
ನವದೆಹಲಿ, ಆಗಸ್ಟ್ 21: ‘ವಂದೇ ಮಾತರಂ’ (Vande Mataram Row) ವಿವಾದದಿಂದ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ರಾಹುಲ್ ಗಾಂಧಿ (Rahul Gandhi) ಹಾಗೂ ಕಾಂಗ್ರೆಸ್ ಅರಾಜಕತೆಯ ರಾಜಕೀಯ ನಡೆಸುತ್ತಿದೆ ಎಂದು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಆರೋಪಿಸಿದ್ದಾರೆ. ಜುಲೈ 20ರಂದು ನವದೆಹಲಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ಯುವಕನೊಬ್ಬ ಪೆಲೆಟ್ ಗುಂಡೇಟಿನಿಂದ ಗಾಯಗೊಂಡಿದ್ದ ಘಟನೆಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಬೇಕೆಂದು ಆಗ್ರಹಿಸಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶದ ರಾಜಧಾನಿಯ ಸಂಸತ್ ಮಾರ್ಗ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ ನಂತರ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಈ ಹೇಳಿಕೆ ನೀಡಿದ್ದಾರೆ.
ಅರಾಜಕತೆಯ ರಾಜಕೀಯ:
ಬಿಜೆಪಿ ಸಂಸದ ಹಾಗೂ ಹಿರಿಯ ನಾಯಕ ರವಿಶಂಕರ್ ಪ್ರಸಾದ್ ಸುದ್ದಿಗೋಷ್ಠಿ ನಡೆಸಿ, “ರಾಹುಲ್ ಗಾಂಧಿ ಯಾವುದೇ ಮುನ್ಸೂಚನೆ ಅಥವಾ ಪೂರ್ವ ಅನುಮತಿಯಿಲ್ಲದೆ ಪೊಲೀಸ್ ಠಾಣೆಯ ಮುಂದೆ ಧರಣಿ ಕುಳಿತು ‘ಅರಾಜಕತೆಯ ರಾಜಕೀಯ’ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ವಿದ್ಯಾರ್ಥಿ ಪ್ರತಿಭಟನೆ ವೇಳೆ ಪೆಲೆಟ್ ಗನ್ ದಾಳಿ: ಸಂತ್ರಸ್ತ ಯುವಕನೊಂದಿಗೆ ಪೊಲೀಸ್ ಠಾಣೆಗೆ ಹೋದ ರಾಹುಲ್ ಗಾಂಧಿ
ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಿದೆ. ಹೀಗಿರುವಾಗ ರಾಹುಲ್ ಗಾಂಧಿಯವರಿಗೆ ದೇಶದ ಕಾನೂನು ಮತ್ತು ನ್ಯಾಯಾಂಗದ ಮೇಲೆ ಗೌರವವಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಇತ್ತೀಚೆಗೆ ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು ತೀವ್ರ ಟೀಕೆಗೆ ಗುರಿಯಾಗಿತ್ತು. ಆ ವಿವಾದದಿಂದ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಈ ರೀತಿ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ ಹಾಗೂ ರವಿಶಂಕರ್ ಪ್ರಸಾದ್ ಆರೋಪಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ