
ನವದೆಹಲಿ, ಸೆಪ್ಟೆಂಬರ್ 18: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಪೊಲೀಸರು ಬಂಧಿಸಿರುವುದಕ್ಕೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ರಮವನ್ನು “ಪ್ರಜಾಪ್ರಭುತ್ವದ ಕೊಲೆ ಮತ್ತು ಬಿಜೆಪಿಯ ರಾಜಕೀಯ ಸೇಡು” ಎಂದು ಅವರು ಕಟುವಾಗಿ ಟೀಕಿಸಿದ್ದಾರೆ. ಮಮತಾ ಬ್ಯಾನರ್ಜಿ ನೇತೃತ್ವದ ‘ಅಖಿಲ ಭಾರತ ತೃಣಮೂಲ ಕಾಂಗ್ರೆಸ್’ (ಮಮತಾ ಬಣ) ನಂದಿಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ಕೆಲವೇ ಗಂಟೆಗಳಲ್ಲಿ, 2007ರ ಹಳೆಯ ಪ್ರಕರಣವೊಂದನ್ನು ಉಲ್ಲೇಖಿಸಿ ಮಿಲನ್ ಪ್ರಧಾನ್ ಅವರನ್ನು ಬಂಧಿಸಲಾಗಿತ್ತು.
ಈ ಬಗ್ಗೆ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, “ಬಿಜೆಪಿಗೆ ದೇಶದ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣಾ ಪ್ರಕ್ರಿಯೆಯ ಮೇಲೆ ಯಾವುದೇ ಗೌರವ ಅಥವಾ ನಂಬಿಕೆಯಿಲ್ಲ. ಸ್ವತಂತ್ರವಾಗಿ ಸ್ಪರ್ಧಿಸಿ ಗೆಲ್ಲಲು ಸಾಧ್ಯವಾಗದಿದ್ದಾಗ ಅವರು ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು ಎದುರಾಳಿ ಅಭ್ಯರ್ಥಿಗಳನ್ನು ಬಂಧಿಸುವ ಕೆಲಸ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ನಂದಿಗ್ರಾಮ ಉಪಚುನಾವಣೆ; ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಬಂಧನ!
ಅಧಿಕಾರದ ದುರಾಸೆ:
“ಅಧಿಕಾರ ಹಿಡಿಯಲು ಬಿಜೆಪಿ ‘ಮತ ಕಳ್ಳತನ’ ಹಾಗೂ ‘ಪಕ್ಷಗಳ ಒಡೆಯುವಿಕೆ’ಯ ತಂತ್ರ ಅನುಸರಿಸುತ್ತಿದೆ. ಅವರಿಗೆ ಚುನಾವಣೆಯಲ್ಲಿ ಮುಖಾಮುಖಿ ಸ್ಪರ್ಧೆ ಎದುರಿಸುವ ಧೈರ್ಯವಿಲ್ಲ, ಹಾಗಾಗಿಯೇ ಕಣದಲ್ಲಿರುವ ಅಭ್ಯರ್ಥಿಗಳನ್ನೇ ಇಲ್ಲದಂತೆ ಮಾಡಲು ನೋಡುತ್ತಿದ್ದಾರೆ. ಆದರೆ ನಾವು ಇಂತಹ ಸೇಡಿನ ರಾಜಕೀಯಕ್ಕೆ ತಲೆಬಾಗುವುದಿಲ್ಲ” ಎಂದು ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ.
नंदीग्राम उपचुनाव के लिए कांग्रेस उम्मीदवार मिलन प्रधान की गिरफ्तारी कोई संयोग नहीं, राजनीतिक प्रतिशोध है – लोकतंत्र की हत्या है।
BJP का निष्पक्ष चुनाव में भरोसा ही नहीं – इसलिए कभी वोट चोरी, कभी सरकार चोरी और कभी पार्टी चोरी से सत्ता बचाना चाहती है।
वो चुनाव नहीं लड़ना चाहते,…
— Rahul Gandhi (@RahulGandhi) September 18, 2026
ಮಮತಾ ಬ್ಯಾನರ್ಜಿ ಅವರ ಬೆಂಬಲ ಪ್ರಕಟಣೆ ಹಾಗೂ ರಾಹುಲ್ ಗಾಂಧಿಯವರ ಈ ತೀವ್ರ ಹೋರಾಟದ ಹಾದಿಯು ‘ಇಂಡಿಯಾ’ ಮೈತ್ರಿಕೂಟ ನಂದಿಗ್ರಾಮದಲ್ಲಿ ಬಿಜೆಪಿಯನ್ನು ಜಂಟಿಯಾಗಿ ಎದುರಿಸಲು ಸಜ್ಜಾಗಿದೆ ಎಂಬುದನ್ನು ಸ್ಪಷ್ಟಪಡಿಸಿದೆ. ನಂದಿಗ್ರಾಮದ ಮಮತಾ ಬ್ಯಾನರ್ಜಿ ಬಣದ ಅಭ್ಯರ್ಥಿ ಸಂಚಿತಾ ಪ್ರಧಾನ್ ಡೇ ತಮ್ಮ ನಾಮಪತ್ರ ಹಿಂಪಡೆದ ತಕ್ಷಣ, ಮಮತಾ ಬ್ಯಾನರ್ಜಿ ಕಾಂಗ್ರೆಸ್ಗೆ ಬೆಂಬಲ ನೀಡಿದ್ದರು. ಆದರೆ, ಈ ಘೋಷಣೆಯ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿಯನ್ನು ಬಂಧಿಸಿರುವುದು ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಅಕ್ಟೋಬರ್ 6ರ ಉಪಚುನಾವಣೆಯ ಕಣವನ್ನು ಮತ್ತಷ್ಟು ಉದ್ವಿಗ್ನಗೊಳಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:01 pm, Fri, 18 September 26