Gyanvapi Mosque Case: ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಪೂಜೆ: ಮುಸ್ಲಿಮರಿಗೆ ಮತ್ತೆ ಹಿನ್ನಡೆ

ಜ್ಞಾನವಾಪಿ ಮಸೀದಿ ಪ್ರಕರಣ: ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಹಿಂದುಗಳಿಗೆ ಪೂಜೆಗೆ ಅವಕಾಶ ನೀಡಿರುವ ವಿಚಾರದಲ್ಲಿ ಮುಸ್ಲಿಮರಿಗೆ ಮತ್ತೆ ಹಿನ್ನಡೆಯಾಗಿದೆ. ಪೂಜೆಗೆ ಅವಕಾಶ ನೀಡಿರುವುದನ್ನು ಪ್ರಶ್ನಿಸಿ, ಮುಸ್ಲಿಮರು ಸಲ್ಲಿಸಿದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರೊಂದಿಗೆ ಹಿಂದುಗಳ ಪೂಜೆ ಮುಂದುವರಿಯಲಿದೆ.

Gyanvapi Mosque Case: ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಪೂಜೆ: ಮುಸ್ಲಿಮರಿಗೆ ಮತ್ತೆ ಹಿನ್ನಡೆ
ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ತಡೆ ನೀಡಲು ಅಲಹಾಬಾದ್​ ಹೈಕೋರ್ಟ್ ನಕಾರ

Updated on: Feb 26, 2024 | 10:50 AM

ಅಲಹಾಬಾದ್, ಫೆಬ್ರವರಿ 26: ವಾರಾಣಸಿಯ (Varanasi) ಜ್ಞಾನವಾಪಿ ಮಸೀದಿಯ (Gyanvapi Mosque) ದಕ್ಷಿಣ ನೆಲಮಾಳಿಗೆಯಲ್ಲಿ ಪೂಜೆಗೆ ಅನುಮತಿ ನೀಡಿರುವ ವಿಚಾರದಲ್ಲಿ ಅಲಹಾಬಾದ್ ಹೈಕೋರ್ಟ್‌ನಲ್ಲಿ (Allahabad High Court) ಮುಸ್ಲಿಂ ಅರ್ಜಿದಾರರಿಗೆ ದೊಡ್ಡ ಹಿನ್ನಡೆಯಾಗಿದೆ. ಪೂಜೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಸ್ಲಿಂ ಅರ್ಜಿದಾರರು ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಇದರೊಂದಿಗೆ ನೆಲಮಾಳಿಗೆಯಲ್ಲಿ ಹಿಂದೂಗಳ ಪೂಜೆ, ವ್ಯಾಸ ಜಿ ಆರಾಧನೆ ಮುಂದುವರಿಯಲಿದೆ. ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರಿದ್ದ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ.

ಮುಸ್ಲಿಮರ ಮುಂದಿನ ಆಯ್ಕೆಯೇನು?

ಹೈಕೋರ್ಟ್​​ನ ಈ ತೀರ್ಪಿನ ಪ್ರಕಾರ, ಜಿಲ್ಲಾ ನ್ಯಾಯಾಧೀಶರು ಜ್ಞಾನವಾಪಿ ಬಗ್ಗೆ ನೀಡಿದ ಆದೇಶ ಸದ್ಯಕ್ಕೆ ಹಾಗೆಯೇ ಮುಂದುವರಿಯಲಿದೆ. ಮೊದಲ ಆದೇಶದಂತೆ ನೆಲಮಾಳಿಗೆಯಲ್ಲಿ ಪೂಜೆ ಮುಂದುವರಿಯಲಿದೆ. ಆದರೆ, ಈ ತೀರ್ಪಿನ ವಿರುದ್ಧ ಮುಸ್ಲಿಂ ಕಡೆಯವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಬಹುದಾಗಿದೆ. ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ (ಎಐಎಂಸಿ) ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ ಎಂದು ಅವರು ಹೇಳಿದರು.

ನೆಲಮಾಳಿಗೆಯಲ್ಲಿ ಪೂಜೆಗೆ ಅವಕಾಶ ನೀಡುವುದನ್ನು ವಿರೋಧಿಸಿ ಮುಸ್ಲಿಂ ಕಡೆಯವರು ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಫೆಬ್ರವರಿ 15 ರಂದು ಹೈಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆದಿತ್ತು. ಎರಡೂ ಕಡೆಯ ವಾದ-ಪ್ರತಿವಾದದ ಬಳಿಕ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.

ಜನವರಿ 31ರ ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ ಸದ್ಯ ವಿಗ್ರಹವನ್ನು ನೆಲಮಾಳಿಗೆಯಲ್ಲಿ ಇಟ್ಟು ಪೂಜೆ ಮಾಡಲಾಗುತ್ತಿದೆ. ಇದನ್ನು ವಿರೋಧಿಸಿ ಮುಸ್ಲಿಮರು ಪ್ರತಿಭಟನೆ ನಡೆಸುತ್ತಿದ್ದಾರೆ. ವಾರಾಣಸಿ ಜಿಲ್ಲಾ ನ್ಯಾಯಾಧೀಶರ ಆದೇಶವು ಅಸಾಂವಿಧಾನಿಕ ಎಂದು ಮುಸ್ಲಿಮರು ಅಭಿಪ್ರಾಯಪಟ್ಟಿದ್ದಾರೆ. ಇದಾದ ಬಳಿಕ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು.

ಹಿಂದೂಗಳ ಪರವಾಗಿ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾದ ಸಿಎಸ್ ವೈದ್ಯನಾಥನ್ ಮತ್ತು ವಿಷ್ಣು ಶಂಕರ್ ಜೈನ್ ಅವರು ವಾದ ಮಂಡಿಸಿದ್ದಾರೆ. ಮುಸ್ಲಿಮರ ಪರವಾಗಿ ವಕೀಲ ಸೈಯದ್ ಫರ್ಮಾನ್ ಅಹ್ಮದ್ ನಖ್ವಿ ಮತ್ತು ವಕೀಲ ಪುನೀತ್ ಗುಪ್ತಾ ವಾದ ಮಂಡಿಸಿದ್ದಾರೆ.

ಜ್ಞಾನವಾಪಿ ಮಸೀದಿ ಪ್ರಕರಣದ ಹಿನ್ನೆಲೆ

2021ರಲ್ಲಿ ಐವರು ಹಿಂದೂ ಮಹಿಳೆಯರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಜ್ಞಾನವಾಪಿ ಮಸೀದಿ ಸಂಕೀರ್ಣದ ಪಶ್ಚಿಮ ಗೋಡೆಯ ಹಿಂದಿನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಮತ್ತು ವಿಗ್ರಹಗಳ ರಕ್ಷಣೆಗೆ ಮಹಿಳೆಯರು ಅನುಮತಿ ಕೋರಿದ್ದರು. ಈ ಬಗ್ಗೆ ಸಮೀಕ್ಷೆಗಾಗಿ ನ್ಯಾಯಾಲಯವು ಆಯೋಗವೊಂದನ್ನು ನೇಮಿಸಿತ್ತು. ಈ ಆಯೋಗವು ಕಾಶಿ ವಿಶ್ವನಾಥ ದೇವಸ್ಥಾನ-ಜ್ಞಾನವಾಪಿ ಮಸೀದಿಯ ವೀಡಿಯೊಗ್ರಾಫಿಕ್ ಸಮೀಕ್ಷೆಯನ್ನು 2022 ರ ಮೇ 16 ರಂದು ಪೂರ್ಣಗೊಳಿಸಿತ್ತು. ಸಮೀಕ್ಷೆಯ ಸಮಯದಲ್ಲಿ, ಆವರಣದೊಳಗೆ ಒಂದು ಸಂರಚನೆ ಕಂಡುಬಂದಿತ್ತು. ಹಿಂದೂಗಳ ಕಡೆಯವರು ಇದು ಶಿವಲಿಂಗ ಎಂದು ಹೇಳಿಕೊಂಡಿದ್ದರು.

ಇದನ್ನೂ ಓದಿ: ಜ್ಞಾನವಾಪಿ ಆವರಣದಲ್ಲಿ ಹಿಂದೂಗಳ ಪೂಜೆಗೆ ಸದ್ಯಕ್ಕಿಲ್ಲ ನಿರ್ಬಂಧ: ಅಲಹಾಬಾದ್ ಹೈಕೋರ್ಟ್​

ಈ ವರ್ಷ ಫೆಬ್ರವರಿ 1 ರಂದು ಜಿಲ್ಲಾ ನ್ಯಾಯಾಲಯದ ಆದೇಶದ ನಂತರ, ವ್ಯಾಸ ಜೀ ನೆಲಮಾಳಿಗೆಯಲ್ಲಿ ಹಿಂದೂಗಳು ಪೂಜೆಯನ್ನು ಆರಂಭಿಸಿದ್ದರು. ಈ ವರ್ಷ ಜನವರಿ 29 ರಂದು ನಾಲ್ವರು ಹಿಂದೂ ಮಹಿಳೆಯರು ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:34 am, Mon, 26 February 24

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us