AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Flood: ಕೇರಳದಲ್ಲಿ ಭಾರಿ ಪ್ರವಾಹ; ಸಾವಿನ ಸಂಖ್ಯೆ 15ಕ್ಕೆ ಏರಿಕೆ, 7 ಮಂದಿ ನಾಪತ್ತೆ

ಕೇರಳದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಮಳೆ ಸಂಬಂಧಿತ ಅವಾಂತರಗಳಿಗೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. 7 ಜನರು ಇನ್ನೂ ನಾಪತ್ತೆಯಾಗಿದ್ದಾರೆ. ನದಿಗಳು ಉಕ್ಕಿ ಹರಿಯುತ್ತಿವೆ. ದಿಢೀರ್ ಪ್ರವಾಹ ಹಾಗೂ ಭೂಕುಸಿತಗಳು ಉಂಟಾಗಿದ್ದರೂ, ರಾಜ್ಯದ ಒಟ್ಟಾರೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮುಖ್ಯಮಂತ್ರಿ ವಿ. ಡಿ. ಸತೀಶನ್ ತಿಳಿಸಿದ್ದಾರೆ. ಪತ್ತನಂತಿಟ್ಟ ಜಿಲ್ಲೆಯ ಕೆಲವು ಪ್ರದೇಶಗಳು ಮಾತ್ರ ತೀವ್ರ ಆತಂಕಕ್ಕೆ ಕಾರಣವಾಗಿವೆ.

Kerala Flood: ಕೇರಳದಲ್ಲಿ ಭಾರಿ ಪ್ರವಾಹ; ಸಾವಿನ ಸಂಖ್ಯೆ 15ಕ್ಕೆ ಏರಿಕೆ, 7 ಮಂದಿ ನಾಪತ್ತೆ
Kerala FloodImage Credit source: PTI
ಸುಷ್ಮಾ ಚಕ್ರೆ
|

Updated on: Aug 03, 2026 | 4:57 PM

Share

ತಿರುವನಂತಪುರಂ, ಆಗಸ್ಟ್ 3: ಕೇರಳ (Kerala Rains) ರಾಜ್ಯಾದ್ಯಂತ ಮಳೆಗೆ ಸಂಬಂಧಿಸಿದ ಅವಾಂತರಗಳಿಂದಾಗಿ 15 ಜನರು ಮೃತಪಟ್ಟಿದ್ದು, 7 ಜನರು ನಾಪತ್ತೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ವಿ. ಡಿ. ಸತೀಶನ್ ಇಂದು ತಿಳಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸತೀಶನ್, ರಾಜ್ಯ ಸರ್ಕಾರವು ರಾಜ್ಯಾದ್ಯಂತ 316 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದು, ಇದುವರೆಗೂ 11,018 ಜನರಿಗೆ ಆಶ್ರಯ ನೀಡಲಾಗಿದೆ ಎಂದು ತಿಳಿಸಿದರು.

ಸಾವುಗಳ ಬಗ್ಗೆ ಮಾಹಿತಿ ನೀಡಿದ ಕೇರಳದ ಸಿಎಂ, ಕೊಟ್ಟಾಯಂ ಜಿಲ್ಲೆಯಿಂದ 3 ಸಾವುಗಳು ವರದಿಯಾಗಿವೆ ಎಂದು ಹೇಳಿದ್ದಾರೆ. ಮೃತರ ಪೈಕಿ ಸಣ್ಣ ಮಗುವೂ ಸೇರಿದೆ. ಕೊಟ್ಟಾಯಂನಲ್ಲಿ ಮೃತಪಟ್ಟ ಮೂವರಲ್ಲಿ ಇಬ್ಬರು ಪೂಂಜಾರ್ ಶಾಸನಸಭಾ ಕ್ಷೇತ್ರದವರಾಗಿದ್ದಾರೆ. ರಾಜ್ಯದ ಇತರ ಜಿಲ್ಲೆಗಳಲ್ಲೂ ಮಳೆಯಿಂದಾಗಿ ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಎರ್ನಾಕುಲಂನಲ್ಲಿ ಇಬ್ಬರು ಮೃತಪಟ್ಟಿದ್ದರೆ, ಇಡುಕ್ಕಿ ಮತ್ತು ಮೂವಾಟ್ಟುಪುಳ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಕೊಲ್ಲಂನಲ್ಲಿ 2, ಮಲಪ್ಪುರಂನಲ್ಲಿ 4 ಮತ್ತು ಕಣ್ಣೂರಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಕೋಝಿಕ್ಕೋಡ್‌ನಿಂದಲೂ ಒಂದು ಸಾವು ವರದಿಯಾಗಿದೆ.

ಇದನ್ನೂ ಓದಿ: ಕೊಡಗಿನಲ್ಲಿ ಮುಂದುವರಿದ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!

ಕೇರಳದಲ್ಲಿ ನಾಪತ್ತೆಯಾಗಿರುವ 7 ಜನರ ಪೈಕಿ ಇಬ್ಬರು ಕೊಲ್ಲಂ, ಇಬ್ಬರು ಕಣ್ಣೂರು ಮತ್ತು ಒಬ್ಬರು ಮಲಪ್ಪುರಂ ಜಿಲ್ಲೆಯವರಾಗಿದ್ದಾರೆ ಎಂದು ಸಿಎಂ ಸತೀಶನ್ ತಿಳಿಸಿದ್ದಾರೆ. ಇದಲ್ಲದೆ ಇಡುಕ್ಕಿ ಮತ್ತು ಮೂವಾಟ್ಟುಪುಳದಿಂದ ತಲಾ ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಬೋಟ್‌ಗಳು ಹಾಗೂ ಹೆಲಿಕಾಪ್ಟರ್ ನಿಯೋಜನೆ:

ರಕ್ಷಣಾ ಕಾರ್ಯಾಚರಣೆಯನ್ನು ಬಲಪಡಿಸಲು ಕೊಲ್ಲಂನಿಂದ ಚೆಂಗನ್ನೂರಿನವರೆಗೆ 14 ಮೀನುಗಾರಿಕಾ ದೋಣಿಗಳನ್ನು ನಿಯೋಜಿಸಲಾಗಿದೆ. ತಮಿಳುನಾಡಿನ ಸುಲೂರ್‌ನಿಂದ ಬಂದಿರುವ ಎರಡು ಹೆಲಿಕಾಪ್ಟರ್‌ಗಳನ್ನು ವೈಮಾನಿಕ ಕಾರ್ಯಾಚರಣೆಗಾಗಿ ತಿರುವನಂತಪುರಂನಲ್ಲಿ ಸಜ್ಜಾಗಿಡಲಾಗಿದೆ. ತೀವ್ರ ಪೀಡಿತ ಪ್ರದೇಶಗಳಲ್ಲಿ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (NDRF) ತಂಡಗಳನ್ನು ನಿಯೋಜಿಸಲಾಗಿದ್ದು, ಅರಕ್ಕೋಣಂನಿಂದ ಹೆಚ್ಚುವರಿ ಪಡೆಯನ್ನು ಕರೆಸಲಾಗುತ್ತಿದೆ. ಪರಿಸ್ಥಿತಿ ಕೈಮೀರಿದರೆ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಮತ್ತು ರಕ್ಷಣಾ ಭದ್ರತಾ ಪಡೆಯನ್ನು (DSC) ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕೇರಳಕ್ಕೆ ಭಾರಿ ಮಳೆಯ ಮುನ್ಸೂಚನೆ:

ಭಾರತೀಯ ಹವಾಮಾನ ಇಲಾಖೆ (IMD) ಆಗಸ್ಟ್ 3 ಮತ್ತು ಆಗಸ್ಟ್ 6ರಂದು ಕೇರಳದಲ್ಲಿ ಗಾಳಿಸಹಿತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿತ್ತು. ಗಾಳಿಯ ವೇಗ ಗಂಟೆಗೆ 50 ಕಿ.ಮೀವರೆಗೆ ತಲುಪಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ, ರೈಲು ಸಂಚಾರ ಸ್ಥಗಿತ!

ಆಗಸ್ಟ್ 2 ಮತ್ತು ಆಗಸ್ಟ್ 3ರಂದು ವಿಶೇಷವಾಗಿ ಕೇರಳ-ಕರ್ನಾಟಕ-ಲಕ್ಷದ್ವೀಪ ಕರಾವಳಿ ಪ್ರದೇಶಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ. ಸಮುದ್ರದ ಕೊರೆತ ಹೆಚ್ಚಿರಲಿದ್ದು, ಕರಾವಳಿ ಪ್ರದೇಶಗಳಲ್ಲಿ ಗಾಳಿಯ ವೇಗ ಗಂಟೆಗೆ 60 ಕಿ.ಮೀ.ವರೆಗೆ ತಲುಪಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ 8 ಲಕ್ಷ ಪರಿಹಾರ ಹಾಗೂ ಶವಸಂಸ್ಕಾರದ ವೆಚ್ಚಕ್ಕಾಗಿ ತಕ್ಷಣವೇ 10,000 ರೂ. ಒದಗಿಸಲಾಗುವುದು. ಭೂಕುಸಿತದಲ್ಲಿ ಸಂಪೂರ್ಣ ಮನೆ ಕಳೆದುಕೊಂಡ ಕುಟುಂಬಗಳಿಗೆ ನೀಡಲಾಗುತ್ತಿದ್ದ ಹಣವನ್ನು 10 ಲಕ್ಷದಿಂದ 12 ಲಕ್ಷಕ್ಕೆ ಏರಿಕೆ ಮಾಡಲಾಗಿದೆ ಎಂದು ಕೇರಳ ಸರ್ಕಾರ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us