ನಕಲಿ ಸುದ್ದಿಗಳು ಪ್ರಜಾಪ್ರಭುತ್ವಕ್ಕೆ ದೊಡ್ಡ ಬೆದರಿಕೆ; ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಕಳವಳ

ನಕಲಿ ಸುದ್ದಿ ಮತ್ತು ಸಾಮಾಜಿಕ ಮಾಧ್ಯಮದ ದುರುಪಯೋಗವು ದೇಶದ ಪ್ರಜಾಪ್ರಭುತ್ವಕ್ಕೆ ಗಂಭೀರ ಬೆದರಿಕೆಯಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಗಳು, ತಪ್ಪು ಮಾಹಿತಿ ಮತ್ತು AI ಡೀಪ್‌ಫೇಕ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ನಕಲಿ ಸುದ್ದಿಗಳು ಭಾರತೀಯ ಪ್ರಜಾಪ್ರಭುತ್ವಕ್ಕೆ ಅಪಾಯವನ್ನುಂಟುಮಾಡುತ್ತಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ನಕಲಿ ಸುದ್ದಿಗಳು ಪ್ರಜಾಪ್ರಭುತ್ವಕ್ಕೆ ದೊಡ್ಡ ಬೆದರಿಕೆ; ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಕಳವಳ
Ashwini Vaishnaw

Updated on: Dec 03, 2025 | 5:42 PM

ನವದೆಹಲಿ, ಡಿಸೆಂಬರ್ 3: ನಕಲಿ ಸುದ್ದಿಗಳು ಪ್ರಜಾಪ್ರಭುತ್ವಕ್ಕೆ ಗಂಭೀರ ಬೆದರಿಕೆಯನ್ನು ತಂದೊಡ್ಡುತ್ತವೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ, ನಕಲಿ ಸುದ್ದಿಗಳು ಮತ್ತು AI ಜನರೇಟೆಡ್ ಡೀಪ್ ಫೇಕ್‌ಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಇಂದು ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಅವರು, AI-ಜನರೇಟೆಡ್ ಡೀಪ್ ಫೇಕ್‌ಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲು ಹೊಸ ಕರಡು ನಿಯಮವನ್ನು ಪ್ರಕಟಿಸಲಾಗಿದೆ ಎಂದರು.

ಯಾವುದೇ ಟಿವಿ ಚಾನೆಲ್ ಅಥವಾ ಪತ್ರಿಕೆಯ ವಿರುದ್ಧ ಬರುವ ದೂರುಗಳನ್ನು ಸರ್ಕಾರ ಮತ್ತು ಭಾರತೀಯ ಪತ್ರಿಕಾ ಮಂಡಳಿಯು ಸಕ್ರಿಯವಾಗಿ ಪರಿಶೀಲಿಸುತ್ತಿದೆ ಎಂದು ಅವರು ಹೇಳಿದರು. ಸಮಾಜದ ಮೇಲಿನ ನಂಬಿಕೆಯನ್ನು ಕಾಪಾಡಿಕೊಳ್ಳಲು ಮತ್ತು ಮತ್ತಷ್ಟು ಬಲಪಡಿಸಲು ಸಾಮೂಹಿಕವಾಗಿ ಕೆಲಸ ಮಾಡುವುದು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ನಾಗರಿಕ ಸಮಾಜದ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಸಂಚಾರ್ ಸಾಥಿ ಆ್ಯಪ್‌ನಿಂದ ಎಂದಿಗೂ ಬೇಹುಗಾರಿಕೆ ನಡೆಯುವುದಿಲ್ಲ; ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಭರವಸೆ

ಪ್ರಧಾನಿ ನರೇಂದ್ರ ಮೋದಿ ಡಿಜಿಟಲ್ ಇಂಡಿಯಾ ಮೂಲಕ ದೇಶದಲ್ಲಿ ಹೊಸ ಕ್ರಾಂತಿಯನ್ನು ತಂದಿದ್ದಾರೆ. ಭಾರತ ಅದರ ಪಾಸಿಟಿವ್ ಪರಿಣಾಮಗಳನ್ನು ನೋಡುತ್ತಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ದೇಶಾದ್ಯಂತ ಕೋಟ್ಯಂತರ ಕುಟುಂಬಗಳಿಗೆ ಸಂಕಷ್ಟ ನೀಡುತ್ತಿರುವ ಆನ್‌ಲೈನ್ ಮನಿ ಗೇಮಿಂಗ್ ಅನ್ನು ನಿಯಂತ್ರಿಸಲು ಸರ್ಕಾರವು ಅತ್ಯಂತ ಕಠಿಣ ಕಾನೂನನ್ನು ಜಾರಿಗೆ ತಂದಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದರು.


ಇದನ್ನೂ ಓದಿ: ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್

ಸಾಮಾಜಿಕ ಮಾಧ್ಯಮವು ಪ್ರತಿಯೊಬ್ಬ ನಾಗರಿಕನಿಗೂ ಒಂದು ವೇದಿಕೆಯನ್ನು ಒದಗಿಸಿದೆ. ಈ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಸರ್ಕಾರವು ಸಮಾಜದ ಅಡಿಪಾಯವನ್ನು ರೂಪಿಸುವ ಸಂಸ್ಥೆಗಳು ಮತ್ತು ನಂಬಿಕೆಯನ್ನು ಬಲಪಡಿಸಲು ಕೆಲಸ ಮಾಡುತ್ತಿದೆ ಎಂದು ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us