Fire Accident: ಪಾಟ್ನಾ ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್​ನಲ್ಲಿ ಅಗ್ನಿ ಅವಘಡ: 6 ಮಂದಿ ಸಾವು

ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಗುರುವಾರ ಅಗ್ನಿ ಅವಘಡ ಸಂಭವಿಸಿದ್ದು ಆರು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Fire Accident: ಪಾಟ್ನಾ ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್​ನಲ್ಲಿ ಅಗ್ನಿ ಅವಘಡ: 6 ಮಂದಿ ಸಾವು
ಅಗ್ನಿ ಅವಘಡ

Updated on: Apr 25, 2024 | 2:57 PM

ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಗುರುವಾರ ಅಗ್ನಿ ಅವಘಡ(Fire Accident) ಸಂಭವಿಸಿದ್ದು ಆರು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪಾಟ್ನಾ ಜಂಕ್ಷನ್​ ರೈಲ್ವೆ ನಿಲ್ದಾಣದ ಸಮೀಪದಲ್ಲಿರುವ ಹೋಟೆಲ್​ನಲ್ಲಿ ಅಗ್ನಿ ಅಪಘಾತ ನಡೆದಿದೆ. ರಕ್ಷಣಾ ಕಾರ್ಯಚರಣೆ ಮುಂದುವರೆದಿದ್ದು, 20ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗಿದೆ.

ಘಟನಾ ಸ್ಥಳಕ್ಕೆ ದೌಡಾಯಿಸಿದ ಗೃಹ ರಕ್ಷಕ ದಳ ಮತ್ತು ಅಗ್ನಿಶಾಮಕ ದಳದ ಡಿಜಿ ಶೋಭಾ ಒಹತ್ಕರ್ ಸುದ್ದಿಗಾರರೊಂದಿಗೆ ಮಾತನಾಡಿ,ನಾವು ಬೆಂಕಿಯನ್ನು ಹತೋಟಿಗೆ ತಂದಿದ್ದೇವೆ, ಅದರ ಬಗ್ಗೆ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಮಾಹಿತಿ ಬಂದಿತು. ಸರಿಯಾದ ತನಿಖೆಯ ಮೂಲಕ ನಿಖರವಾದ ಕಾರಣವನ್ನು ಕಂಡುಹಿಡಿಯಲಾಗುವುದು ಮತ್ತು ಸೂಕ್ತ ಕ್ರಮವನ್ನು ಅನುಸರಿಸಲಾಗುವುದು ಎಂದು ಹೇಳಿದ್ದಾರೆ.

ಕಟ್ಟಡದ ಮುಂಭಾಗದಲ್ಲಿರುವ ಸೇತುವೆ ಮೇಲೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸ್ಟೇಷನ್ ರಸ್ತೆಯೂ ಸಂಪೂರ್ಣ ಬಂದ್ ಆಗಿದೆ. ಇಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು ಒಂದೂವರೆ ಗಂಟೆಗಳ ನಂತರ ವ್ಯಕ್ತಿಯ ಶವ ಹೊರತೆಗೆಯಲಾಯಿತು. ಅರ್ಧ ಗಂಟೆ ಬಳಿಕ ಇಬ್ಬರು ಬಾಲಕಿಯರ ಮೃತದೇಹಗಳನ್ನು ಹೊರ ತೆಗೆಯಲಾಯಿತು.

ಮತ್ತಷ್ಟು ಓದಿ: ಪರ್ಫ್ಯೂಮ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಹೈ ಫ್ಲೇಮ್ ಗ್ಯಾಸ್​​ನಿಂದ ಹೊತ್ತಿಕೊಂಡ ಬೆಂಕಿ

ಪಾಲ್ ಹೋಟೆಲ್‌ನಲ್ಲಿ ಬೆಂಕಿ ಅವಘಡದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪಾಟ್ನಾ ಸೆಂಟ್ರಲ್ ರೇಂಜ್ ಟಿಎಸ್‌ಪಿ ಸತ್ಯ ಪ್ರಕಾಶ್ ಖಚಿತಪಡಿಸಿದ್ದಾರೆ. ಅದರಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಪುರುಷರು ಇದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸುಮಾರು 20 ಮಂದಿ ಚಿಕಿತ್ಸೆಗಾಗಿ ಪಿಎಂಸಿಎಚ್ ಗೆ ದಾಖಲಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಅಡುಗೆ ಕೋಣೆಯಲ್ಲಿ ಕಾಣಿಸಿಕೊಂಡ ಬೆಂಕಿ ನಾಲ್ಕು ಅಂತಸ್ತಿನ ಕಟ್ಟಡವನ್ನು ಆವರಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ಘಟನೆಯ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಕ್ಕಪಕ್ಕದ ಹೋಟೆಲ್, ಅಂಗಡಿಗಳ ಜನರು ರಸ್ತೆಗೆ ಬಂದರು. ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತವಾಗಿದ್ದು, ಜನರನ್ನು ಹೊರತೆಗೆದಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದವರನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಸ್ಥಳದಲ್ಲಿ ಸುಮಾರು ಹತ್ತಾರು ಸಣ್ಣ ಮತ್ತು ದೊಡ್ಡ ಅಗ್ನಿಶಾಮಕ ವಾಹನಗಳಿವೆ. ಬಲವಾದ ಗಾಳಿಯಿಂದಾಗಿ ಪಾಲ್ ಹೋಟೆಲ್‌ನ ಬಲಭಾಗದಲ್ಲಿರುವ ಎರಡೂ ಹೋಟೆಲ್‌ಗಳು ಬೆಂಕಿಗೆ ಆಹುತಿಯಾಗಿವೆ. ಇದುವರೆಗೂ ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎನ್ನುವ ಮಾಹಿತಿ ಬಂದಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:48 pm, Thu, 25 April 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us