
ನವದೆಹಲಿ, ಏಪ್ರಿಲ್ 13: ಭಾರತದಾದ್ಯಂತ ಉಷ್ಣ ಅಲೆಗಳ (Heatwave) ಪರಿಸ್ಥಿತಿ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಭಾರತದಾದ್ಯಂತ ತಾಪಮಾನವು ಏರುತ್ತಲೇ ಇರುವುದರಿಂದ ಈ ವಾರ ಶಾಖ ಹೆಚ್ಚಾಗುವ ಸಾಧ್ಯತೆಯಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹೆಚ್ಚಿನ ಪ್ರದೇಶಗಳಲ್ಲಿ ಬೇಸಿಗೆಯ ಶಾಖ ಹೆಚ್ಚಾಗಲಿದೆ. ಈ ಬಗ್ಗೆ ಇಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದ್ದು, ಏಪ್ರಿಲ್ 17ರ ವೇಳೆಗೆ ದೆಹಲಿಯು ಗರಿಷ್ಠ 41 ಡಿಗ್ರಿ ಸೆಲ್ಸಿಯಸ್ ಅನ್ನು ಮುಟ್ಟಲಿದೆ.
ಏಪ್ರಿಲ್ 18ರವರೆಗೆ ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನ 4ರಿಂದ 6 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ. ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್ಗಢ ಸೇರಿದಂತೆ ಮಧ್ಯ ಭಾಗಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ 3ರಿಂದ 5 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ. ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿಯೂ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ: ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ: ಏನೇನು ಮುನ್ನೆಚ್ಚರಿಕೆ ವಹಿಸಬೇಕು? ನೀವು ಮಾಡಬೇಕಾದ್ದಿಷ್ಟು…
ಒಡಿಶಾ, ಗುಜರಾತ್ ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿ ವಾತಾವರಣ ಇರಲಿದೆ. ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಇದೇ ರೀತಿಯ ಪರಿಸ್ಥಿತಿಗಳು ಕಂಡುಬರುವ ನಿರೀಕ್ಷೆಯಿದೆ. ಈಶಾನ್ಯದಲ್ಲಿ ಮಳೆ, ಗುಡುಗು ಸಹಿತ ಮಳೆಯಾಗಲಿದೆ. ಈಶಾನ್ಯ ಭಾರತದಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮುಂಬರುವ ದಿನಗಳಲ್ಲಿ ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ (ಗಂಟೆಗೆ 30–50 ಕಿ.ಮೀ) ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಈ ವಾರದ ಕೆಲವು ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿಯೂ ಸಹ ಕೆಲವು ದಿನಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ: Karnataka Weather: ಮುಂದಿನ 2 ದಿನಗಳ ಕಾಲ ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ, 6 ಜಿಲ್ಲೆಗಳಲ್ಲಿ ಉಷ್ಣ ಅಲೆ
ಕರ್ನಾಟಕ, ಕೇರಳ ಮತ್ತು ಕರಾವಳಿ ಆಂಧ್ರಪ್ರದೇಶ ಸೇರಿದಂತೆ ದಕ್ಷಿಣ ರಾಜ್ಯಗಳ ಕೆಲವು ಸ್ಥಳಗಳಲ್ಲಿ ಭಾರೀ ಉಷ್ಣ ಅಲೆಯ ನಿರೀಕ್ಷೆಯಿದೆ. ದೆಹಲಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ