ಸಿಎಂ ಮಮತಾ ಬ್ಯಾನರ್ಜಿ ಭೇಟಿಯಾದ ಹೆಚ್​ಡಿ ಕುಮಾರಸ್ವಾಮಿ: ಲೋಕಸಭಾ ಚುನಾವಣೆ ಬಗ್ಗೆ ಮಹತ್ವದ ಚರ್ಚೆ

ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಅವರು ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದಲ್ಲಿ ಭೇಟಿಯಾದರು.

ಸಿಎಂ ಮಮತಾ ಬ್ಯಾನರ್ಜಿ ಭೇಟಿಯಾದ ಹೆಚ್​ಡಿ ಕುಮಾರಸ್ವಾಮಿ: ಲೋಕಸಭಾ ಚುನಾವಣೆ ಬಗ್ಗೆ ಮಹತ್ವದ ಚರ್ಚೆ
ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದ ಹೆಚ್​​ಡಿ ಕುಮಾರಸ್ವಾಮಿ

Updated on: Mar 24, 2023 | 8:13 PM

ಕೋಲ್ಕತ್ತ: ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ (HD Kumaraswamy) ಅವರು ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದಲ್ಲಿ ಭೇಟಿಯಾದರು. ಟಿಎಂಸಿ ಮೂಲಗಳ ಪ್ರಕಾರ, ಇಬ್ಬರೂ ನಾಯಕರು ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಮತ್ತು 2024 ರ ಲೋಕಸಭಾ ಚುನಾವಣೆಯಲ್ಲಿ ಆಡಳಿತರೂಢಿ ಬಿಜೆಪಿಯನ್ನು ಎದುರಿಸುವ ತಂತ್ರಗಳ ಬಗ್ಗೆ ಚರ್ಚಿಸಲಾಗಿದೆ. ಕಾಂಗ್ರೆಸ್​ ಪಕ್ಷವನ್ನು ಸಹ ಮಣಿಸುವ ಕುರಿತು ಮಾತುಕತೆ ನಡೆಸಲಾಗಿದೆ. ಕಾಂಗ್ರೆಸ್​​ ಮತ್ತು ಬಿಜೆಪಿಯೇತರ ಪ್ರಾದೇಶಿಕ
ಪಕ್ಷಗಳಲ್ಲಿ ಒಮ್ಮತ ರೂಪಿಸುವ ಸಲುವಾಗಿ ಸಭೆ ನಡೆಸಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಕಳೆದ ವಾರವಷ್ಟೇ ಮಮತಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಸಮಾನ ಅಂತರವನ್ನು ಕಾಯ್ದುಕೊಳ್ಳುವುದಾಗಿ ಸಮಾಜವಾದಿ ಪಕ್ಷ ಮತ್ತು ಟಿಎಂಸಿ ಹೇಳಿದ್ದವು. ಜತೆಗೆ, ಪ್ರಾದೇಶಿಕ ಪಕ್ಷಗಳ ಒಗ್ಗೂಡುವಿಕೆ ನಿಟ್ಟಿನಲ್ಲಿ ಶ್ರಮಿಸುವುದಾಗಿಯೂ ಹೇಳಿದ್ದವು.

2019 ರ ಲೋಕಸಭೆ ಚುನಾವಣೆಗೂ ಮುನ್ನ 2019 ರ ಜನವರಿಯಲ್ಲಿ ಮಮತಾ ಬ್ಯಾನರ್ಜಿ ಅವರು ಕರೆದಿದ್ದ ವಿರೋಧ ಪಕ್ಷಗಳ ಸಭೆಯಲ್ಲಿ ಕುಮಾರಸ್ವಾಮಿ ಭಾಗವಹಿಸಿದ್ದರು. ಬಿಜೆಪಿಯೇತರ, ಕಾಂಗ್ರೆಸ್ಸೇತರ ನಾಯಕರ ಜತೆ ಇತ್ತೀಚೆಗೆ ಮಮತಾ ಅವರ ನಡೆಸುತ್ತಿರುವ ನಾಲ್ಕನೇ ಮಾತುಕತೆಯಾಗಲಿದೆ ಎಂದು ಟಿಎಂಸಿ ನಾಯಕರು ಹೇಳಿದ್ದರು.

ಈ ಮಧ್ಯೆ, ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಹಾಗೂ ಕುಮಾರಸ್ವಾಮಿ ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದೆ. ಚುನಾವಣಾ ಪ್ರಚಾರದ ಭರಾಟೆಯ ನಡುವೆಯೂ ಬಿಡುವು ಮಾಡಿಕೊಂಡು ಕುಮಾರಸ್ವಾಮಿ ಪಶ್ಚಿಮ ಬಂಗಾಳಕ್ಕೆ ತೆರಳಿ ಮಮತಾ ಬ್ಯಾನರ್ಜಿ ಜತೆ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭೇಟಿಯಾಗಲಿದ್ದಾರೆ ಹೆಚ್​​ಡಿ ಕುಮಾರಸ್ವಾಮಿ; ಕಾರಣ ಇಲ್ಲಿದೆ

ಮಮತಾ ಬ್ಯಾನರ್ಜಿ ಭೇಟಿ ಬಳಿಕ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕುಮಾರಸ್ವಾಮಿ ಅವರನ್ನು ರಾಹುಲ್ ಗಾಂಧಿ ಕುರಿತು ಮಾಧ್ಯಮದವರು ಪ್ರಶ್ನಿಸಿದ್ದು, ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದು ಬಿಜೆಪಿಯ ರಾಜಕೀಯ ಸೇಡಿನ ಕ್ರಮ ಎಂದು ವಾಗ್ದಾಳಿ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:13 pm, Fri, 24 March 23