ಬ್ಯಾಡ್ಮಿಂಟನ್ ಫೈನಲ್ಸ್ನಲ್ಲಿ ಸೋಲು: ಗಾಳಿಯಲ್ಲಿ ಗುಂಡು ಹಾರಿಸಿದ ಉದ್ಯಮಿ ಬಂಧನ
ಕರ್ನೂಲ್ನಲ್ಲಿ ನಡೆದ ಬ್ಯಾಡ್ಮಿಂಟನ್ ಫೈನಲ್ನಲ್ಲಿ ತಮ್ಮ ತಂಡ ಸೋತ ಆಕ್ರೋಶದಲ್ಲಿ, ರಿಯಲ್ ಎಸ್ಟೇಟ್ ಉದ್ಯಮಿ ಕೌಶಿಕ್ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಆತಂಕ ಸೃಷ್ಟಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಇವರ ಶಸ್ತ್ರಾಸ್ತ್ರ ಪರವಾನಗಿಯನ್ನು ರದ್ದುಗೊಳಿಸಲು ಪೊಲೀಸರು ಶಿಫಾರಸು ಮಾಡಿದ್ದಾರೆ. ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಕರ್ನೂಲ್,ಜುಲೈ 27: ‘ಕರ್ನೂಲ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್’ ಪಂದ್ಯಾವಳಿಯ ಫೈನಲ್ನಲ್ಲಿ ತಮ್ಮ ತಂಡ ಸೋಲನ್ನನುಭವಿಸಿದ ಆಕ್ರೋಶದಲ್ಲಿ, ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು(Firing) ಹಾರಿಸಿ ತೀವ್ರ ಆತಂಕ ಸೃಷ್ಟಿಸಿದ ಘಟನೆ ಭಾನುವಾರ ಸಂಜೆ ನಡೆದಿದೆ. ಕರ್ನೂಲ್ನಲ್ಲಿ ನಡೆದ ಬ್ಯಾಡ್ಮಿಂಟನ್ ಫೈನಲ್ ಪಂದ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕೌಶಿಕ್ ಅವರ ತಂಡವು ಸೋಲನುಭವಿಸಿತು. ಮಾಜಿ ಸಂಸದ ಟಿ.ಜಿ. ವೆಂಕಟೇಶ್ ಸೇರಿದಂತೆ ನೂರಾರು ಪ್ರೇಕ್ಷಕರು ಪಂದ್ಯ ವೀಕ್ಷಿಸುತ್ತಿದ್ದರು. ಪಂದ್ಯದ ಸೋಲನ್ನು ಸಹಿಸಲಾಗದ ಕೌಶಿಕ್, ತೀವ್ರ ನಿರಾಶೆ ಹಾಗೂ ಅವಮಾನದಿಂದ ತಮ್ಮ ಪರವಾನಗಿ ಪಡೆದ ಬಂದೂಕಿನಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದರು.
ಏಕಾಏಕಿ ಗುಂಡಿನ ಶಬ್ದ ಕೇಳಿಬರುತ್ತಿದ್ದಂತೆ ಮೈದಾನದಲ್ಲಿದ್ದ ಪ್ರೇಕ್ಷಕರು ಹಾಗೂ ಸಂಘಟಕರು ಪ್ರಾಣಭಯದಿಂದ ಓಡಲಾರಂಭಿಸಿದರು. ಈ ವೇಳೆ ಉಂಟಾದ ಗೊಂದಲದಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮುಖ್ಯ ಅತಿಥಿಯಾಗಿದ್ದ ಮಾಜಿ ಸಂಸದರ ಮೇಲೆ ದಾಳಿ ನಡೆದಿದೆಯೇ ಎಂದು ಆರಂಭದಲ್ಲಿ ಜನ ಆತಂಕಗೊಂಡಿದ್ದರು. ಆದರೆ, ಕೌಶಿಕ್ ಸೋಲಿನ ನಿರಾಶೆಯಿಂದ ಮಾತ್ರ ಗಾಳಿಯಲ್ಲಿ ಗುಂಡು ಹಾರಿಸಿದ್ದು ಎಂದು ತಿಳಿದುಬಂದ ನಂತರ ಸಾರ್ವಜನಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟರು.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿ ಕೌಶಿಕ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಸೋಲಿನ ಆಕ್ರೋಶದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಆತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಡಿಎಸ್ಪಿ ರಾಘವೇಂದ್ರ ತಿಳಿಸಿದ್ದಾರೆ. ಸಾರ್ವಜನಿಕ ಪ್ರದೇಶದಲ್ಲಿ ಭೀತಿ ಹುಟ್ಟಿಸಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಆರೋಪಿ ಕೌಶಿಕ್ ಅವರ ಶಸ್ತ್ರಾಸ್ತ್ರ ಪರವಾನಗಿಯನ್ನು ಶಾಶ್ವತವಾಗಿ ರದ್ದುಗೊಳಿಸಲು ಪೊಲೀಸರು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುತ್ತಿದ್ದಾರೆ.
ಮತ್ತಷ್ಟು ಓದಿ: ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ: ಪರ-ವಿರೋಧ ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ
ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯ ಪ್ರಕಾರ, ಆತ್ಮರಕ್ಷಣೆಗಾಗಿ ನೀಡಲಾಗುವ ಪರವಾನಗಿ ಶಸ್ತ್ರಾಸ್ತ್ರಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸುವುದು, ಆಕ್ರೋಶ ಅಥವಾ ಆಚರಣೆಯ ಭಾಗವಾಗಿ ಗಾಳಿಯಲ್ಲಿ ಗುಂಡು ಹಾರಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಕೃತ್ಯಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




