
ಗೋವಾ, ಡಿಸೆಂಬರ್ 07: ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್ ಕ್ಲಬ್ನಲ್ಲಿ ನಡೆದ ಭೀಕರ ಅಗ್ನಿ ದುರಂತದಲ್ಲಿ 25 ಜನ ದುರ್ಮರಣ ಹೊಂದಿದ್ದಾರೆ. ಮಧ್ಯರಾತ್ರಿ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಿಸಿದ ಪರಿಣಾಮ ನೈಟ್ ಕ್ಲಬ್ ಹೊತ್ತಿ ಉರಿದಿದೆ. ಈ ವೇಳೆ ಹಲವರು ಸಜೀವ ದಹನವಾಗಿದ್ದರೆ, ಉಳಿದವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯಲ್ಲಿ ಮೃತಪಟ್ಟವರಲ್ಲಿ ಹೆಚ್ಚಿನವರು ಕ್ಲಬ್ನ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದವರಾಗಿದ್ದು, ಆ ಪೈಕಿ ಮೂವರು ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ. ಮೃತರಲ್ಲಿ ಮೂರರಿಂದ ನಾಲ್ಕು ಮಂದಿ ಪ್ರವಾಸಿಗರು ಕೂಡ ಇರುವ ಮಾಹಿತಿ ಸಿಕ್ಕಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನೈಟ್ಕ್ಲಬ್ನಲ್ಲಿ ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸದಿರೋದೇ ಹೆಚ್ಚಿನ ಅವಘಡಕ್ಕೆ ಕಾರಣವಾಗಿದೆ. ಗೋವಾ ರಾಜಧಾನಿ ಪಣಜಿಯಿಂದ ಸುಮಾರು 25 ಕಿ.ಮೀ. ದೂರದಲ್ಲಿರುವ ಅರ್ಪೋರಾ ಗ್ರಾಮದಲ್ಲಿ ಈ ಜನಪ್ರಿಯ ನೈಟ್ಕ್ಲಬ್ ಕಳೆದ ವರ್ಷ ಆರಂಭವಾಗಿತ್ತು. ಎಲ್ಲ 23 ಶವಗಳನ್ನು ಘಟನಾ ಸ್ಥಳದಿಂದ ಹೊರತೆಗೆಯಲಾಗಿದ್ದು, ಬಾಂಬೊಲಿಂನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ ತಕ್ಷಣ ಧಾವಿಸಿದ್ದು, ಇಡೀ ರಾತ್ರಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು ಅಗ್ನಿ ಅವಘಡ; ಎರಡೂ ಮಹಡಿಯಲ್ಲಿ ಹೊತ್ತಿಕೊಂಡಿದ್ದ ಬೆಂಕಿ, 3ನೇ ಫ್ಲೋರ್ನಲ್ಲಿದ್ದ ಕುಟುಂಬ ಬಚಾವ್ ಆಗಿದ್ದೇ ರೋಚಕ
Today is a very painful day for all of us in Goa. A major fire incident at Arpora has taken the lives of 23 people.
I am deeply grieved and offer my heartfelt condolences to all the bereaved families in this hour of unimaginable loss.
I visited the incident site and have…
— Dr. Pramod Sawant (@DrPramodPSawant) December 6, 2025
ಅಗ್ನಿ ದುರಂತದ ವಿಚಾರ ತಿಳಿದು ತುಂಬಾ ನೋವಾಗಿದೆ ಎಂದು ಹೇಳಿರುವ ಗೋವಾ ಸಿಎಂ ಪ್ರಮೋದ್ ಸಾವಂತ್, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆಯನ್ನೂ ನೀಡಿದ್ದಾರೆ. ಅಲ್ಲದೆ, ನೈಟ್ಕ್ಲಬ್ ಅಗ್ನಿ ದುರಂತದ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿದ್ದು, ಶೀಘ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
The fire mishap in Arpora, Goa is deeply saddening. My thoughts are with all those who have lost their loved ones. May the injured recover at the earliest. Spoke to Goa CM Dr. Pramod Sawant Ji about the situation. The State Government is providing all possible assistance to those…
— Narendra Modi (@narendramodi) December 7, 2025
ಗೋವಾ ಅಗ್ನಿ ದುರಂತದ ವಿಚಾರ ತಿಳಿದು ದುಃಖ ಆಗಿದೆ ಎಂದು ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದೂ ಪ್ರಾರ್ಥಿಸಿದ್ದಾರೆ. ಜೊತೆಗೆ, ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ತಲಾ 2 ಲಕ್ಷ ರೂ., ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಇದೇ ವೇಳೆ ಪ್ರಧಾನಿ ಮೋದಿ ಘೋಷಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:30 am, Sun, 7 December 25