ಕೊಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣ; ಸಂಜಯ್ ರಾಯ್ ಮತ್ತು ಇತರ 6 ಜನರ ಪಾಲಿಗ್ರಾಫ್ ಪರೀಕ್ಷೆ ಆರಂಭ

ಕೊಲ್ಕತ್ತಾದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್, ಪ್ರಮುಖ ಆರೋಪಿ ಸಂಜಯ್ ರಾಯ್ ಸೇರಿದಂತೆ 7 ಜನರ ಪಾಲಿಗ್ರಾಫ್ ಪರೀಕ್ಷೆ ನಡೆಯುತ್ತಿದೆ. ಸಿಬಿಐ ತನಿಖೆಯನ್ನು ಬಿರುಸುಗೊಳಿಸಿದೆ.

ಕೊಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣ; ಸಂಜಯ್ ರಾಯ್ ಮತ್ತು ಇತರ 6 ಜನರ ಪಾಲಿಗ್ರಾಫ್ ಪರೀಕ್ಷೆ ಆರಂಭ
ಕೊಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣ ವಿರೋಧಿಸಿ ಪ್ರತಿಭಟನೆ

Updated on: Aug 24, 2024 | 3:23 PM

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆರ್‌ಜಿ ಕರ್‌ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಅರೆಬೆತ್ತಲೆ ಶವ ಪತ್ತೆಯಾದ ಕೊಲ್ಕತ್ತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂದೀಪ್ ಘೋಷ್ ಸೇರಿದಂತೆ 7 ಜನರ ಪಾಲಿಗ್ರಾಫ್ ಪರೀಕ್ಷೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಾರಂಭಿಸಿದೆ. ಈ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಸಿಬಿಐ ಸತತ 8 ದಿನಗಳಲ್ಲಿ 100 ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ಇಂದು ಮುಂಜಾನೆ ಅವರು ಒಂಬತ್ತನೇ ದಿನಕ್ಕೆ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಿದ್ದರು.

ಸರ್ಕಾರಿ ಸ್ವಾಮ್ಯದ ಆರೋಗ್ಯ ಕೇಂದ್ರದಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸಂಜಯ್ ರಾಯ್, ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಇತರ ನಾಲ್ವರ ಪಾಲಿಗ್ರಾಫ್ ಪರೀಕ್ಷೆಗಳು ಅಥವಾ ಸುಳ್ಳು ಪತ್ತೆ ಪರೀಕ್ಷೆಗಳು ಇಂದು ಆರಂಭಗೊಂಡಿವೆ.

ಇಂದು ಸಂದೀಪ್ ಘೋಷ್ ಕೊಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ಕೇಂದ್ರ ಸರ್ಕಾರಿ ಕಚೇರಿಗಳ ಸಂಕೀರ್ಣ (ಸಿಜಿಒ) ಸಂಕೀರ್ಣದಲ್ಲಿರುವ ಸಿಬಿಐ ವಿಶೇಷ ಅಪರಾಧ ವಿಭಾಗಕ್ಕೆ ಆಗಮಿಸಿದರು. ಕೊಲ್ಕತ್ತಾ ಹೈಕೋರ್ಟ್‌ನ ಆದೇಶದಂತೆ ಆರ್‌ಜಿ ಕರ್‌ ಆಸ್ಪತ್ರೆಯಲ್ಲಿ ನಡೆದ ಆರ್ಥಿಕ ಅವ್ಯವಹಾರಗಳ ಬಗ್ಗೆ ಎಲ್ಲಾ ದಾಖಲೆಗಳನ್ನು ಎಸ್‌ಐಟಿ ಕೇಂದ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಲಾಗಿದೆ ಎಂದು ಕೊಲ್ಕತ್ತಾ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಕೇಸ್; ಮಮತಾ ಬ್ಯಾನರ್ಜಿ ರಾಜೀನಾಮೆಗೆ ಬಿಜೆಪಿ ಆಗ್ರಹ

ಕೊಲ್ಕತ್ತಾ ಅತ್ಯಾಚಾರ- ಕೊಲೆ ಪ್ರಕರಣದ ಪ್ರಮುಖ ಮುಖ್ಯಾಂಶಗಳಿವು:

  1. ಕಳೆದ ವಾರ ಕೊಲ್ಕತ್ತಾ ಹೈಕೋರ್ಟ್ ಈ ಹಿಂದೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನಿರ್ವಹಿಸುತ್ತಿದ್ದ ಸಂದೀಪ್ ಘೋಷ್ ಅವರನ್ನು ಒಳಗೊಂಡ ಹಣಕಾಸು ಅಕ್ರಮಗಳ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿತು.
  2. ಸಂಜಯ್ ರಾಯ್ ಅವರ ಪಾಲಿಗ್ರಾಫ್ ಪರೀಕ್ಷೆಯನ್ನು ಇಂದು ಜೈಲಿನಲ್ಲಿ ನಡೆಸಲಾಗುವುದು. ಆದರೆ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಘಟನೆಯ ರಾತ್ರಿ ಕರ್ತವ್ಯದಲ್ಲಿದ್ದ ನಾಲ್ವರು ವೈದ್ಯರು ಮತ್ತು ನಾಗರಿಕ ಸ್ವಯಂಸೇವಕ ಸೇರಿದಂತೆ ಉಳಿದ 5 ಮಂದಿಯನ್ನು ಸಿಬಿಐ ಕಚೇರಿಯಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ.
  3. ಸಂದೀಪ್ ಘೋಷ್ ಮತ್ತು ಘಟನೆಗೆ ಸಂಬಂಧಿಸಿದ ಇತರ ಐವರ ಪಾಲಿಗ್ರಾಫ್ ಪರೀಕ್ಷೆ ನಡೆಸಲು ಕೊಲ್ಕತ್ತಾ ಹೈಕೋರ್ಟ್ ಸಿಬಿಐಗೆ ಅನುಮತಿ ನೀಡಿದೆ.
  4. ದೆಹಲಿಯ ಕೇಂದ್ರೀಯ ವಿಧಿವಿಜ್ಞಾನ ಪ್ರಯೋಗಾಲಯದ (ಸಿಎಫ್‌ಎಸ್‌ಎಲ್) ಪಾಲಿಗ್ರಾಫ್ ತಜ್ಞರ ತಂಡವು ಈ ಪರೀಕ್ಷೆಗಳನ್ನು ನಡೆಸಲು ಕೊಲ್ಕತ್ತಾಕ್ಕೆ ಹಾರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
  5. ಫೆಡರಲ್ ಏಜೆನ್ಸಿ ತನಿಖೆಯನ್ನು ಕೈಗೆತ್ತಿಕೊಳ್ಳುವ ಹೊತ್ತಿಗೆ ಅಪರಾಧದ ಸ್ಥಳವನ್ನು ಬದಲಾಯಿಸಿದ್ದರಿಂದ ಸ್ಥಳೀಯ ಪೊಲೀಸರಿಂದ ಸ್ನಾತಕೋತ್ತರ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ಮುಚ್ಚಿಹಾಕುವ ಪ್ರಯತ್ನ ನಡೆದಿದೆ ಎಂದು ಸಿಬಿಐ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
  6. ಆರ್​ಜಿ ಕರ್ ಆಸ್ಪತ್ರೆಯ ಮಾಜಿ ಉಪ ಅಧೀಕ್ಷಕ ಅಖ್ತರ್ ಅಲಿ ಅವರು ಸಂದೀಪ್ ಘೋಷ್ ವಿರುದ್ಧ ಆರ್ಥಿಕ ದುರುಪಯೋಗ ಮತ್ತು ಅನೈತಿಕ ಆಚರಣೆಗಳನ್ನು ಆರೋಪಿಸಿ ಅರ್ಜಿ ಸಲ್ಲಿಸಿದ್ದರು. ತನಿಖೆಯ ಪ್ರಗತಿ ವರದಿಯನ್ನು ಸಲ್ಲಿಸಲು ಸುಪ್ರೀಂ ಕೋರ್ಟ್ ಸಿಬಿಐಗೆ 3 ವಾರಗಳ ಕಾಲಾವಕಾಶ ನೀಡಿದ್ದು, ಅದನ್ನು ಸೆಪ್ಟೆಂಬರ್ 17ರಂದು ಸಲ್ಲಿಸಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us