
ವಡೋದರಾ, ಮೇ 12: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಬಿಕ್ಕಟ್ಟು ಮತ್ತು ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಇಂಧನ ಉಳಿಸಲು ವರ್ಕ್ ಫ್ರಂ ಹೋಮ್, ಸಾರ್ವಜನಿಕ ಸಾರಿಗೆ ಬಳಕೆ ಇತ್ಯಾದಿ ಸಲಹೆ ಕೊಟ್ಟಿದ್ದಾರೆ. ಇದೇ ವೇಳೆ, ಶಾಲಾ ಕಾಲೇಜುಗಳಿಗೂ ಮಹತ್ವದ ಮನವಿಯೊಂದನ್ನು ಮಾಡಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ಆನ್ಲೈನ್ ತರಗತಿಗಳನ್ನು ನಡೆಸುವ ಕುರಿತು ಮತ್ತು ಇಂಧನ ಉಳಿತಾಯಕ್ಕಾಗಿ ವಿವಿಧ ಕ್ರಮಗಳನ್ನು ಕೈಗೊಳ್ಳಲು ಅವರು ಸೂಚಿಸಿದ್ದಾರೆ.
ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ಅನುಸರಿಸಿದಂತೆ, ಶಾಲಾ-ಕಾಲೇಜುಗಳು ತಾತ್ಕಾಲಿಕವಾಗಿ ಆನ್ಲೈನ್ ತರಗತಿಗಳನ್ನು ನಡೆಸುವ ಬಗ್ಗೆ ಆಲೋಚಿಸಬೇಕು ಎಂದು ಪ್ರಧಾನಿ ಸಲಹೆ ನೀಡಿದ್ದಾರೆ. ಇದು ವಿದ್ಯಾರ್ಥಿಗಳ ಮತ್ತು ಸಿಬ್ಬಂದಿಯ ಪ್ರಯಾಣವನ್ನು ಕಡಿಮೆ ಮಾಡಿ ಇಂಧನ ಉಳಿತಾಯಕ್ಕೆ ಸಹಕಾರಿಯಾಗಲಿದೆ ಎಂಬುದು ಅವರ ಆಶಯ.
ಇದನ್ನೂ ಓದಿ: ಚಿನ್ನ ಕೊಳ್ಳಬೇಡಿ, ವರ್ಕ್ ಫ್ರಂ ಹೋಮ್ ಮಾಡಿ, ಎಣ್ಣೆ ಹೆಚ್ಚು ಬಳಸದಿರಿ ಎಂದೆಲ್ಲಾ ಮೋದಿ ಅಂದಿದ್ದು ಯಾಕೆ? ಇಲ್ಲಿದೆ ನಿಜ ಕಾರಣ
ಗುಜರಾತ್ನ ವಡೋದರಾದಲ್ಲಿ ಸರ್ದಾರ್ಧಾಮ್ ಭವನ-3 ಮತ್ತು ವಿದ್ಯಾರ್ಥಿನಿಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಪೆಟ್ರೋಲ್ ಮತ್ತು ಡೀಸೆಲ್ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡುವಂತೆ ದೇಶವಾಸಿಗಳಲ್ಲಿ ವಿನಂತಿಸಿದರು. ಮೆಟ್ರೋ ರೈಲು, ಎಲೆಕ್ಟ್ರಿಕ್ ಬಸ್ಗಳು ಮತ್ತು ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಹೆಚ್ಚಾಗಿ ಬಳಸುವಂತೆ ಹಾಗೂ ಕಾರುಗಳನ್ನು ಹಂಚಿಕೊಂಡು ಪ್ರಯಾಣಿಸುವ (Car-pooling) ಮೂಲಕ ಇಂಧನ ಉಳಿಸಲು ಸಹಕರಿಸಬೇಕು ಎಂದು ಹೇಳಿದರು.
ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ವರ್ಚುವಲ್ ಮೀಟಿಂಗ್ಗಳನ್ನು ನಡೆಸಲು ಮತ್ತು ಸಾಧ್ಯವಿರುವ ಕಡೆಗಳಲ್ಲಿ ಉದ್ಯೋಗಿಗಳಿಗೆ ‘ಮನೆಯಿಂದಲೇ ಕೆಲಸ’ (Work from home) ಸೌಲಭ್ಯವನ್ನು ನೀಡಲು ಆದ್ಯತೆ ನೀಡಬೇಕು ಎಂದು ತಿಳಿಸಿದರು. ಇಂಧನ ಮಾತ್ರವಲ್ಲದೆ, ಖಾದ್ಯ ತೈಲದ ಬಳಕೆಯನ್ನು ಮಿತಗೊಳಿಸುವುದು, ಚಿನ್ನದ ಖರೀದಿಯನ್ನು ಮುಂದೂಡುವುದು ಮತ್ತು ಅನಗತ್ಯ ವಿದೇಶಿ ಪ್ರವಾಸಗಳನ್ನು ತಪ್ಪಿಸುವ ಮೂಲಕ ದೇಶದ ವಿದೇಶಿ ವಿನಿಮಯ ಮೀಸಲು ಉಳಿಸಲು ಸಹಕರಿಸಬೇಕು ಎಂದು ಅವರು ದೇಶದ ಜನತೆಯನ್ನು ಕೋರಿದ್ದಾರೆ.
ಇದನ್ನೂ ಓದಿ: ಜಾಗತಿಕ ತೈಲ ಸಂಕಷ್ಟದ ನಡುವೆ ಇಂಧನ ಬಳಕೆ ಕಡಿತಕ್ಕೆ ಮೋದಿ ಕರೆ: ಚಿನ್ನ ಖರೀದಿ ತಪ್ಪಿಸುವಂತೆಯೂ ಮನವಿ
ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಹಾಗೂ ಪಶ್ಚಿಮ ಏಷ್ಯಾದಲ್ಲಿನ ಯುದ್ಧದಂತಹ ಪರಿಸ್ಥಿತಿಯಿಂದಾಗಿ ಜಾಗತಿಕವಾಗಿ ಪೂರೈಕೆ ಸರಪಳಿಗೆ ಧಕ್ಕೆಯಾಗಿದೆ ಮತ್ತು ತೈಲ ಬೆಲೆಗಳು ತೀವ್ರವಾಗಿ ಏರಿಕೆಯಾಗುತ್ತಿವೆ. ಈ ಆರ್ಥಿಕ ಸವಾಲನ್ನು ಎದುರಿಸಲು, ಮತ್ತು ಆಮದು ವೆಚ್ಚ ತಗ್ಗಿಸಲು ಪ್ರಧಾನಿಯವರು ಈ “ಕಠಿಣ ಕ್ರಮಗಳ” (Austerity measures) ಮೊರೆ ಹೋಗಿದ್ದಾರೆ.
ಒಟ್ಟಾರೆಯಾಗಿ, ರಾಷ್ಟ್ರೀಯ ಹಿತದೃಷ್ಟಿಯಿಂದ ಪ್ರತಿಯೊಬ್ಬ ನಾಗರಿಕನು ಇಂಧನ ಮತ್ತು ಸಂಪನ್ಮೂಲಗಳನ್ನು ಉಳಿಸುವ ಮೂಲಕ ದೇಶದ ಆರ್ಥಿಕತೆಗೆ ಬೆಂಬಲವಾಗಿ ನಿಲ್ಲಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ