ಶ್ರೀನಗರ ನೌಗಾಮ್ ಪೊಲೀಸ್ ಠಾಣೆಯಲ್ಲಿ ಭಾರೀ ಸ್ಫೋಟ: ಪೊಲೀಸರು ಸೇರಿ 9 ಮಂದಿ ಸಾವು, ದೆಹಲಿ ಸ್ಫೋಟ ಬೆನ್ನಲ್ಲೇ ಮತ್ತೊಂದು ಕೃತ್ಯ
Srinagar Blast: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ನೌಗಾಮ್ ಪೊಲೀಸ್ ಠಾಣೆಯಲ್ಲಿ ಸ್ಫೋಟ ಸಂಭವಿಸಿ ಪೊಲೀಸರು ಸೇರಿದಂತೆ 9 ಮಂದಿ ಮೃತಪಟ್ಟು, 27 ಮಂದಿ ಗಾಯಗೊಂಡಿದ್ದಾರೆ. ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕಗಳು ಸ್ಫೋಟಗೊಂಡು ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಸದ್ಯ ಭದ್ರತಾ ಪಡೆಗಳು ಸ್ಥಳಕ್ಕೆ ದಾವಿಸಿದ್ದು, ತನಿಖೆ ನಡೆಸುತ್ತಿವೆ.

ಶ್ರೀನಗರ, ನವೆಂಬರ್ 15: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಶ್ರೀನಗರದ ನೌಗಾಮ್ ಪೊಲೀಸ್ ಠಾಣೆ ಆವರಣದಲ್ಲಿ ಶುಕ್ರವಾರ ತಡರಾತ್ರಿ ಭಾರಿ ಸ್ಫೋಟ (Nowgam Blast) ಸಂಭವಿಸಿದೆ. ಹರಿಯಾಣದ ಫರಿದಾಬಾದ್ನಲ್ಲಿ ವಶಪಡಿಸಿಕೊಂಡಿದ್ದ ಸ್ಫೋಟಕ ವಸ್ತುಗಳ ಮಾದರಿ ಸಂಗ್ರಹಿಸಿಟ್ಟಲ್ಲಿ ಆಕಸ್ಮಿಕ ಸ್ಫೋಟ (Delhi Blast) ಸಂಭವಿಸಿ ಪೊಲೀಸರು ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ ಮತ್ತು 27 ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸ್ಫೋಟದ ತೀವ್ರತೆಗೆ ಪೊಲೀಸ್ ಠಾಣೆಯಿಂದ ಭಾರಿ ಪ್ರಮಾಣದ ಹೊಗೆ ಮತ್ತು ಜ್ವಾಲೆಗಳು ಹೊರಬರುತ್ತಿರುವುದು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಲ್ಲಿ ಕಾಣಿಸಿವೆ. ಗಾಯಗೊಂಡ ಪೊಲೀಸರನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು.
ನವದೆಹಲಿಯ ಕೆಂಪು ಕೋಟೆ ಬಳಿ ಕಾರ್ ಬಾಂಬ್ ಸ್ಫೋಟ ಸಂಭವಿಸಿದ ಕೆಲವೇ ದಿನಗಳಲ್ಲಿ ಇದೀಗ ಶ್ರೀನಗರದಲ್ಲೂ ಸ್ಫೋಟ ಸಂಭವಿಸಿದೆ. ದೆಹಲಿ ಸ್ಫೋಟದಲ್ಲಿ ಒಟ್ಟು 13 ಜನ ಸಾವಿಗೀಡಾಗಿದ್ದರು.
ದೆಹಲಿ ಸ್ಫೋಟಕ್ಕೂ ಇದಕ್ಕೂ ಇದೆ ನಂಟು!
ಬಂಧಿತ ಉಗ್ರ, ವೈದ್ಯ ಮುಜಮ್ಮಿಲ್ ಗನೈ ಬಾಡಿಗೆ ಮನೆಯಿಂದ ವಶಪಡಿಸಿಕೊಂಡ 360 ಕಿಲೋಗ್ರಾಂಗಳಷ್ಟು ಸ್ಫೋಟಕಗಳ ಪೈಕಿ ಒಂದಷ್ಟನ್ನು ಈಗಿನ ತನಿಖೆಯ ಅಂಗವಾಗಿ ಮಾದರಿಯಾಗಿ ಸಂಗ್ರಹಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವುಗಳಿಂದಾಗಿಯೇ ಸ್ಫೋಟ ಸಂಭವಿಸಿದೆ. ಸದ್ಯ ಘಟನಾ ಸ್ಥಳದಿಂದ ಆರು ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು ಮೃತರನ್ನು ಗುರುತು ಪತ್ತೆ ಕಾರ್ಯ ಇನ್ನಷ್ಟೇ ಆಗಬೇಕಿದೆ. ಶವಗಳನ್ನು ಶ್ರೀನಗರದ ಪೊಲೀಸ್ ನಿಯಂತ್ರಣ ಕೊಠಡಿಗೆ ಕೊಂಡೊಯ್ಯಲಾಗಿದೆ.
ಪೊಲೀಸ್ ಠಾಣೆಗೆ ಸ್ಫೋಟಕ ತಂದಿದ್ದೇಕೆ?
ಉಗ್ರನ ಮನೆಯಿಂದ ವಶಪಡಿಸಿಕೊಂಡಿದ್ದ ಕೆಲವು ಸ್ಫೋಟಕಗಳನ್ನು ಪೊಲೀಸ್ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಸಂಗ್ರಹಿಸಲಾಗಿತ್ತು. 360 ಕಿಲೋಗ್ರಾಂಗಳಷ್ಟು ಸ್ಫೋಟಕಗಳಲ್ಲಿ ಹೆಚ್ಚಿನದ್ದನ್ನು ಭಯೋತ್ಪಾದಕ ಘಟಕದ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು. ಅಕ್ಟೋಬರ್ ಮಧ್ಯದಲ್ಲಿ ನೌಗಾಮ್ನ ಬನ್ಪೋರಾದಲ್ಲಿ ಗೋಡೆಗಳ ಮೇಲೆ ಬೆದರಿಕೆ ಪೋಸ್ಟರ್ಗಳನ್ನು ಪೊಲೀಸರು ಮತ್ತು ಭದ್ರತಾ ಪಡೆಗಳು ಪತ್ತೆ ಮಾಡಿದ ನಂತರ ಇಡೀ ಸಂಚು ಬಯಲಾಗಿತ್ತು. ಈ ಘಟನೆಯನ್ನು ದೇಶದ ಭದ್ರತೆಗೆ ಗಂಭೀರ ಬೆದರಿಕೆ ಎಂದು ಪರಿಗಣಿಸಿ, ಶ್ರೀನಗರ ಪೊಲೀಸರು ಅಕ್ಟೋಬರ್ 19 ರಂದು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ತಂಡವನ್ನು ರಚಿಸಿದ್ದರು. ತನಿಖೆ ನಡೆದು ಉಗ್ರರ ಬೃಹತ್ ಜಾಲವನ್ನು ಬೇಧಿಸಲಾಗಿತ್ತು. ಅದೇ ಸಂದರ್ಭದಲ್ಲೇ ದೆಹಲಿ ಸ್ಫೋಟವೂ ಸಂಭವಿಸಿತ್ತು.
ಇದನ್ನೂ ಓದಿ: ದೆಹಲಿ ಸ್ಫೋಟಕ್ಕೆ ಕಾರಣನಾಗಿದ್ದ ಡಾ. ಉಮರ್ ನಬಿ ಮನೆ ರಾತ್ರೋರಾತ್ರಿ ನೆಲಸಮ
ಗಾಯಾಳುಗಳಲ್ಲಿ ಹೆಚ್ಚಿನವರು ಪೊಲೀಸ್ ಮತ್ತು ವಿಧಿವಿಜ್ಞಾನ ಅಧಿಕಾರಿಗಳು ಎಂದು ಮೂಲಗಳು ತಿಳಿಸಿವೆ. ಸದ್ಯ ಘಟನಾ ಸ್ಥಳಕ್ಕೆ ಭದ್ರತಾ ಪಡೆಗಳು ಧಾವಿಸಿದ್ದು, ತನಿಖೆ ನಡೆಯುತ್ತಿದೆ. ಶ್ರೀನಗರ ಉಪ ಆಯುಕ್ತ ಅಕ್ಷಯ್ ಲ್ಯಾಬ್ರೂ ಜಮ್ಮು ಮತ್ತು ಕಾಶ್ಮೀರದ ನೌಗಾಮ್ ಪೊಲೀಸ್ ಠಾಣೆ ಬಳಿ ನಡೆದ ಸ್ಫೋಟದ ಸಂತ್ರಸ್ತರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:54 am, Sat, 15 November 25




