ಮಣಿಪುರದ ಬಗ್ಗೆ ಪ್ರಧಾನಿ ಮೋದಿ ವಿಸ್ತೃತ ಹೇಳಿಕೆ ನೀಡಲಿ: ಸಂಸತ್​​ನಲ್ಲಿ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ಮಣಿಪುರ ಹೊತ್ತಿ ಉರಿಯುತ್ತಿದೆ, ಮಹಿಳೆಯರ ಮೇಲೆ ಅತ್ಯಾಚಾರ, ಬೆತ್ತಲೆ ಮೆರವಣಿಗೆ, ಭೀಕರ ಹಿಂಸಾಚಾರ ನಡೆಯುತ್ತಿದೆ. ಆದರೆ ಪ್ರಧಾನಿಯವರು ಇವತ್ತಿನವರೆಗೂ ಮೌನವಾಗಿದ್ದರು.ಸಂಸತ್ತಿನ ಹೊರಗೆ ಮಾತ್ರ ಹೇಳಿಕೆ ನೀಡಿದ್ದಾರೆ ಎಂದು ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ ಹೇಳಿದ್ದಾರೆ.

ಮಣಿಪುರದ ಬಗ್ಗೆ ಪ್ರಧಾನಿ ಮೋದಿ ವಿಸ್ತೃತ ಹೇಳಿಕೆ ನೀಡಲಿ: ಸಂಸತ್​​ನಲ್ಲಿ ಮಲ್ಲಿಕಾರ್ಜುನ ಖರ್ಗೆ ಒತ್ತಾಯ
ಮಲ್ಲಿಕಾರ್ಜುನ ಖರ್ಗೆ
ರಶ್ಮಿ ಕಲ್ಲಕಟ್ಟ

Updated on: Jul 20, 2023 | 5:24 PM

ದೆಹಲಿ ಜುಲೈ 20:ಇಬ್ಬರು ಕುಕಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವಿಡಿಯೊ ವೈರಲ್ ಆದ ನಂತರ ಮಣಿಪುರದಲ್ಲಿ (Manipur) ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮಾತನಾಡಿದ್ದಾರೆ. ಏತನ್ಮಧ್ಯೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಮೋದಿ ಸಂಸತ್​​ನಲ್ಲಿ ಈ ಬಗ್ಗೆ ವಿಸ್ತೃತ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. “ಮಣಿಪುರ ಹೊತ್ತಿ ಉರಿಯುತ್ತಿದೆ, ಮಹಿಳೆಯರ ಮೇಲೆ ಅತ್ಯಾಚಾರ, ಬೆತ್ತಲೆ ಮೆರವಣಿಗೆ, ಭೀಕರ ಹಿಂಸಾಚಾರ ನಡೆಯುತ್ತಿದೆ. ಆದರೆ ಪ್ರಧಾನಿಯವರು ಇವತ್ತಿನವರೆಗೂ ಮೌನವಾಗಿದ್ದರು. ಸಂಸತ್ತಿನ ಹೊರಗೆ ಮಾತ್ರ ಹೇಳಿಕೆ ನೀಡಿದ್ದಾರೆ ಎಂದು ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ ಹೇಳಿದ್ದಾರೆ.

ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಕೂಡಲೇ ರಾಜೀನಾಮೆ ನೀಡಬೇಕು. ಈಶಾನ್ಯ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಖರ್ಗೆ ಒತ್ತಾಯಿಸಿದರು.


ಸಂಸತ್ತಿನ ಮುಂಗಾರು ಅಧಿವೇಶನವು ಮಣಿಪುರ ಹಿಂಸಾಚಾರದ ಬಗ್ಗೆ ಗದ್ದಲದೊಂದಿಗೆ ಪ್ರಾರಂಭವಾಯಿತು, ಉಭಯ ಸದನಗಳನ್ನು ಸೋಮವಾರ ದಿನದ ಮಟ್ಟಿಗೆ ಮುಂದೂಡಲಾಯಿತು. ಲೋಕಸಭೆಯು ಮಧ್ಯಾಹ್ನ 2 ಗಂಟೆಗೆ ಮುಗಿಯುತ್ತಿದ್ದಂತೆ ಹಲವು ವಿರೋಧ ಪಕ್ಷದ ನಾಯಕರು ‘ಮಣಿಪುರ ಮಣಿಪುರ’ ಮತ್ತು ‘ಮಣಿಪುರ ಉರಿಯುತ್ತಿದೆ’ ಎಂಬ ಘೋಷಣೆಗಳನ್ನು ಕೂಗುತ್ತಿದ್ದರು.

ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ; ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವು ಮಾಡುತ್ತೇವೆ: ಸುಪ್ರೀಂಕೋರ್ಟ್

ಮಣಿಪುರ ಕುರಿತು ಪ್ರಧಾನಿ ಮೋದಿ ಹೇಳಿಕೆ

ಸಂಸತ್ ಅಧಿವೇಶನದ ಮೊದಲು, ಮಣಿಪುರದ ಪರಿಸ್ಥಿತಿಯ ಮಾತನಾಡಿದ ಮೋದಿ, “ಇದು ಯಾವುದೇ ಸಮಾಜಕ್ಕೆ ನಾಚಿಕೆಗೇಡಿನ ಘಟನೆ.. ಇದನ್ನು ಯಾರು ಮಾಡಿದರು ಮತ್ತು ಯಾರು ಹೊಣೆ ಎಂಬುದು ಮತ್ತೊಂದು ವಿಷಯ. ಆದರೆ ಇದು ನಮ್ಮ ದೇಶಕ್ಕೆ ನಾಚಿಕೆಗೇಡನ್ನುಂಟು ಮಾಡಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಬಿಗಿಗೊಳಿಸುವಂತೆ ನಾನು ಎಲ್ಲ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಅದು ರಾಜಸ್ಥಾನ, ಛತ್ತೀಸ್‌ಗಢ ಅಥವಾ ಮಣಿಪುರವೇ ಆಗಿರಲಿ… ಮಹಿಳೆಯ ಗೌರವದ ವಿಷಯವು ಎಲ್ಲ ರಾಜಕೀಯಕ್ಕಿಂತ ಮಿಗಿಲಾಗಿದೆ ಎಂದಿದ್ದಾರೆ.

ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ

ಮೇ 4 ರಂದು ಇಬ್ಬರು ಮಹಿಳೆಯರನ್ನು  ಕೆಲವು ಪುರುಷರು ಬೆತ್ತಲೆಯಾಗಿ ಮೆರವಣಿಗೆ ಮಾಡುವುದನ್ನು ತೋರಿಸುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಗುರುವಾರ ಬಂಧಿಸಲಾಗಿದೆ. ಹಸಿರು ಟೀ ಶರ್ಟ್ ಧರಿಸಿ ಮಹಿಳೆಯನ್ನು ಹಿಡಿದಿದ್ದ ಪ್ರಮುಖ ಆರೋಪಿಯನ್ನು ಸರಿಯಾದ ಗುರುತಿನ ನಂತರ ಕಾರ್ಯಾಚರಣೆಯಲ್ಲಿ ಇಂದು ಬೆಳಿಗ್ಗೆ ಬಂಧಿಸಲಾಗಿದೆ. ಈತನ ಹೆಸರು  ಹುಯಿರೆಮ್ ಹೆರೋಡಾಸ್ ಮೈಟೆಯಿ (32 ವರ್ಷ) ಎಂದು ಸರ್ಕಾರಿ ಮೂಲಗಳು ಹೇಳಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:07 pm, Thu, 20 July 23

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us