ಪಾಕ್​ಗೆ ಭಾರತ ತಿರುಗೇಟು; ಪಾಕಿಸ್ತಾನಿಯರಿಗೆ ಪ್ರವೇಶ ನಿಷೇಧ, ಸಿಂಧೂ ಜಲ ಒಪ್ಪಂದ ರದ್ದು!

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂದು ಭಾರತ ಅನುಮಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ಈ ಬಾರಿ ಭಾರತ ತಕ್ಕ ಉತ್ತರ ನೀಡಿದ್ದು, ಇಂದು ನಡೆದ ಭದ್ರತಾ ಕುರಿತ ಸಂಪುಟ ಸಮಿತಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಇದರ ಪ್ರಕಾರ ಇನ್ಮುಂದೆ ಭಾರತಕ್ಕೆ ಪಾಕಿಸ್ತಾನಿಯರಿಗೆ ಪ್ರವೇಶ ನಿಷೇಧಿಸಲಾಗಿದೆ.

ಪಾಕ್​ಗೆ ಭಾರತ ತಿರುಗೇಟು; ಪಾಕಿಸ್ತಾನಿಯರಿಗೆ ಪ್ರವೇಶ ನಿಷೇಧ, ಸಿಂಧೂ ಜಲ ಒಪ್ಪಂದ ರದ್ದು!
Pm Modi Cabinet Meeting

Updated on: Apr 23, 2025 | 9:43 PM

ನವದೆಹಲಿ, ಏಪ್ರಿಲ್, 23: ಪಹಲ್ಗಾಮ್ ಉಗ್ರರ ದಾಳಿಗೆ (Pahalgam Terror Attack) ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನಿವಾಸದಲ್ಲಿ ಇಂದು ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆದಿದೆ. ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಇತರ ಹಿರಿಯ ಸಚಿವರು ಭಾಗವಹಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದ ಕಾರ್ಯತಂತ್ರದ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಗಿದ್ದು, ಉಗ್ರರಿಗೆ ಕುಮ್ಮಕ್ಕು ನೀಡುವ ಮೂಲಕ ಕಾಶ್ಮೀರ ಕಣಿವೆಯಲ್ಲಿ 26 ಜನರನ್ನು ಬಲಿ ಪಡೆಯಲು ಬೆಂಬಲ ನೀಡಿದ ಪಾಕಿಸ್ತಾನಕ್ಕೆ ಭಾರತ ತಕ್ಕ ತಿರುಗೇಟು ನೀಡಿದೆ.

ಇಂದು ನಡೆದ ಸಭೆಯಲ್ಲಿ ಭಾರತ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ಸಂಪೂರ್ಣವಾಗಿ ನಿಲ್ಲಿಸುವವರೆಗೆ 1960ರ ಸಿಂಧೂ ಜಲ ಒಪ್ಪಂದವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗುತ್ತದೆ. ಅಟ್ಟಾರಿ ಚೆಕ್ ಪೋಸ್ಟ್ ಮುಚ್ಚಲಾಗುವುದು, ಸಿಂಧೂ ಜಲ ಒಪ್ಪಂದವನ್ನು ತಕ್ಷಣವೇ ಸ್ಥಗಿತಗೊಳಿಸಲಾಗುವುದು ಎಂದು ವಿದೇಶಾಂಗ ಸಚಿವಾಲಯ ಖಚಿತಪಡಿಸಿದೆ. ಇಂದು ನಡೆದ ಸಭೆಯಲ್ಲಿ ಭಾರತ ಗಡಿಯಾಚೆಗಿನ ಭಯೋತ್ಪಾದನೆ ಕೊನೆಗೊಳಿಸಲು ಮತ್ತು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಇದನ್ನೂ ಓದಿ
ಕಾಶ್ಮೀರದಲ್ಲಿ ರಕ್ತದೋಕುಳಿ; ಇಂದು ಉಗ್ರರ ದಾಳಿ ವೇಳೆ ಆಗಿದ್ದೇನು?
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು


ಇದನ್ನೂ ಓದಿ: ಪಹಲ್ಗಾಮ್ ದಾಳಿಗೆ ಪ್ರತೀಕಾರ; ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ಕ್ರಮಕ್ಕೆ ಭಾರತ ಚಿಂತನೆ

ಸಭೆಯಲ್ಲಿ ಮೋದಿ ಸರ್ಕಾರ ತೆಗೆದುಕೊಂಡ ನಿರ್ಧಾರಗಳು:

– ಸಿಂಧೂ ಜಲ ಒಪ್ಪಂದ ಸ್ಥಗಿತಗೊಳಿಸಲಾಗುವುದು.

– ಅಟ್ಟಾರಿ-ವಾಘಾ ಗಡಿಯ ಚೆಕ್ ಪೋಸ್ಟ್ ಅನ್ನು ತಕ್ಷಣ ಮುಚ್ಚಲಾಗುವುದು.

– ಭಾರತಕ್ಕೆ ಪಾಕಿಸ್ತಾನಿ ಪ್ರಜೆಗಳಿಗೆ ಪ್ರವೇಶವಿಲ್ಲ, ಪಾಕಿಸ್ತಾನೀಯರಿಗೆ ವೀಸಾ ನೀಡುವುದಿಲ್ಲ. ಈಗಾಗಲೇ ಭಾರತಕ್ಕೆ ಬಂದಿರುವ ಯಾವುದೇ ಪಾಕಿಸ್ತಾನಿ ಪ್ರಜೆಗೆ ಭಾರತವನ್ನು ತೊರೆಯಲು 48 ಗಂಟೆಗಳ ಕಾಲಾವಕಾಶವಿದೆ.

– ಪಾಕಿಸ್ತಾನ ಹೈಕಮಿಷನ್‌ ಹೈಕಮಿಷನ್ ಬಲವನ್ನು 30ಕ್ಕೆ ಇಳಿಸಲಾಗಿದೆ.

– ನವದೆಹಲಿಯಲ್ಲಿರುವ ಪಾಕಿಸ್ತಾನಿ ಹೈಕಮಿಷನ್‌ನಲ್ಲಿರುವ ರಕ್ಷಣಾ, ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ಪರ್ಸನಾ ನಾನ್ ಗ್ರಾಟಾ ಎಂದು ಘೋಷಿಸಲಾಗಿದೆ. ಅವರು ಭಾರತವನ್ನು ಬಿಡಲು ಒಂದು ವಾರ ಸಮಯ ನೀಡಲಾಗಿದೆ.

– ಭಾರತವು ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್‌ನ ರಕ್ಷಣಾ, ನೌಕಾಪಡೆ ಮತ್ತು ವಾಯು ಸಲಹೆಗಾರರನ್ನು ವಾಪಾಸ್ ಕರೆಸಿಕೊಳ್ಳಲಿದೆ. ಆಯಾ ಹೈಕಮಿಷನ್‌ಗಳಲ್ಲಿನ ಈ ಹುದ್ದೆಗಳನ್ನು ರದ್ದುಗೊಳಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:28 pm, Wed, 23 April 25