ದೆಹಲಿ ಪ್ರತಿಭಟನಾಕಾರರ ಮೇಲೆ ದೌರ್ಜನ್ಯ; ಉಪವಾಸ ಸತ್ಯಾಗ್ರಹ ಮುಂದುವರಿಸಲು ಸೋನಮ್ ವಾಂಗ್ಚುಕ್ ನಿರ್ಧಾರ

ಶಿಕ್ಷಣ ವ್ಯವಸ್ಥೆಯ ಸುಧಾರಣೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ಧ್ವನಿ ಎತ್ತಿರುವ ಖ್ಯಾತ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರು ಇಂದು ಮತ್ತೆ ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಂದಿಗೆ ಅವರ ಹೋರಾಟ 23ನೇ ದಿನಕ್ಕೆ ಕಾಲಿಟ್ಟಿದೆ. ದೇಶದ ಪರೀಕ್ಷಾ ಪೇಪರ್ ಲೀಕ್ ಹಗರಣಗಳು ಸೇರಿದಂತೆ ಶಿಕ್ಷಣ ವ್ಯವಸ್ಥೆಯ ವೈಫಲ್ಯಗಳ ಹೊಣೆಯನ್ನು ಹೊತ್ತು ಸರ್ಕಾರವು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ವಾಂಗ್ಚುಕ್, ಪೊಲೀಸರ ಪ್ರಚೋದನೆಗಳ ಹೊರತಾಗಿಯೂ ಯುವಕರು ಅತ್ಯಂತ ಶಾಂತಿಯುತವಾಗಿ ಹೋರಾಟ ನಡೆಸುತ್ತಿರುವುದನ್ನು ಕಂಡು ನನಗೆ ಹೆಮ್ಮೆ ಎನಿಸಿದೆ ಎಂದಿದ್ದಾರೆ.

ದೆಹಲಿ ಪ್ರತಿಭಟನಾಕಾರರ ಮೇಲೆ ದೌರ್ಜನ್ಯ; ಉಪವಾಸ ಸತ್ಯಾಗ್ರಹ ಮುಂದುವರಿಸಲು ಸೋನಮ್ ವಾಂಗ್ಚುಕ್ ನಿರ್ಧಾರ
Sonam Wangchuk

Updated on: Jul 20, 2026 | 9:24 PM

ನವದೆಹಲಿ, ಜುಲೈ 20: ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದ ಪ್ರತಿಭಟನಾಕಾರರ ಮೇಲಿನ ಪೊಲೀಸರ ಲಾಠಿ ಚಾರ್ಜ್ ಅನ್ನು ಖಂಡಿಸಿರುವ ಸೋನಮ್ ವಾಂಗ್ಚುಕ್ (Sonam Wangchuk), ತಮ್ಮ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುವುದಾಗಿ ಘೋಷಿಸಿದ್ದಾರೆ. ತಾವೀಗ ದಾಖಲಾಗಿರುವ ದೆಹಲಿಯ ಆಸ್ಪತ್ರೆಗೆ ಸಂಸದರು ಬರುವವರೆಗೆ ಅಥವಾ ಸಿಜೆಪಿ ಯುವ ನಾಯಕರಿಗೆ ಸಂಸತ್ ಭವನದಲ್ಲಿ ಸಂಸದರನ್ನು ಭೇಟಿಯಾಗಲು ಅನುಮತಿ ನೀಡುವವರೆಗೆ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ತಮ್ಮ ಸಹಿ ಇರುವ ಕೈಬರಹದ ಪತ್ರವನ್ನು ಹಂಚಿಕೊಂಡಿರುವ ಅವರು, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಯುವಕರ ಮೇಲೆ ಸರ್ಕಾರ ದೌರ್ಜನ್ಯ ಎಸಗಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಂಸತ್ತಿನತ್ತ ಮೆರವಣಿಗೆ ಹೊರಟಿದ್ದ ಯುವಕರನ್ನು ತಡೆದ ರೀತಿಯ ಬಗ್ಗೆ ಸೋನಮ್ ವಾಂಗ್ಚುಕ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. “ನನ್ನ ಉಪವಾಸ ಸತ್ಯಾಗ್ರಹ ಇನ್ನೂ ಮುಂದುವರಿಯಲಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಯುವಕರನ್ನು ಅತ್ಯಂತ ಕ್ರೂರವಾಗಿ ನಡೆಸಿಕೊಂಡಿರುವುದನ್ನು ಕಂಡು ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ. ಯುವ ನಾಯಕರಿಗೆ ಸಂಸತ್ ಭವನದಲ್ಲಿ ಸಂಸದರನ್ನು ಭೇಟಿಯಾಗಲು ಬಿಡಬೇಕು ಅಥವಾ ಆಸ್ಪತ್ರೆಯಲ್ಲಿ ನನ್ನನ್ನು ಭೇಟಿಯಾಗಲು ಅವರಿಗೆ ಅನುಮತಿ ನೀಡಬೇಕು. ಅಲ್ಲಿಯವರೆಗೆ ನನ್ನ ಉಪವಾಸ ಮುಂದುವರಿಯುತ್ತದೆ” ಎಂದು ವಾಂಗ್ಚುಕ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ: 20 ದಿನಗಳ ಉಪವಾಸದ ಬಳಿಕ ಸೋನಮ್ ವಾಂಗ್ಚುಕ್ ಆಸ್ಪತ್ರೆಗೆ ದಾಖಲು

ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದು ದೇಶದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳು ಮತ್ತು ಬೆಂಬಲಿಗರು ಜಂತರ್ ಮಂತರ್‌ನಿಂದ ಸಂಸತ್ತಿನತ್ತ ‘ಚಲೋ ಸಂಸದ್’ ಬೃಹತ್ ಮೆರವಣಿಗೆ ನಡೆಸಿದರು. ಈ ಹೋರಾಟಕ್ಕೆ ದೇಶಾದ್ಯಂತ ಯುವ ಸಮೂಹ ಮತ್ತು ನಾಗರಿಕ ಸಂಸ್ಥೆಗಳಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us