ಕೈಗಳಲ್ಲಿ ಮೆಹಂದಿ, ಕುತ್ತಿಗೆ ಸುತ್ತ ನೀಲಿ ಗುರುತು; ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆ

ಹರಿಯಾಣದ ರೋಹ್ಟಕ್‌ನಲ್ಲಿ ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಮೃತದೇಹ ಪತ್ತೆಯಾಗಿದ್ದು, ಕಾಂಗ್ರೆಸ್ ಪಕ್ಷ ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದೆ. ಮೃತಳಾದ ಯುವತಿ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತೆಯಾಗಿದ್ದು, ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಕಾಣಿಸಿಕೊಂಡಿದ್ದರು. ಅವರು ಭೂಪಿಂದರ್ ಹೂಡಾ ಮತ್ತು ದೀಪಿಂದರ್ ಹೂಡಾ ಜೊತೆಗೆ ಕೂಡ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಕೈಗಳಲ್ಲಿ ಮೆಹಂದಿ, ಕುತ್ತಿಗೆ ಸುತ್ತ ನೀಲಿ ಗುರುತು; ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆ
Himani Narwal

Updated on: Mar 02, 2025 | 4:00 PM

ರೋಹ್ಟಕ್ (ಮಾರ್ಚ್ 2): ಹರಿಯಾಣದ ರೋಹ್ಟಕ್‌ನಲ್ಲಿ 22 ವರ್ಷದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರನ್ನು ಕೊಂದು, ಸೂಟ್‌ಕೇಸ್‌ನಲ್ಲಿ ತುಂಬಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಪಕ್ಷವು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. ಹರಿಯಾಣದ ರೋಹ್ಟಕ್‌ನಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆಯಾದ ಪ್ರಕರಣ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಯಿತು.

ಕಾಂಗ್ರೆಸ್ ಶಾಸಕ ಭರತ್ ಭೂಷಣ್ ಬಾತ್ರಾ ಮೃತರು ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಎಂದು ಹೇಳಿದ ನಂತರ ರಾಜಕೀಯ ವಿವಾದ ಭುಗಿಲೆದ್ದಿತು. ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಅವರು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಇದ್ದರು ಎಂದು ಅವರು ಹೇಳಿದ್ದಾರೆ. ಚುನಾವಣಾ ಪ್ರಚಾರದ ಸಮಯದಲ್ಲಿ ಭೂಪಿಂದರ್ ಹೂಡಾ ಮತ್ತು ದೀಪಿಂದರ್ ಹೂಡಾ ಅವರೊಂದಿಗೆ ಕೂಡ ಹಿಮಾನಿ ನರ್ವಾಲ್ ಸಾಕಷ್ಟು ಸಕ್ರಿಯರಾಗಿದ್ದರು ಎಂದು ಬಾತ್ರಾ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ, ಹರಿಯಾಣದಲ್ಲಿ ಪಟಾಕಿ ಮೇಲಿನ ನಿಷೇಧ ವಿಸ್ತರಿಸಿದ ಸುಪ್ರೀಂ ಕೋರ್ಟ್ 

ಹರಿಯಾಣ ಕಾಂಗ್ರೆಸ್ ಅಧ್ಯಕ್ಷ ಭೂಪಿಂದರ್ ಸಿಂಗ್ ಹೂಡಾ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದು “ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಮೇಲಿನ ಕಪ್ಪು ಚುಕ್ಕೆ. ಈ ಘಟನೆಯ ಬಗ್ಗೆ ಉನ್ನತ ಮಟ್ಟದ ಮತ್ತು ನಿಷ್ಪಕ್ಷಪಾತ ತನಿಖೆಯಾಗಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ರೋಹ್ಟಕ್‌ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಬರ್ಬರ ಹತ್ಯೆಯ ಸುದ್ದಿ ಅತ್ಯಂತ ದುಃಖಕರ ಮತ್ತು ಆಘಾತಕಾರಿ. ನಾನು ಅಗಲಿದ ಆತ್ಮಕ್ಕೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ರೀತಿಯಾಗಿ ಹುಡುಗಿಯ ಕೊಲೆ ಮತ್ತು ಸೂಟ್‌ಕೇಸ್‌ನಲ್ಲಿ ಆಕೆಯ ಶವ ಪತ್ತೆಯಾಗಿರುವುದು ಅತ್ಯಂತ ದುಃಖಕರ ಮತ್ತು ಆಘಾತಕಾರಿ. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಸ್ಥಿತಿಗೆ ಒಂದು ಕಪ್ಪು ಚುಕ್ಕೆಯಾಗಿದೆ” ಎಂದು ಹೂಡಾ ಎಕ್ಸ್​ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹರಿಯಾಣದ ಸೋನಿಪತ್‌ನಲ್ಲಿ ಪ್ರೇಮಿಗಳ ದಿನದಂದೇ ಇಬ್ಬರು ಅಶೋಕ ವಿವಿ ವಿದ್ಯಾರ್ಥಿಗಳ ನಿಗೂಢ ಸಾವು

ಮೃತ ಯುವತಿಯ ಶವವು ಸಂಪ್ಲಾ ಬಸ್ ನಿಲ್ದಾಣದ ಬಳಿ ದೊಡ್ಡ ನೀಲಿ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ. ನಂತರ ಈ ಬಗ್ಗೆ ಮಾಹಿತಿಯನ್ನು ಸಂಪ್ಲಾ ಪೊಲೀಸ್ ಠಾಣೆಗೆ ನೀಡಲಾಯಿತು. ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯ (ಎಸ್‌ಎಫ್‌ಎಲ್) ತಂಡವು ಅಪರಾಧ ನಡೆದ ಸ್ಥಳಕ್ಕೆ ತಲುಪಿತು. ಮೃತ ಯುವತಿಯ ಕುತ್ತಿಗೆಗೆ ಸ್ಕಾರ್ಫ್ ಸುತ್ತಿಕೊಂಡು ನೀಲಿ ಗುರುತಾಗಿತ್ತು ಮತ್ತು ಆಕೆಯ ಕೈಗಳಲ್ಲಿ ಮೆಹೆಂದಿ ಕೂಡ ಇತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us