16 ವರ್ಷಗಳಿಂದ ಭಾರತದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಪಾಕಿಸ್ತಾನದ ಎಲ್​ಇಟಿ ಉಗ್ರ ಸೆರೆ

ಜಮ್ಮು-ಕಾಶ್ಮೀರ ಪೊಲೀಸರು ಅಂತರರಾಜ್ಯ ಎಲ್‌ಇಟಿ ಜಾಲವನ್ನು ಭೇದಿಸಿದ್ದಾರೆ. 16 ವರ್ಷಗಳಿಂದ ತಲೆಮರೆಸಿಕೊಂಡಿರುವ ಭಯೋತ್ಪಾದಕ ನಾಯಕ ಸೇರಿದಂತೆ 5 ಜನರನ್ನು ಬಂಧಿಸಲಾಗಿದೆ. ಒಂದೂವರೆಗ ದಶಕಗಳಿಂದ ಭಾರತದಲ್ಲೇ ಇದ್ದುಕೊಂಡು ಕಾಶ್ಮೀರದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಉಗ್ರ ಸಂಘಟನೆಯ ನಾಯಕ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಇಂದು ಎಲ್‌ಇಟಿಗೆ ಸಂಬಂಧಿಸಿದ ಪ್ರಮುಖ ಭಯೋತ್ಪಾದಕ ಘಟಕವನ್ನು ಭೇದಿಸಿರುವ ಜಮ್ಮು ಕಾಶ್ಮೀರದ ಪೊಲೀಸರು 2 ಪಾಕ್ ಭಯೋತ್ಪಾದಕರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಇವರಲ್ಲಿ ಎಲ್‌ಇಟಿಯ ಮಾಸ್ಟರ್‌ಮೈಂಡ್ ಹುರೇರಾ ಕೂಡ ಸೇರಿದ್ದಾನೆ.

16 ವರ್ಷಗಳಿಂದ ಭಾರತದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಪಾಕಿಸ್ತಾನದ ಎಲ್​ಇಟಿ ಉಗ್ರ ಸೆರೆ
Terrorists
Image Credit source: iStock

Updated on: Apr 07, 2026 | 3:31 PM

ಶ್ರೀನಗರ, ಏಪ್ರಿಲ್ 7: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೊಲೀಸರು ಇಂದು ಅಂತರರಾಜ್ಯ ಲಷ್ಕರ್-ಎ-ತೈಬಾ ಭಯೋತ್ಪಾದಕ ಘಟಕವನ್ನು ಭೇದಿಸಿದ್ದಾರೆ. ಅಬ್ದುಲ್ಲಾ ಅಲಿಯಾಸ್ ಅಬು ಹುರೇರಾ ಸೇರಿದಂತೆ 5 ಜನರನ್ನು ಬಂಧಿಸಿದ್ದಾರೆ. ಈತ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಕೇಂದ್ರಾಡಳಿತ ಪ್ರದೇಶದ ಹೊರಗೆ ನೆಲೆಗಳನ್ನು ಸ್ಥಾಪಿಸಲು ಕಾರಣನಾಗಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳಲ್ಲಿ ಕಳೆದ 16 ವರ್ಷಗಳಿಂದ ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದ ಎಲ್‌ಇಟಿಯ ಪ್ರಮುಖ ಭಯೋತ್ಪಾದಕ ಅಬ್ದುಲ್ಲಾ ಅಲಿಯಾಸ್ ಅಬು ಹುರೇರಾ ಕೂಡ ಸೇರಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈತ ಭಯೋತ್ಪಾದಕ ಅಡಗುತಾಣಗಳು ಮತ್ತು ಹಣಕಾಸು ಮಾರ್ಗಗಳ ಜಾಲದ ಹಿಂದಿನ ಮಾಸ್ಟರ್ ಮೈಂಡ್ ಎಂದು ಹೇಳಲಾಗಿದೆ.

ಅಬ್ದುಲ್ಲಾ ಜೊತೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರು ಮತ್ತು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಒಳಗೊಂಡ ಪ್ರಮುಖ ಕಾರ್ಯಾಚರಣೆಯಲ್ಲಿ ಮತ್ತೊಬ್ಬ ಪಾಕಿಸ್ತಾನಿ ಭಯೋತ್ಪಾದಕ ಉಸ್ಮಾನ್ ಅಲಿಯಾಸ್ ಖುಬೈಬ್ ಎಂಬಾತನನ್ನು ಸಹ ಬಂಧಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನ, ಹರಿಯಾಣ ಸೇರಿದಂತೆ 19 ಸ್ಥಳಗಳಲ್ಲಿ ಶೋಧ ನಡೆಸಿದ್ದ ಪೊಲೀಸರು ಭಯೋತ್ಪಾದಕರಿಗೆ ಲಾಜಿಸ್ಟಿಕ್ಸ್ ಮತ್ತು ಆರ್ಥಿಕ ಬೆಂಬಲವನ್ನು ಒದಗಿಸುವಲ್ಲಿ ಭಾಗಿಯಾಗಿರುವ ಎಲ್‌ಇಟಿ ಜಾಲವನ್ನು ಪತ್ತೆಹಚ್ಚಿದ್ದರು.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ 17 ಬಾರಿ ತಪ್ಪಿಸಿಕೊಂಡಿದ್ದ ಉಗ್ರ ಸೇರಿ 7 ಭಯೋತ್ಪಾದಕರ ಎನ್​ಕೌಂಟರ್

ಪೊಲೀಸರ ಕೈಗೆ ಸಿಕ್ಕಿಬಿದ್ದ ಐವರಲ್ಲಿ ಮೂವರು ಶ್ರೀನಗರ ನಿವಾಸಿಗಳು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯೋತ್ಪಾದಕರಿಗೆ ಆಶ್ರಯ ಮತ್ತು ಆಹಾರ ಸೇರಿದಂತೆ ಹಲವು ರೀತಿಯ ಬೆಂಬಲವನ್ನು ಒದಗಿಸಿದ ಆರೋಪದ ಮೇಲೆ ಮೊಹಮ್ಮದ್ ನಕೀಬ್ ಭಟ್, ಆದಿಲ್ ರಶೀದ್ ಭಟ್ ಮತ್ತು ಗುಲಾಮ್ ಮೊಹಮ್ಮದ್ ಮಿರ್ ಅಲಿಯಾಸ್ ಮಾಮಾ ಅವರನ್ನು ಬಂಧಿಸಲಾಗಿದೆ ಎಂದಿದ್ದಾರೆ.

ಲಷ್ಕರ್-ಎ-ತೈಬಾ ಜಾಲದ ಸಹಾಯದಿಂದ ಇತರ ರಾಜ್ಯಗಳಲ್ಲಿ ನಕಲಿ ದಾಖಲೆಗಳು ಮತ್ತು ಗುರುತಿನ ಆಧಾರದ ಮೇಲೆ ವಿದೇಶಿ ಭಯೋತ್ಪಾದಕನೊಬ್ಬ ದೇಶದ ಹೊರಗೆ ಪ್ರಯಾಣಿಸುವಲ್ಲಿ ಯಶಸ್ವಿಯಾಗಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಭಯೋತ್ಪಾದಕರು ಸುಮಾರು 16 ವರ್ಷಗಳ ಹಿಂದೆ ಭಾರತಕ್ಕೆ ನುಸುಳಿದ್ದರು. ಅವರು ಕಾಶ್ಮೀರ ಕಣಿವೆಯ ವಿವಿಧ ಜಿಲ್ಲೆಗಳಲ್ಲಿ ಸಕ್ರಿಯರಾಗಿದ್ದರು. ಇಲ್ಲಿಯವರೆಗೂ ಅವರು ಸುಮಾರು 40 ವಿದೇಶಿ ಭಯೋತ್ಪಾದಕರಿಗೆ ಸಹಾಯ ಮಾಡಿದ್ದರು. ಅವರಲ್ಲಿ ಹೆಚ್ಚಿನವರನ್ನು ಭಾರತೀಯ ಭದ್ರತಾ ಪಡೆಗಳು ಕೊಂದಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us