ವಿಪಕ್ಷಗಳ ಒಗ್ಗಟ್ಟಿಗಾಗಿ ಅರವಿಂದ ಕೇಜ್ರಿವಾಲ್​​ಗೆ ಕರೆ ಮಾಡಿದ ಮಲ್ಲಿಕಾರ್ಜುನ ಖರ್ಗೆ

|

Updated on: Apr 15, 2023 | 10:05 PM

ಬಿಜೆಪಿ ವಿರುದ್ಧದ ಹೋರಾಟದಲ್ಲಿ ಸಮಾನ ಮನಸ್ಕ ಪಕ್ಷಗಳನ್ನು ಸಾಮಾನ್ಯ ವೇದಿಕೆಯಲ್ಲಿ ಒಟ್ಟುಗೂಡಿಸುವ ಕಾಂಗ್ರೆಸ್ ಪ್ರಯತ್ನಗಳ ಭಾಗವಾಗಿ ಖರ್ಗೆ ಈ ಕರೆ ಮಾಡಿದ್ದಾರೆ.

ವಿಪಕ್ಷಗಳ ಒಗ್ಗಟ್ಟಿಗಾಗಿ ಅರವಿಂದ ಕೇಜ್ರಿವಾಲ್​​ಗೆ ಕರೆ ಮಾಡಿದ ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Follow us on

ದೆಹಲಿ: ಎಎಪಿ ಸಂಚಾಲಕ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​​ಗೆ (Arvind Kejriwal) ಸಿಬಿಐ ಸಮನ್ಸ್ ನೀಡಿದ ಬೆನ್ನಲ್ಲೇ ಕಾಂಗ್ರೆಸ್ (Congress) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ದೂರವಾಣಿ ಕರೆ ಮಾಡಿ, 2024ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳು ಒಂದಾಗುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಭಾನುವಾರ ಕೇಂದ್ರೀಯ ತನಿಖಾ ದಳದ (CBI) ವಿಚಾರಣೆಗೆ ಹಾಜರಾಗಲಿರುವ ಕೇಜ್ರಿವಾಲ್‌ಗೆ ಖರ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ಸಾಕ್ಷಿಯಾಗಿ ತನಿಖಾ ತಂಡದ ಪ್ರಶ್ನೆಗಳಿಗೆ ಉತ್ತರಿಸಲು ಸಿಬಿಐ ಶುಕ್ರವಾರ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿದೆ. ಕಳೆದ ತಿಂಗಳು ಪ್ರಕರಣದಲ್ಲಿ ಅವರ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿತ್ತು.

ಬಿಜೆಪಿ ವಿರುದ್ಧದ ಹೋರಾಟದಲ್ಲಿ ಸಮಾನ ಮನಸ್ಕ ಪಕ್ಷಗಳನ್ನು ಸಾಮಾನ್ಯ ವೇದಿಕೆಯಲ್ಲಿ ಒಟ್ಟುಗೂಡಿಸುವ ಕಾಂಗ್ರೆಸ್ ಪ್ರಯತ್ನಗಳ ಭಾಗವಾಗಿ ಖರ್ಗೆ ಈ ಕರೆ ಮಾಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರು ಮುಂದಿನ  ದಿನಗಳಲ್ಲಿ ವಿವಿಧ ಪಕ್ಷಗಳ ಹಿರಿಯ ನಾಯಕರ ಸಭೆ ನಡೆಸಿ ಸಾಮಾನ್ಯ ಕಾರ್ಯಕ್ರಮವನ್ನು ರೂಪಿಸಲಿದ್ದಾರೆ. ಖರ್ಗೆ ಅವರು ಈಗಾಗಲೇ ಹಲವು ವಿರೋಧ ಪಕ್ಷದ ನಾಯಕರ ಜತೆ ಮಾತನಾಡಿದ್ದಾರೆ.

ಇದನ್ನೂ ಓದಿ: ಅಶೋಕ್ ಗೆಹ್ಲೋಟ್ ರಾಜಸ್ಥಾನ ಸರ್ಕಾರವನ್ನು ಭ್ರಷ್ಟಾಚಾರದ ಅಡ್ಡಾ ಮಾಡಿದ್ದಾರೆ: ಅಮಿತ್ ಶಾ

ಎಎಪಿ ನಾಯಕ ಸಂಜಯ್ ಸಿಂಗ್ ಅವರು ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಸಭೆಗಳಲ್ಲಿ ಭಾಗವಹಿಸಿದ್ದರು. ಅದಾನಿ ಸಮಸ್ಯೆ ಮತ್ತು ಈ ವಿಷಯದ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಯ ಬೇಡಿಕೆಯ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷಗಳು ಒತ್ತಾಯಿಸುತ್ತಿವೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ