ಆಪರೇಷನ್ ಸಿಂಧೂರ್ ವೇಳೆ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ದ ಚೀನಾಗೆ ಭಾರತದ ಖಡಕ್ ಸಂದೇಶ
ಕಾಶ್ಮೀರದ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ್ದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಸಮಯದಲ್ಲಿ ಚೀನಾ ಪಾಕಿಸ್ತಾನಕ್ಕೆ ಬೆಂಬಲ ನೀಡಿದ್ದು ನಿಜ ಎಂಬ ವರದಿಗಳಿಗೆ ಭಾರತ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಕಳೆದ ವರ್ಷ ಆಪರೇಷನ್ ಸಿಂಧೂರ್ ಸಮಯದಲ್ಲಿ ಚೀನಾ ಪಾಕಿಸ್ತಾನಕ್ಕೆ ಸಹಾಯ ಮಾಡಿರುವುದನ್ನು ಬಹಿರಂಗವಾಗಿ ಒಪ್ಪಿಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಭಾರತ, ಜವಾಬ್ದಾರಿಯುತ ರಾಷ್ಟ್ರಗಳು ಭಯೋತ್ಪಾದನೆಯನ್ನು ಬಿತ್ತುವವರಿಗೆ ಬೆಂಬಲ ನೀಡುವ ಮೊದಲು ಯೋಚಿಸಬೇಕು ಎಂದು ಭಾರತ ಹೇಳಿದೆ.

ನವದೆಹಲಿ, ಮೇ 12: ಭಾರತ ಮತ್ತು ಪಾಕ್ ನಡುವಿನ 3 ದಿನಗಳ ಯುದ್ಧದ ಸಮಯದಲ್ಲಿ ಪಾಕಿಸ್ತಾನಕ್ಕೆ (Pakistan) ಚೀನಾ ತಾಂತ್ರಿಕ ಸಹಾಯವನ್ನು ನೀಡಿತ್ತು ಎಂದು ಚೀನಾದ ಅಧಿಕಾರಿಯೊಬ್ಬರು ಹೇಳಿದ್ದರು. ಈ ಮೂಲಕ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ಪಾಕಿಸ್ತಾನದ ಬೆಂಬಲಕ್ಕೆ ಚೀನಾ ನಿಂತಿದ್ದು ಬಹಿರಂಗವಾಗಿತ್ತು. ಇದಕ್ಕೆ ಭಾರತ ಕಟುವಾಗಿ ಪ್ರತಿಕ್ರಿಯೆ ನೀಡಿದೆ. ಭಯೋತ್ಪಾದನೆಯನ್ನು ಹರಡುವ ದೇಶಗಳಿಗೆ ಬೆಂಬಲ ನೀಡುವುದು ತಮ್ಮ ಜಾಗತಿಕ ಸ್ಥಾನಮಾನದ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದರ ಕುರಿತು ತಮ್ಮನ್ನು ತಾವು ಜವಾಬ್ದಾರಿಯುತ ರಾಷ್ಟ್ರಗಳೆಂದು ಕರೆದುಕೊಳ್ಳುವ ದೇಶಗಳು ಯೋಚಿಸಬೇಕು ಎಂದು ಭಾರತ ಚೀನಾದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದೆ.
ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಆಪರೇಷನ್ ಸಿಂಧೂರ್ ಸಮಯದಲ್ಲಿ ಚೀನಾ ಪಾಕಿಸ್ತಾನಕ್ಕೆ ಸಹಾಯ ಮಾಡಿದೆ ಎಂಬ ವರದಿಗಳಿಗೆ ಭಾರತ ಇಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾದಾಗ, ಭಾರತದೊಂದಿಗಿನ ಯುದ್ಧದ ಸಮಯದಲ್ಲಿ ಚೀನಾ ಪಾಕಿಸ್ತಾನಕ್ಕೆ ತಾಂತ್ರಿಕ ಬೆಂಬಲವನ್ನು ನೀಡಿದೆ ಎಂದು ಚೀನಾದ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದರು.
#WATCH | Delhi: On illegal immigration, MEA Spokesperson Randhir Jaiswal says, “This is a subject of conversation between India and Bangladesh. We have, over the last several years, we have requested Bangladesh to verify the nationality of over 2,860 people who we think are… pic.twitter.com/VFRlQDx7VG
— ANI (@ANI) May 12, 2026
ಇದನ್ನೂ ಓದಿ: 9 ವರ್ಷಗಳ ಬಳಿಕ ಚೀನಾಕ್ಕೆ ಅಮೆರಿಕ ಅಧ್ಯಕ್ಷರ ಭೇಟಿ: ಟ್ರಂಪ್-ಕ್ಸಿ ಜಿನ್ಪಿಂಗ್ ಮಹತ್ವದ ಮಾತುಕತೆ!
“ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಆಪರೇಷನ್ ಸಿಂಧೂರ್ ಒಂದು ನಿಖರವಾದ, ಟಾರ್ಗೆಟ್ ಮಾಡಿದ ಪ್ರತಿಕ್ರಿಯೆಯಾಗಿತ್ತು. ಇದು ಪಾಕಿಸ್ತಾನದಿಂದ ಮತ್ತು ಅದರ ಆಜ್ಞೆಯ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಪ್ರಾಯೋಜಿತ ಭಯೋತ್ಪಾದಕ ಮೂಲಸೌಕರ್ಯವನ್ನು ನಾಶಮಾಡುವ ಗುರಿಯನ್ನು ಹೊಂದಿತ್ತು. ಆದರೆ, ಭಯೋತ್ಪಾದನಾ ಮೂಲಸೌಕರ್ಯವನ್ನು ರಕ್ಷಿಸುವ ಪ್ರಯತ್ನಗಳನ್ನು ಬೆಂಬಲಿಸುವುದು ತಮ್ಮ ಘನತೆ ಮತ್ತು ಸ್ಥಾನಮಾನದ ಮೇಲೆ ಪರಿಣಾಮ ಬೀರುತ್ತದೆ ಎಂದು ಯೋಚಿಸುವುದು ತಮ್ಮನ್ನು ಜವಾಬ್ದಾರಿ ಎಂದು ಪರಿಗಣಿಸುವ ರಾಷ್ಟ್ರಗಳ ಜವಾಬ್ದಾರಿಯಾಗಿದೆ” ಎಂದು ವಿದೇಶಾಂಗ ಇಲಾಖೆ ವಕ್ತಾರ ರಣಧೀರ್ ಜೈಸ್ವಾಲ್ ಇಂದು ಹೇಳಿದ್ದಾರೆ.
ಏಪ್ರಿಲ್ 22, 2025ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಲಷ್ಕರ್ ಸಂಬಂಧಿತ ಭಯೋತ್ಪಾದಕರು 26 ಪ್ರವಾಸಿಗರನ್ನು ಗುಂಡಿಕ್ಕಿ ಕೊಂದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾಯಿತು. ಇದಾದ ನಂತರ ಭಾರತವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಎಂಬ ಹೆಸರಿನಲ್ಲಿ ಮಿಲಿಟರಿ ದಾಳಿಗಳನ್ನು ನಡೆಸಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




