ಮಹಾರಾಷ್ಟ್ರ ಸಿಎಂ ಶಿಂಧೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಮುಂಬೈ ಮಾಜಿ ಮೇಯರ್ ಬಂಧನ

ಭಾಂಡೂಪ್‌ನಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಮುಂಬೈನ ಮಾಜಿ ಮೇಯರ್ ಹಾಗೂ ಶಿವಸೇನೆಯ ಪ್ರಮುಖ ನಾಯಕ ದತ್ತಾ ದಲ್ವಿ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ್ದರು. ಶಿಂಧೆ ಬಣದ ಕಾರ್ಯಕರ್ತರು ನೀಡಿದ ದೂರಿನ ಮೇರೆಗೆ ದಲ್ವಿ ಅವರನ್ನು ಬುಧವಾರ ಬಂಧಿಸಲಾಗಿದೆ.

ಮಹಾರಾಷ್ಟ್ರ ಸಿಎಂ ಶಿಂಧೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಮುಂಬೈ ಮಾಜಿ ಮೇಯರ್ ಬಂಧನ
ಏಕನಾಥ್ ಶಿಂಧೆ

Updated on: Nov 29, 2023 | 1:11 PM

ಮುಂಬೈ ನವೆಂಬರ್ 29: ಮಹಾರಾಷ್ಟ್ರ(Maharashtra) ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ ಆರೋಪದ ಮೇಲೆ ಮುಂಬೈನ ಮಾಜಿ ಮೇಯರ್ ಹಾಗೂ ಶಿವಸೇನೆಯ ಪ್ರಮುಖ ನಾಯಕ ದತ್ತಾ ದಲ್ವಿ (Datta Dalvi )ಅವರನ್ನು ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾಂಡೂಪ್‌ನಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ದಲ್ವಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಬೆಂಬಲಿಗರು ನೀಡಿದ ದೂರಿನ ಮೇರೆಗೆ ಈ ಬಂಧನ ನಡೆದಿದೆ.

ದೂರಿನ ಆಧಾರದ ಮೇಲೆ, 153 (ಎ) (ಧರ್ಮ, ಜನಾಂಗ, ಜನ್ಮ ಸ್ಥಳ, ನಿವಾಸ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 153 (ಬಿ) (ದೋಷಾರೋಪಣೆಗಳು, ರಾಷ್ಟ್ರೀಯ ಏಕೀಕರಣಕ್ಕೆ ಪೂರ್ವಾಗ್ರಹದ ಪ್ರತಿಪಾದನೆಗಳು), 294 (ಅಶ್ಲೀಲ ಕೃತ್ಯಗಳು ಮತ್ತು ಹಾಡುಗಳು) ಮತ್ತು 504 (ಶಾಂತಿ ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದಲ್ವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಪ್ರಸ್ತುತ ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಬಣದಲ್ಲಿರುವ ದತ್ತಾ ದಲ್ವಿ, ಶಿವಸೇನಾ-ಬಿಜೆಪಿ ಮೈತ್ರಿಕೂಟ ಅಧಿಕಾರದಲ್ಲಿದ್ದಾಗ 2005 ರಿಂದ 2007 ರವರೆಗೆ ಬೃಹನ್‌ಮುಂಬೈ ಮಹಾನಗರ ಪಾಲಿಕೆಯ ಮೇಯರ್ ಹುದ್ದೆಯನ್ನು ಅಲಂಕರಿಸಿದ್ದರು. ಅದಕ್ಕೂ ಮುನ್ನ ಸತತ ಮೂರು ಅವಧಿಗೆ ಬಿಎಂಸಿಯಲ್ಲಿ ಕಾರ್ಪೊರೇಟರ್ ಆಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ನಾಳೆ ಮೋದಿ ಸಂವಾದ

ಭಾಂಡೂಪ್ ಪೊಲೀಸ್ ಠಾಣೆ ಬಳಿ ಉದ್ಧವ್ ಠಾಕ್ರೆ ಬಣದಿಂದ ಸಭೆ ಆಯೋಜಿಸಲಾಗಿತ್ತು. ಆ ಸಭೆಯಲ್ಲಿ ದಲ್ವಿ ಸಿಎಂ ಏಕನಾಥ್ ಶಿಂಧೆ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ. ಅದರ ನಂತರ, ಶಿಂಧೆ ಬಣದ ಜನರು ದಲ್ವಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಭಾಂಡೂಪ್ ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ