ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 8 ಮಂದಿ ಸಾವು, ಮೃತರ ಪೈಕಿ ಬೆಂಗಳೂರು ಮೂಲದ ಪ್ರವಾಸಿಗರೂ ಇರುವ ಶಂಕೆ
ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಪ್ರವಾಸಿಗರಿದ್ದ ಕಾರು ಕಂದಕಕ್ಕೆ ಬಿದ್ದು ಎಂಟು ಮಂದಿ ಸಾವನ್ನಪ್ಪಿದ್ದಾರೆ. ಮೃತರ ಪೈಕಿ ಬೆಂಗಳೂರು ಮೂಲದ ಪ್ರವಾಸಿಗರು ಇರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಭವಿಸಿದ ಸ್ಥಳ ದುರ್ಗಮ ಪ್ರದೇಶವಾಗಿದ್ದು, ಕಡಿದಾದ ಇಳಿಜಾರುಗಳಿರುವ ಕಾರಣ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡಚಣೆ ಉಂಟಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ.

ಶಿಮ್ಲಾ, ಮೇ 31: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಚುರಾಹ್ ಉಪವಿಭಾಗದ ಬೈರಗಢ್–ಸಚ್ ಪಾಸ್–ಕಿಲ್ಲರ್ ಮಾರ್ಗದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಕಾರು ಚಾಲಕನ ನಿಯಂತ್ರಣತಪ್ಪಿ 500 ಮೀಟರ್ ಆಳದ ಕಂದಕಕ್ಕೆ ಉರುಳಿದೆ. ದುರಂತದಲ್ಲಿ ಕಾರಲ್ಲಿದ್ದ 8 ಮಂದಿ ಸ್ಥಳದಲ್ಲೇ ಮೃತಪಟ್ಟಿರೋದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, ಹಿಮದಿಂದ ಆವೃತವಾಗಿರುವ ಸಚ್ ಪಾಸ್ ಪ್ರದೇಶದತ್ತ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಮುಖ್ಯಾಂಶಗಳು
- ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭೀಕರ ಅಪಘಾತ
- 500 ಮೀಟರ್ ಆಳದ ಕಂದಕಕ್ಕೆ ಉರುಳಿದ ಪ್ರವಾಸಿಗರಿದ್ದ ಕಾರು
- ದುರಂತದಲ್ಲಿ ಮಕ್ಕಳೂ ಸೇರಿ 8 ಮಂದಿ ಸ್ಥಳದಲ್ಲೇ ಸಾವು
ಪ್ರಾಥಮಿಕ ಮಾಹಿತಿಯಂತೆ, ಬೆಂಗಳೂರಿನಿಂದ ಬಂದಿದ್ದ ಒಂದು ಪ್ರವಾಸಿ ಕುಟುಂಬ ಡಲ್ಹೌಸಿ ಪ್ರವಾಸಕ್ಕಾಗಿ ಟ್ಯಾಕ್ಸಿಯನ್ನು ಬಾಡಿಗೆಗೆ ಪಡೆದಿತ್ತು. ಈ ಕುಟುಂಬವು ಡಲ್ಹೌಸಿಯಲ್ಲಿ ತಂಗಿದ್ದ ಮತ್ತೊಂದು ಪ್ರವಾಸಿ ಕುಟುಂಬದೊಂದಿಗೆ ವಾಹನವನ್ನು ಹಂಚಿಕೊಂಡು ಸಚ್ ಪಾಸ್ನ ಹಿಮಾಚ್ಛಾದಿತ ಪ್ರದೇಶಗಳಿಗೆ ಪ್ರವಾಸಕ್ಕೆ ತೆರಳಿತ್ತು. ಚಾಲಕ ಸೇರಿದಂತೆ ವಾಹನದಲ್ಲಿ ಒಟ್ಟು ಒಂಬತ್ತು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಅವರಲ್ಲಿ ಇಬ್ಬರು ಮಕ್ಕಳು ಕೂಡ ಸೇರಿದ್ದರು.
ಇದನ್ನೂ ಓದಿ: ದೆಹಲಿ, ಮುಂಬೈ ಸೇರಿ ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ 9 ಮಂದಿ ಶಂಕಿತ ಉಗ್ರರ ಬಂಧನ
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ. ಘಟನೆ ಸಂಭವಿಸಿದ ಸ್ಥಳ ದುರ್ಗಮ ಪ್ರದೇಶವಾಗಿದ್ದು, ಕಡಿದಾದ ಇಳಿಜಾರುಗಳಿರುವ ಕಾರಣ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡಚಣೆ ಉಂಟಾಗಿದೆ. ಪೊಲೀಸ್ ಹಾಗೂ ಆಡಳಿತಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಪಘಾತದ ಕಾರಣಗಳ ಕುರಿತು ತನಿಖೆ ಆರಂಭಿಸಿದ್ದಾರೆ. ಚಂಬಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ವಿಜಯ್ ಕುಮಾರ್ ಸಕ್ಲಾನಿ ಅಪಘಾತವನ್ನು ದೃಢಪಡಿಸಿದ್ದು, ರಕ್ಷಣಾ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:36 am, Sun, 31 May 26





