ಕೇರಳದಲ್ಲಿ ಭಾರೀ ಮಳೆ, ಭೂಕುಸಿತ – ಪ್ರವಾಹಕ್ಕೆ ಮೂವರ ಸಾವು: ಇಡುಕ್ಕಿ ಸೇರಿ ಹಲವು ಜಿಲ್ಲೆಗಳಲ್ಲಿ ಅವಾಂತರ

ಕೇರಳದಲ್ಲಿ ಸುರಿದ ನಿರಂತರ ಭಾರಿ ಮಳೆಯಿಂದ ಶನಿವಾರ ಇಡುಕ್ಕಿ, ಕೊಟ್ಟಾಯಂ, ಪತ್ತನಂತಿಟ್ಟ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದೆ. ಇಡುಕ್ಕಿ ಹಾಗೂ ಕೊಟ್ಟಾಯಂನಲ್ಲಿ ಸಂಭವಿಸಿದ ಪ್ರತ್ಯೇಕ ಭೂಕುಸಿತಗಳಲ್ಲಿ ಮೂವರು ಮೃತಪಟ್ಟಿದ್ದು, ಹಲವು ಮಂದಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಕೇರಳದಲ್ಲಿ ಭಾರೀ ಮಳೆ, ಭೂಕುಸಿತ - ಪ್ರವಾಹಕ್ಕೆ ಮೂವರ ಸಾವು: ಇಡುಕ್ಕಿ ಸೇರಿ ಹಲವು ಜಿಲ್ಲೆಗಳಲ್ಲಿ ಅವಾಂತರ
ಕೇರಳದಲ್ಲಿ ಭಾರೀ ಮಳೆ, ಭೂಕುಸಿತ - ಪ್ರವಾಹಕ್ಕೆ ಮೂವರು ಬಲಿ
Image Credit source: TV9 Network

Updated on: Aug 01, 2026 | 11:07 AM

ಮುಖ್ಯಾಂಶಗಳು

  • ಕೇರಳದಲ್ಲಿ ಭೂಕುಸಿತಕ್ಕೆ ಮೂವರು ಬಲಿ
  • ಹಲವು ಜಿಲ್ಲೆಗಳಲ್ಲಿ ಪ್ರವಾಹದ ತೀವ್ರ ಅವಾಂತರ
  • ಎಂಟು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಇಡುಕ್ಕಿ, ಆಗಸ್ಟ್ 1: ಕೇರಳದಲ್ಲಿ ಮಳೆ (Kerala Rains) ಅಬ್ಬರ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಇಡುಕ್ಕಿ ಹಾಗೂ ಕೊಟ್ಟಾಯಂ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರತ್ಯೇಕ ಭೂಕುಸಿತಗಳಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಮಣ್ಣಿನಡಿ ಸಿಲುಕಿಕೊಂಡಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಡುಕ್ಕಿ ಜಿಲ್ಲೆಯ ಕೂಡಯತ್ತೂರು ಸಮೀಪದ ಆದೂರ್ಮಲ ಪ್ರದೇಶದಲ್ಲಿ ಶನಿವಾರ ಮುಂಜಾನೆ ಭೂಕುಸಿತ ಸಂಭವಿಸಿ ಸುಮತಿ ಎಂಬುವವರು ಮೃತಪಟ್ಟಿದ್ದಾರೆ. ಭೂಕುಸಿತದ ಅವಶೇಷಗಳು ಮನೆಯ ಮೇಲೆ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸ್ಥಳೀಯರು ಅವರ ಪತಿ ಹಾಗೂ ಪುತ್ರನನ್ನು ರಕ್ಷಿಸಿದ್ದು, ಇಬ್ಬರಿಗೂ ಗಾಯಗಳಾಗಿವೆ. ಅವರನ್ನು ತೊಡುಪುಳದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎನ್‌ಡಿಆರ್‌ಎಫ್, ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ, ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಸುಮತಿ ಅವರ ಮೃತದೇಹ ಪತ್ತೆಯಾಗಿದೆ. ಭೂಕುಸಿತದಿಂದ ಕುಟುಂಬದ ಮನೆ ಸಂಪೂರ್ಣ ಹಾನಿಗೊಳಗಾಗಿದೆ.

ಕೊಟ್ಟಾಯಂನಲ್ಲೂ ಭಾರೀ ಭೂಕುಸಿತ

ಇದೇ ವೇಳೆ ಕೊಟ್ಟಾಯಂ ಜಿಲ್ಲೆಯ ಪೂಂಜಾರ್‌ನ ಪಯ್ಯನಿತೊಟ್ಟಂನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಜೋಹ್ನಿ ಅವರ ಪುತ್ರ ಜೋಸೆಫ್ ಮೃತಪಟ್ಟಿದ್ದಾರೆ. ಭೂಕುಸಿತದ ಅವಶೇಷಗಳಡಿ ಅವರ ತಾಯಿ ಸಿಲುಕಿರುವ ಶಂಕೆಯಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ. ಜೋಸೆಫ್ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಗಾಯಗಳಿಂದ ಮೃತಪಟ್ಟಿದ್ದಾರೆ.

ಇಡುಕ್ಕಿಯ ವಾಗಮನ್​ನಲ್ಲಿ ಭೂಕುಸಿತ

ಇಡುಕ್ಕಿ ಜಿಲ್ಲೆಯ ವಾಗಮನ್ ಪ್ರದೇಶದಲ್ಲೂ ಮತ್ತೊಂದು ಭೂಕುಸಿತ ಸಂಭವಿಸಿದ್ದು, ವೈಕಂ ಮೂಲದ ಪ್ರಭಾಕರನ್ ನಾಯರ್ ಮೃತಪಟ್ಟಿದ್ದಾರೆ. ಸಂಬಂಧಿಕರ ಮನೆಯಲ್ಲಿ ಮಲಗಿದ್ದ ವೇಳೆ ಭೂಕುಸಿತ ಸಂಭವಿಸಿದ್ದು, ಹಲವು ಗಂಟೆಗಳ ಶೋಧದ ಬಳಿಕ ಅವರ ಮೃತದೇಹ ಪತ್ತೆಯಾಗಿದೆ.

ಪ್ರವಾಹ, ಭೂಕುಸಿತದಿಂದ ಸಂಚಾರ ಅಸ್ತವ್ಯಸ್ತ

ಇಡುಕ್ಕಿಯ ಹಲವು ಪ್ರದೇಶಗಳಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ಉಪ್ಪುತಾರದಲ್ಲಿ ನಿಲ್ಲಿಸಿದ್ದ ಪೊಲೀಸ್ ಜೀಪ್ ಭೂಕುಸಿತಕ್ಕೆ ಸಿಲುಕಿ ಹಾನಿಯಾಗಿದೆ. ಪುಲ್ಲಕಯಾರ್ ನದಿ ಉಕ್ಕಿ ಹರಿದ ಪರಿಣಾಮ ಕೊಕ್ಕಯಾರ್‌ನ ತಗ್ಗು ಸೇತುವೆ ಮುಳುಗಿದ್ದು, ಸುತ್ತಮುತ್ತಲಿನ ಸುಮಾರು ಆರು ಮನೆಗಳಿಗೆ ನೀರು ನುಗ್ಗಿದೆ. ಅಲ್ಲಿನ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಕಟ್ಟಪ್ಪನ-ವಳವಾಡ ರಸ್ತೆಯಲ್ಲೂ ಭೂಕುಸಿತದಿಂದ ಸಂಚಾರ ಸ್ಥಗಿತಗೊಂಡಿದೆ. ವಂಡಿಪೆರಿಯಾರ್‌ನ ಚೊಟ್ಟೂಪಾರ ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದರಿಂದ ರಾಷ್ಟ್ರೀಯ ಹೆದ್ದಾರಿ 183ರ ಕೆಲ ಭಾಗಗಳು ಜಲಾವೃತಗೊಂಡಿವೆ. ನೆಲ್ಲಿಮಲದಲ್ಲೂ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ.

ಕೊಟ್ಟಾಯಂ, ಪತ್ತನಂತಿಟ್ಟದಲ್ಲೂ ಪ್ರವಾಹ

ಕೊಟ್ಟಾಯಂ ಜಿಲ್ಲೆಯ ಎರಟ್ಟೂಪೆಟ್ಟ, ಕಂಜಿರಪ್ಪಳ್ಳಿ, ಕೂಟ್ಟಿಕ್ಕಲ್​ನಲ್ಲಿ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಎರಟ್ಟೂಪೆಟ್ಟ ಪಟ್ಟಣದಲ್ಲಿ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು, ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಹಲವು ಮನೆಗಳಿಗೆ ನೀರು ನುಗ್ಗಿದ್ದು, ರಕ್ಷಣಾ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಮನೆಗಳ ಮೇಲಂತಸ್ತಿನಲ್ಲಿ ಸಿಲುಕಿದ್ದವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ.

ಕೂಟ್ಟಿಕ್ಕಲ್ ಮತ್ತು ಮುಂಡಕ್ಕಯಂನಲ್ಲಿ ಮಣಿಮಲ ಹಾಗೂ ಪುಲ್ಲಕಯಾರ್ ನದಿಗಳು ಉಕ್ಕಿ ಹರಿದ ಪರಿಣಾಮ ತಗ್ಗು ಸೇತುವೆಗಳು ಮುಳುಗಿವೆ. ಪತ್ತನಂತಿಟ್ಟ ಜಿಲ್ಲೆಯ ರನ್ನಿ ಸೇರಿದಂತೆ ಹಲವು ಪ್ರದೇಶಗಳಲ್ಲೂ ಪ್ರವಾಹದ ಆತಂಕ ಎದುರಾಗಿದೆ. ಪಂಪಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಹಲವು ಪ್ರದೇಶಗಳು ಸಂಪರ್ಕ ಕಳೆದುಕೊಂಡಿವೆ. ರಕ್ಷಣಾ ಕಾರ್ಯಾಚರಣೆಗೆ ದೋಣಿಗಳನ್ನು ನಿಯೋಜಿಸಲಾಗಿದ್ದು, ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ.

ಕೇಂದ್ರ ಕೇರಳದ ಹೊರತಾಗಿಯೂ ಕೊಲ್ಲಂ, ಕೋಝಿಕ್ಕೋಡ್, ಮಲಪ್ಪುರಂ ಹಾಗೂ ಪಾಲಕ್ಕಾಡ್ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಪ್ರವಾಹ ಮತ್ತು ಸಣ್ಣ ಪ್ರಮಾಣದ ಭೂಕುಸಿತ ವರದಿಯಾಗಿದೆ.

ಕೇರಳದ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್

ಭಾರಿ ಮಳೆಯ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಕೇರಳದ ಹಲವು ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ. ಪತ್ತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಮಲಪ್ಪುರಂ, ಕೋಝಿಕ್ಕೋಡ್, ವಯನಾಡು, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಎರ್ನಾಕುಳಂ, ತ್ರಿಶೂರ್ ಹಾಗೂ ಪಾಲಕ್ಕಾಡ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us