Narendra Modi: ಇಂದು ವಾರಾಣಸಿಗೆ ಪ್ರಧಾನಿ ಮೋದಿ; 1,780 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಇಂದು ಅವರ ಲೋಕಸಭಾ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದು, 1,780 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

Narendra Modi: ಇಂದು ವಾರಾಣಸಿಗೆ ಪ್ರಧಾನಿ ಮೋದಿ; 1,780 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ
ನರೇಂದ್ರ ಮೋದಿ

Updated on: Mar 24, 2023 | 10:07 AM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು (ಮಾರ್ಚ್ 24) ಅವರ ಲೋಕಸಭಾ ಕ್ಷೇತ್ರ ವಾರಾಣಸಿಗೆ (Varanasi)ಭೇಟಿ ನೀಡಲಿದ್ದು, 1,780 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಈ ವಿಚಾರವಾಗಿ ಪ್ರಧಾನಿ ಕಾರ್ಯಾಲಯದ ಪ್ರಕಟಣೆ ಮೂಲಕ ಇತ್ತೀಚೆಗೆ ಮಾಹಿತಿ ನೀಡಿತ್ತು. ವಾರಾಣಸಿಯ ಸಂಪೂರ್ಣಾನಂದ ಸಂಸ್ಕೃತ ವಿಶ್ವವಿದ್ಯಾಲಯ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಅವರು, ಅನೇಕ ಯೋಜನೆಗಳಿಗೆ ಚಾಲನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ವಾರಾಣಸಿ ಕಂಟೋನ್ಮೆಂಟ್ ಸ್ಟೇಷನ್​ನಿಂದ ಗೋದೌಲಿಯಾ ವರೆಗೆ ನಿರ್ಮಿಸಲು ಉದ್ದೇಶಿಸಲಾಗಿರುವ ಪ್ರಯಾಣಿಕ ರೋಪ್​ವೇಗೆ ಶಂಕುಸ್ಥಾಪನೆ ಮಾಡಲಿದ್ದಾರೆ. 645 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಹಮ್ಮಿಕೊಳ್ಳಲಾಗಿದೆ.

ರೋಪ್‌ವೇಯು 3.75 ಕಿಮೀ ಉದ್ದವನ್ನು ಹೊಂದಿರಲಿದ್ದು, ಐದು ನಿಲ್ದಾಣಗಳೊಂದಿಗೆ ಸಂಪರ್ಕ ಬೆಸೆಯಲಿದೆ. ಇದರಿಂದ ಪ್ರವಾಸಿಗರು, ಯಾತ್ರಿಕರು ಮತ್ತು ವಾರಣಾಸಿಯ ನಿವಾಸಿಗಳಿಗೆ ಸಂಚಾರ ಸುಲಭವಾಗಲಿದೆ ಎಂದು ಪಿಎಂಒ ಪ್ರಕಟಣೆ ತಿಳಿಸಿದೆ.

‘ನಮಾಮಿ ಗಂಗಾ’ ಯೋಜನೆಯಡಿ ಭಗವಾನ್‌ಪುರದಲ್ಲಿ 55 ಎಂಎಲ್‌ಡಿ ಸಾಮರ್ಥ್ಯದ ಕೊಳಚೆ ನೀರು ಸಂಸ್ಕರಣಾ ಘಟಕದ ಶಂಕುಸ್ಥಾಪನೆಯನ್ನೂ ಪ್ರಧಾನಿ ನೆರವೇರಿಸಲಿದ್ದಾರೆ. ಸುಮಾರು 300 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಹಮ್ಮಿಕೊಳ್ಳಲಾಗಿದೆ.

ಖೇಲೋ ಇಂಡಿಯಾ ಯೋಜನೆಯಡಿ ಹಮ್ಮಿಕೊಳ್ಳಲಾಗಿರುವ ಸಿಗ್ರಾ ಸ್ಟೇಡಿಯಂನ ಮರು ಅಭಿವೃದ್ಧಿ ಕಾಮಗಾರಿಯ 2 ಮತ್ತು 3 ನೇ ಹಂತಕ್ಕೆ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜತೆಗೆ, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನಿಂದ ಸೇವಾಪುರಿಯ ಇಸರ್ವರ್ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಎಲ್‌ಪಿಜಿ ಬಾಟ್ಲಿಂಗ್ ಘಟಕದ ಶಂಕುಸ್ಥಾಪನೆಯನ್ನೂ ನೆರವೇರಿಸಲಿದ್ದಾರೆ.

ಇದನ್ನೂ ಓದಿ: Narendra Modi: ಚೀನಾ ಸಾಮಾಜಿಕ ಮಾಧ್ಯಮಗಳಲ್ಲೂ ನಮೋ ಹವಾ; ಮೋದಿ ಅಮರ ಎನ್ನುತ್ತಿರುವ ನೆಟಿಜನ್ಸ್

ಭರ್ತರಾ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ವಿವಿಧ ಯೋಜನೆಗಳಿಗೆ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜಲ ಜೀವನ್ ಮಿಷನ್ ಅಡಿಯಲ್ಲಿ, 19 ಕುಡಿಯುವ ನೀರಿನ ಯೋಜನೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಇದರಿಂದ 63 ಗ್ರಾಮ ಪಂಚಾಯಿತಿಗಳ 3 ಲಕ್ಷಕ್ಕೂ ಹೆಚ್ಚು ಜನರಿಗೆ ಪ್ರಯೋಜನವಾಗಲಿದೆ. ಗ್ರಾಮೀಣ ಕುಡಿಯುವ ನೀರಿನ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು, ಪ್ರಧಾನಮಂತ್ರಿ ಅವರು ಜಲ ಜೀವನ್ ಮಿಷನ್ ಅಡಿಯಲ್ಲಿ 59 ಕುಡಿಯುವ ನೀರಿನ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ಪಿಎಂಒ ತಿಳಿಸಿದೆ.

ಟಿಬಿ ಮುಕ್ತ ಪಂಚಾಯತ್​ಗೆ ಚಾಲನೆ

ಟಿಬಿ ಮುಕ್ತ ಪಂಚಾಯತ್ ಉಪಕ್ರಮಕ್ಕೂ ಪ್ರಧಾನಿ ಚಾಲನೆ ನೀಡಲಿದ್ದಾರೆ. ಟಿಬಿ ತಡೆ ಮತ್ತು ಚಿತ್ಸೆ, ಕುಟುಂಬ ಕೇಂದ್ರೀಕೃತ ಟಿಬಿ ತಡೆಗಟ್ಟುವಿಕೆ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಉಪಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ‘ಸ್ಟಾಪ್ ಟಿಬಿ’ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದೆ. ವಿಶ್ವಸಂಸ್ಥೆಯು ಸ್ಥಾಪಿಸಿದ ‘ಸ್ಟಾಪ್ ಟಿಬಿ’ 2001ರಲ್ಲಿ ಕಾರ್ಯಾರಂಭ ಮಾಡಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:41 pm, Wed, 22 March 23

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us