ದೆಹಲಿ ಮೆಟ್ರೋ ನಿಲ್ದಾಣದ ಮಹಿಳಾ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ
ದೆಹಲಿಯ ಇಂದರ್ಲೋಕ್ ಮೆಟ್ರೋ(Metro) ನಿಲ್ದಾಣದಲ್ಲಿ ಮಹಿಳಾ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಏಪ್ರಿಲ್ 25ರ ಶನಿವಾರ ಸಂಜೆ ಸುಮಾರು 5.33ರ ಸುಮಾರಿಗೆ ಪೊಲೀಸರಿಗೆ ಕರೆ ಬಂದಿತ್ತು. ಮೆಟ್ರೋ ನಿಲ್ದಾಣದ ಮಹಿಳೆಯರ ಶೌಚಾಲಯವು ಒಳಗಿನಿಂದ ಲಾಕ್ ಆಗಿದ್ದು, ಅಲ್ಲಿಂದ ತೀವ್ರವಾದ ದುರ್ವಾಸನೆ ಬರುತ್ತಿದೆ ಎಂದು ಸಾರ್ವಜನಿಕರು ದೂರು ನೀಡಿದ್ದರು. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡವು ಶೌಚಾಲಯದ ಬಾಗಿಲನ್ನು ಒಡೆದು ಒಳಪ್ರವೇಶಿಸಿದೆ.

ನವದೆಹಲಿ, ಏಪ್ರಿಲ್ 26: ದೆಹಲಿಯ ಇಂದರ್ಲೋಕ್ ಮೆಟ್ರೋ(Metro) ನಿಲ್ದಾಣದಲ್ಲಿ ಮಹಿಳಾ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಏಪ್ರಿಲ್ 25ರ ಶನಿವಾರ ಸಂಜೆ ಸುಮಾರು 5.33ರ ಸುಮಾರಿಗೆ ಪೊಲೀಸರಿಗೆ ಕರೆ ಬಂದಿತ್ತು. ಮೆಟ್ರೋ ನಿಲ್ದಾಣದ ಮಹಿಳೆಯರ ಶೌಚಾಲಯವು ಒಳಗಿನಿಂದ ಲಾಕ್ ಆಗಿದ್ದು, ಅಲ್ಲಿಂದ ತೀವ್ರವಾದ ದುರ್ವಾಸನೆ ಬರುತ್ತಿದೆ ಎಂದು ಸಾರ್ವಜನಿಕರು ದೂರು ನೀಡಿದ್ದರು. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡವು ಶೌಚಾಲಯದ ಬಾಗಿಲನ್ನು ಒಡೆದು ಒಳಪ್ರವೇಶಿಸಿದೆ.
ಬಾಗಿಲು ಒಡೆದಾಗ ಪೊಲೀಸರಿಗೆ ಆಘಾತ ಕಾದಿತ್ತು. ಶೌಚಾಲಯದೊಳಗೆ ಸುಮಾರು 40 ವರ್ಷ ವಯಸ್ಸಿನ ವ್ಯಕ್ತಿಯ ಶವ ನೇತಾಡುತ್ತಿರುವುದು ಕಂಡುಬಂದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಮೃತ ವ್ಯಕ್ತಿಯು ಅದೇ ಶೌಚಾಲಯದ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ. ಮೃತದೇಹವು ಕೊಳೆತ ಸ್ಥಿತಿಯಲ್ಲಿದ್ದರಿಂದ, ಸಾವು ಸಂಭವಿಸಿ ಕನಿಷ್ಠ ಎರಡು ದಿನಗಳಾಗಿರಬಹುದು ಎಂದು ಶಂಕಿಸಲಾಗಿದೆ.
ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಪ್ರಕಾರ, ಮೃತ ವ್ಯಕ್ತಿಯನ್ನು ಕೊನೆಯ ಬಾರಿಗೆ ಎರಡು ದಿನಗಳ ಹಿಂದೆ ಕೆಲಸದ ಸ್ಥಳದಲ್ಲಿ ನೋಡಲಾಗಿತ್ತು. ಅಂದಿನಿಂದ ಅವರು ಯಾರ ಕಣ್ಣಿಗೂ ಬಿದ್ದಿರಲಿಲ್ಲ. ಶೌಚಾಲಯದ ಬಾಗಿಲು ಒಳಗಿನಿಂದ ಲಾಕ್ ಆಗಿದ್ದರಿಂದ ಇದು ಆತ್ಮಹತ್ಯೆ ಇರಬಹುದು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದ್ದರೂ, ಪೊಲೀಸರು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ.
ಅಪರಾಧ ವಿಭಾಗದ ತಜ್ಞರು ಸ್ಥಳವನ್ನು ಪರಿಶೀಲಿಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬಾಬು ಜಗಜೀವನ್ ರಾಮ್ ಸ್ಮಾರಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಬಿಎನ್ಎಸ್ಎಸ್ನ (BNSS) ಸೆಕ್ಷನ್ 194ರ ಅಡಿಯಲ್ಲಿ ವಿಚಾರಣೆ ಆರಂಭಿಸಲಾಗಿದ್ದು, ಮೆಟ್ರೋ ಅಧಿಕಾರಿಗಳ ಸಹಕಾರದೊಂದಿಗೆ ಮೃತರ ಪೂರ್ಣ ಗುರುತು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ.
ಮತ್ತಷ್ಟು ಓದಿ: ನಮ್ಮ ಮೆಟ್ರೋ ಪಿಂಕ್ ಲೈನ್ ಆರಂಭಕ್ಕೆ ಭರದ ಸಿದ್ಧತೆ: ನಾಳೆಯಿಂದ ಪರಿಶೀಲನಾ ಕಾರ್ಯ ಶುರು
ಮೆಟ್ರೋ ನಿಲ್ದಾಣದಂತಹ ಜನನಿಬಿಡ ಪ್ರದೇಶದಲ್ಲಿ ಮಹಿಳೆಯರ ಶೌಚಾಲಯದೊಳಗೆ ವ್ಯಕ್ತಿ ಶವ ಪತ್ತೆಯಾಗಿರುವುದು ಸುರಕ್ಷತೆಯ ದೃಷ್ಟಿಯಿಂದ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಸಾವಿನ ಹಿಂದಿನ ಅಸಲಿ ಕಾರಣವೇನು ಎಂಬುದು ಮರಣೋತ್ತರ ಪರೀಕ್ಷೆಯ ನಂತರವಷ್ಟೇ ತಿಳಿದುಬರಬೇಕಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




