ಕೋಮು ಪ್ರಚೋದನಾ ಹೇಳಿಕೆ ಆರೋಪ; ಮಮತಾ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ ದಾಖಲು

2026ರ ಮಾರ್ಚ್‌ನಲ್ಲಿ ಮಾಡಿದ್ದ ರಾಜಕೀಯ ಭಾಷಣವೊಂದಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಇಂದು ಮತ್ತೊಂದು ಹೊಸ ಎಫ್​ಐಆರ್ ದಾಖಲಾಗಿದೆ. "ಒಂದು ವೇಳೆ ನಿರ್ದಿಷ್ಟ ಸಮುದಾಯವೊಂದು ಒಂದಾದರೆ, ಅದು ಇತರರ ಮೇಲೆ ಭೀಕರ ಪರಿಣಾಮ ಬೀರಬಹುದು" ಎಂದು ಮಮತಾ ಎಚ್ಚರಿಸಿದ್ದರು ಎನ್ನಲಾಗಿದೆ. ಅವರ ಸಾರ್ವಜನಿಕ ಭಾಷಣಗಳನ್ನು ಉಲ್ಲೇಖಿಸಿ ಕೊಲ್ಕತ್ತಾದ ನಿವಾಸಿಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇದನ್ನು ಈಗ ಕೊಲ್ಕತ್ತಾ ಪೊಲೀಸರು ಎಫ್‌ಐಆರ್ ಆಗಿ ಪರಿವರ್ತಿಸಿದ್ದಾರೆ.

ಕೋಮು ಪ್ರಚೋದನಾ ಹೇಳಿಕೆ ಆರೋಪ; ಮಮತಾ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ ದಾಖಲು
Mamata Banerjee
Image Credit source: PTI

Updated on: Jun 12, 2026 | 6:46 PM

ಕೊಲ್ಕತ್ತಾ, ಜೂನ್ 12: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ವೇಳೆ ಕೋಮು ಸಂಘರ್ಷ ಪ್ರಚೋದಿಸುವಂತಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಉದ್ವಿಗ್ನತೆ ಹೆಚ್ಚಾಗಿರುವ ಬೆನ್ನಲ್ಲೇ, ಮಮತಾ ಬ್ಯಾನರ್ಜಿ ಅವರು ತಮ್ಮ ಚುನಾವಣಾ ರ‍್ಯಾಲಿಗಳಲ್ಲಿ ಧರ್ಮದ ಆಧಾರದ ಮೇಲೆ ಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿ ಈ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಸಾರ್ವಜನಿಕ ಸಭೆಯೊಂದರಲ್ಲಿ ನಿರ್ದಿಷ್ಟ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತಾ, “ನಿಮ್ಮ ಮತಗಳು ವಿಭಜನೆಯಾಗದಂತೆ ನೋಡಿಕೊಳ್ಳಿ ಮತ್ತು ಒಗ್ಗಟ್ಟಾಗಿ ಟಿಎಂಸಿ ಪಕ್ಷಕ್ಕೆ ಮತ ಚಲಾಯಿಸಿ” ಎಂದು ಕರೆ ನೀಡಿದ್ದರು ಎನ್ನಲಾಗಿದೆ. ಈ ಹೇಳಿಕೆಯು ವಿಧಾನಸಭಾ ಚುನಾವಣೆಯ ಮೇಲೆ ಪ್ರಭಾವ ಬೀರಲು ಮತ್ತು ಧಾರ್ಮಿಕ ಭಾವನೆಗಳನ್ನು ಪ್ರಚೋದಿಸಲು ಉದ್ದೇಶಪೂರ್ವಕವಾಗಿ ಮಾಡಿದ್ದಾಗಿದೆ ಎಂದು ಆರೋಪಿಸಿ ವಿರೋಧ ಪಕ್ಷದ ನಾಯಕರು ಹಾಗೂ ಸಾಮಾಜಿಕ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ಮಾತ್ರ ನಮ್ಮ ನಾಯಕಿ, ಅಭಿಷೇಕ್ ಅಲ್ಲ; ಟಿಎಂಸಿ ಬಂಡಾಯದ ನಡುವೆ ಶತ್ರುಘ್ನ ಸಿನ್ಹಾ ಹೇಳಿಕೆ

ಈ ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ವಿವಿಧ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ ಪ್ರಯತ್ನ ಮತ್ತು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯ ಆರೋಪಗಳ ಅಡಿಯಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಅಧಿಕೃತವಾಗಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ತೃಣಮೂಲ ಕಾಂಗ್ರೆಸ್ ಪಕ್ಷವು ಈ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದೆ. “ಇದು ಬಿಜೆಪಿಯ ರಾಜಕೀಯ ಪ್ರೇರಿತ ಪಿತೂರಿಯಾಗಿದೆ. ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ನೇರವಾಗಿ ಎದುರಿಸಲು ಸಾಧ್ಯವಾಗದ ಬಿಜೆಪಿ, ತನಿಖಾ ಸಂಸ್ಥೆಗಳು ಮತ್ತು ಪೊಲೀಸರನ್ನು ಬಳಸಿಕೊಂಡು ಇಂತಹ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದೆ” ಎಂದು ಟಿಎಂಸಿ ನಾಯಕರು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ನಾನು ಬೇಕಾ, ಅಭಿಷೇಕ್ ಬ್ಯಾನರ್ಜಿ ಬೇಕಾ ನಿರ್ಧರಿಸಿ; ಮಮತಾಗೆ ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಸವಾಲು

ಮೇ 20ರಂದು ದಕ್ಷಿಣ ಕೊಲ್ಕತ್ತಾದ ನೇತಾಜಿ ನಗರ ಪೊಲೀಸ್ ಠಾಣೆಗೆ ಸಲ್ಲಿಕೆಯಾಗಿದ್ದ ದೂರಿನ ಪ್ರಕಾರ, ಸ್ಥಳೀಯ ನಿವಾಸಿ ತುಷಾರ್ ಕಾಂತಿ ದಾಸ್ ಎಂಬುವವರು, ಸಾರ್ವಜನಿಕ ಸಭೆಯೊಂದರಲ್ಲಿ ಮಮತಾ ಬ್ಯಾನರ್ಜಿ ಅವರು ನೀಡಿದ ಹೇಳಿಕೆಯು ಪಶ್ಚಿಮ ಬಂಗಾಳ ರಾಜ್ಯದ ವಿವಿಧ ಸಮುದಾಯಗಳ ನಡುವೆ ಭಯ, ತಪ್ಪು ತಿಳುವಳಿಕೆ ಮತ್ತು ಉದ್ವಿಗ್ನತೆಯನ್ನು ಸೃಷ್ಟಿಸುವ ಸಾಮರ್ಥ್ಯ ಹೊಂದಿದೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us