಗರ ನಕ್ಸಲ್​​ನ ಹೊಸ ರೂಪವಾಗಿದೆ ಎಂದು ಕಾಂಗ್ರೆಸ್​ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮೂರು ಕುಟುಂಬಗಳು ಜಮ್ಮು ಕಾಶ್ಮೀರವನ್ನು ನಾಶಪಡಿಸಿದವು: ದೋಡಾದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಗಣಪತಿಯನ್ನೂ ಕಂಬಿ ಹಿಂದೆ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಡೀ ದೇಶವೇ ಇಂದು ಗಣೇಶ ಉತ್ಸವವನ್ನು ಆಚರಿಸುತ್ತಿದೆ. ಅದಕ್ಕೆ ಕಾಂಗ್ರೆಸ್ ಅಡ್ಡಿಯಾಗುತ್ತಿದೆ ಎಂದು ಮೋದಿ ಟೀಕಿಸಿದ್ದಾರೆ.

ಏನಿದು ಘಟನೆ?: 

ಸೆ.12ರಂದು ನಾಗಮಂಗಲ ತಾಲೂಕಿನಲ್ಲಿ ನಡೆದ ನಿಮಜ್ಜನ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಂಗಳೂರಿನ ಟೌನ್‌ಹಾಲ್ ಬಳಿ ಗಣೇಶ ಮೂರ್ತಿ ಹೊತ್ತ ಪ್ರತಿಭಟನಾಕಾರರ ಗುಂಪೊಂದು ಪ್ರತಿಭಟನೆ ನಡೆಸಿತು. ಕಲ್ಲು ತೂರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಘರ್ಷಣೆಯ ನಂತರ ಬಂಧಿಸಲ್ಪಟ್ಟ ಹಿಂದೂ ಸದಸ್ಯರ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಯಿತು.

ಆದರೆ, ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಹೀಗಾಗಿ, ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ಸುಮಾರು 40 ವ್ಯಕ್ತಿಗಳನ್ನು ಬಂಧಿಸಿದರು. ಈ ವೇಳೆ ಗಣೇಶನ ವಿಗ್ರಹವನ್ನು ಪ್ರತಿಭಟನಾಕಾರರಿಂದ ತೆಗೆದುಕೊಂಡು ಪೊಲೀಸ್ ವ್ಯಾನ್‌ನಲ್ಲಿ ಇರಿಸಲಾಯಿತು. ಇದು ತೀವ್ರ ಚರ್ಚೆಗೆ ಕಾರಣವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ