Parliament Monsoon Session 2026: ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ; ಎನ್​ಡಿಎ ಮುಂದಿದೆ ಹಲವು ಸವಾಲು

ನಾಳೆಯಿಂದ (ಜುಲೈ 20) ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದೆ. ಅಧಿವೇಶನ ಆಗಸ್ಟ್ 13ರಂದು ಅಂತ್ಯವಾಗಲಿದೆ. ಈ ಮುಂಗಾರು ಅಧಿವೇಶನಕ್ಕೂ ಮುನ್ನ ನಡೆದ ಸರ್ವಪಕ್ಷ ಸಭೆಯಲ್ಲಿ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿವೆ. ಈ ಅಧಿವೇಶನವು ಒಟ್ಟು 25 ದಿನಗಳ ಅವಧಿಯನ್ನು ಹೊಂದಿದ್ದು, ಇದರಲ್ಲಿ 19 ಕಲಾಪದ ದಿನಗಳು ಇರಲಿವೆ. ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಮುಂಗಾರು ಅಧಿವೇಶನಕ್ಕೆ ಅನುಮೋದನೆ ನೀಡಿದ್ದಾರೆ. ಈ ಅಧಿವೇಶನದಲ್ಲಿ ಹಲವು ಮಹತ್ವದ ಮಸೂದೆಗಳು ಮಂಡನೆಯಾಗುವ ನಿರೀಕ್ಷೆಯಿದೆ.

Parliament Monsoon Session 2026: ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ; ಎನ್​ಡಿಎ ಮುಂದಿದೆ ಹಲವು ಸವಾಲು
Parliament Session
Image Credit source: PTI

Updated on: Jul 19, 2026 | 5:49 PM

ನವದೆಹಲಿ, ಜುಲೈ 19: ಸಂಸತ್ತಿನ ಮುಂಗಾರು ಅಧಿವೇಶನವು (Monsoon Session 2026) ಜುಲೈ 20ರಿಂದ ಅಧಿಕೃತವಾಗಿ ಪ್ರಾರಂಭವಾಗಲಿದ್ದು, ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಭಾರಿ ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದೆ. ಕೇಂದ್ರ ಸರ್ಕಾರವು ಹಲವು ಪ್ರಮುಖ ಮಸೂದೆಗಳನ್ನು ಅಂಗೀಕರಿಸಲು ಸಜ್ಜಾಗಿದ್ದರೆ, ಇತ್ತ ವಿರೋಧ ಪಕ್ಷಗಳು ವಿವಿಧ ರಾಜಕೀಯ ಮತ್ತು ಆಡಳಿತಾತ್ಮಕ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ಧತೆ ನಡೆಸಿವೆ. ಈ ಬಾರಿಯ ಮುಂಗಾರು ಅಧಿವೇಶನವು ಪೇಪರ್ ಲೀಕ್, ಭ್ರಷ್ಟಾಚಾರದ ಆರೋಪಗಳು ಮತ್ತು ಪಕ್ಷಾಂತರದ ವಿವಾದಗಳ ಹಿನ್ನೆಲೆಯಲ್ಲಿ ತೀವ್ರ ವಾಕ್ಸಮರಕ್ಕೆ ಸಾಕ್ಷಿಯಾಗುವ ಎಲ್ಲಾ ಮುನ್ಸೂಚನೆಗಳು ಸಿಕ್ಕಿವೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಅಧಿವೇಶನವನ್ನು ಶಾಂತಿಯುತವಾಗಿ ನಡೆಸಲು ಎಲ್ಲಾ ರಾಜಕೀಯ ಪಕ್ಷಗಳ ಸಹಕಾರ ಕೋರಿದ್ದಾರೆ. “ಸಂಸತ್ತು ಎಲ್ಲರಿಗೂ ಸೇರಿದ್ದಾಗಿದೆ. ಆಡಳಿತ ಮತ್ತು ವಿರೋಧ ಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕಿದೆ. ನಾವು ವಿರೋಧ ಪಕ್ಷಗಳ ಧ್ವನಿಯನ್ನು ಕೇಳಲು ಸಿದ್ಧರಿದ್ದೇವೆ, ಅದೇ ರೀತಿ ಅವರು ನಮ್ಮ ಮಾತನ್ನು ಕೇಳುತ್ತಾರೆ ಎಂಬ ಭರವಸೆ ಇದೆ. ಸಂಸತ್ತು ಎಷ್ಟು ಚೆನ್ನಾಗಿ ನಡೆಯುತ್ತದೆಯೋ ದೇಶಕ್ಕೆ ಅಷ್ಟೇ ಒಳ್ಳೆಯದು” ಎಂದು ಕಿರಣ್ ರಿಜಿಜು ಹೇಳಿದ್ದಾರೆ.

ಇದನ್ನೂ ಓದಿ: Parliament Monsoon Session: ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ, ತೆರಿಗೆ, ಉದ್ಯಮ ಸುಧಾರಣೆ ಸೇರಿ 5 ಹೊಸ ಮಸೂದೆ ಮಂಡನೆಗೆ ಸಜ್ಜು

ಅಧಿವೇಶನದಲ್ಲಿ ಕೇಂದ್ರ ಸರ್ಕಾರವನ್ನು ಕಟ್ಟಿಹಾಕಲು ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳು ಬೃಹತ್ ಕಾರ್ಯತಂತ್ರ ರೂಪಿಸಿದ್ದು, ಮುಖ್ಯವಾಗಿ ಈ ಕೆಳಗಿನ ವಿಷಯಗಳನ್ನು ಪ್ರಸ್ತಾಪಿಸಲಿವೆ.

ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ:

ರಾಮಮಂದಿರದ ಕಾಣಿಕೆ ಹಣ ಕಳ್ಳತನದ ಆರೋಪದ ಮೇಲೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿಗೆ ಜಂಟಿ ಪತ್ರ ಬರೆದಿದ್ದು, ಅಧಿವೇಶನದಲ್ಲಿ ಈ ಕುರಿತು ಪ್ರಧಾನಿ ಮೌನ ಮುರಿಯಬೇಕೆಂದು ಒತ್ತಾಯಿಸಿದ್ದಾರೆ. ರಾಮ ಮಂದಿರದ ದೇಣಿಗೆ ಹಗರಣವನ್ನು ಮುಂದಿಟ್ಟುಕೊಂಡು ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ವಿಪಕ್ಷಗಳು ಎನ್​ಡಿಎ ಸರ್ಕಾರದ ವಿರುದ್ಧ ದಾಳಿ ನಡೆಸಲು ಸಿದ್ಧತೆ ನಡೆಸಿವೆ.

ಇದನ್ನೂ ಓದಿ: Parliament Monsoon Session: ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ನೀಟ್ (NEET) ಪೇಪರ್ ಲೀಕ್ ಹಗರಣ:

ದೇಶಾದ್ಯಂತ ಸೃಷ್ಟಿಯಾಗಿರುವ ನೀಟ್ ಪರೀಕ್ಷೆ ಅಕ್ರಮದ ಕುರಿತು ಜಂಟಿ ತನಿಖೆಗೆ ಒತ್ತಾಯವೂ ಕೇಳಿಬಂದಿದೆ. ಈ ಕುರಿತು ಕೂಡ ಸದನದಲ್ಲಿ ಪ್ರಸ್ತಾಪವಾಗುವ ಸಾಧ್ಯತೆಯಿದೆ.

ಎಥನಾಲ್ ವಿವಾದ:

ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣದ (E20) ಗೊಂದಲ ಹಾಗೂ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಪ್ರಕ್ರಿಯೆಗೆ ತೀವ್ರ ವಿರೋಧ ವ್ಯಕ್ತಪಡಿಸಲು ವಿಪಕ್ಷಗಳು ತೀರ್ಮಾನಿಸಿವೆ ಎನ್ನಲಾಗಿದೆ. ಇದಿಷ್ಟೂ ಅಲ್ಲದೆ ಇನ್ನೂ ಹಲವು ವಿಷಯಗಳು ಎನ್​ಡಿಎ ವಿರುದ್ಧ ವಿಪಕ್ಷಗಳಿರುವ ಅಸ್ತ್ರಗಳಾಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us