ಈ ಬಾರಿಯೂ ಕೆಂಪು ಕೋಟೆಯ ಸ್ವಾತಂತ್ರ್ಯ ದಿನಾಚರಣೆಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಗೈರು; ಕಾರಣವೇನು?
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೆಂಪು ಕೋಟೆಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಸತತ ಎರಡನೇ ವರ್ಷವೂ ಗೈರುಹಾಜರಾಗಿದ್ದಾರೆ. 2024ರ ಸ್ವಾತಂತ್ರ್ಯ ದಿನಾಚರಣೆಯ ಆಚರಣೆಯ ಸಮಯದಲ್ಲಿ, ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿದ್ದು ಕ್ಯಾಬಿನೆಟ್ ಸಚಿವ ಸ್ಥಾನಮಾನವನ್ನು ಹೊಂದಿರುವ ರಾಹುಲ್ ಗಾಂಧಿ ಅವರಿಗೆ ಕೆಂಪು ಕೋಟೆಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಶಿಷ್ಟಾಚಾರವನ್ನು (ಪ್ರೋಟೋಕಾಲ್) ಮೀರಿ ಹಿಂಭಾಗದ ಸಾಲಿನಲ್ಲಿ ಆಸನ ನೀಡಿದ್ದು ಭಾರಿ ವಿವಾದಕ್ಕೆ ಕಾರಣವಾಗಿತ್ತು.

ನವದೆಹಲಿ, ಆಗಸ್ಟ್ 15: ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ನೇತೃತ್ವದಲ್ಲಿ ನಡೆದ ಕೆಂಪು ಕೋಟೆಯ 80ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಕ್ಕೆ ಈ ಬಾರಿಯೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗೈರುಹಾಜರಾಗಿದ್ದಾರೆ. ಕಳೆದ ವರ್ಷ ಕೂಡ ಈ ಇಬ್ಬರೂ ನಾಯಕರು ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿರಲಿಲ್ಲ. 2024ರಲ್ಲಿ ಪ್ರೊಟೋಕಾಲ್ ಪಾಲಿಸದೆ ರಾಹುಲ್ ಗಾಂಧಿಗೆ 5ನೇ ಸಾಲಿನಲ್ಲಿ ಸೀಟು ನೀಡಿದ್ದೇ ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ. ಈ ನಡುವೆ, ಕಾಂಗ್ರೆಸ್ ನಾಯಕರ ವರ್ತನೆಯನ್ನು ಬಿಜೆಪಿ ಟೀಕಿಸಿದೆ.
ಶಿಷ್ಟಾಚಾರ ಪಾಲನೆಯಾಗಲಿಲ್ಲವೇ?:
ಮೂಲಗಳ ಪ್ರಕಾರ, ಸರಿಯಾದ ಶಿಷ್ಟಾಚಾರವನ್ನು (ಪ್ರೋಟೋಕಾಲ್) ಪಾಲಿಸದ ಕಾರಣಕ್ಕಾಗಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಇಬ್ಬರೂ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ. ಆಸನಗಳ ವ್ಯವಸ್ಥೆ ಮತ್ತು ಇತರ ಸಾಂಪ್ರದಾಯಿಕ ಶಿಷ್ಟಾಚಾರಗಳು ಅವರ ಹುದ್ದೆಗಳಿಗೆ ಅನುಗುಣವಾಗಿರಲಿಲ್ಲ ಎಂದು ಮೂಲಗಳು ತಿಳಿಸಿವೆ. ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಅವರಿಗೆ ಆಹ್ವಾನ ನೀಡಲಾಗಿತ್ತು. ಅಧಿಕೃತ ಆದ್ಯತಾ ಪಟ್ಟಿ ಪ್ರಕಾರ ಅವರ ಆಸನದ ವ್ಯವಸ್ಥೆಯನ್ನು ನಿರ್ಧರಿಸಲಾಗುವುದು ಎಂದು ರಕ್ಷಣಾ ಸಚಿವಾಲಯ ತಿಳಿಸಿತ್ತು. ರಾಷ್ಟ್ರಪತಿ ಸಚಿವಾಲಯ ಹೊರಡಿಸಿದ ಆದ್ಯತಾ ಪಟ್ಟಿಯ ಪ್ರಕಾರ, ಲೋಕಸಭೆಯ ವಿರೋಧ ಪಕ್ಷದ ನಾಯಕರು ಕೇಂದ್ರ ಸಂಪುಟ ಸಚಿವರಿಗೆ ಸಮಾನವಾದ ಶ್ರೇಣಿಯನ್ನು ಹೊಂದಿರುತ್ತಾರೆ.
ಇದನ್ನೂ ಓದಿ: PM Modi Speech: ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ಕೋಚಿಂಗ್ ಕ್ಲಾಸ್; ಪ್ರಧಾನಿ ಮೋದಿ ಮಾಡಿದ ಪ್ರಮುಖ ಘೋಷಣೆಗಳಿವು
2024ರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಹುಲ್ ಗಾಂಧಿಯವರ ಆಸನದ ವ್ಯವಸ್ಥೆಯ ಕುರಿತು ಉಂಟಾಗಿದ್ದ ವಿವಾದದ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಇಬ್ಬರು ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಕಳೆದ ವರ್ಷ ಹಾಗೂ ಈ ವರ್ಷ ಕಾರ್ಯಕ್ರಮಕ್ಕೆ ಆಗಮಿಸಿಲ್ಲ ಎನ್ನಲಾಗಿದೆ. 2024ರಲ್ಲಿ ಕ್ಯಾಬಿನೆಟ್ ದರ್ಜೆಯೊಂದಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡಿದ್ದ ರಾಹುಲ್ ಗಾಂಧಿ ಅವರಿಗೆ ಕೆಂಪು ಕೋಟೆಯಲ್ಲಿ 5ನೇ ಸಾಲಿನಲ್ಲಿ ಆಸನವನ್ನು ನೀಡಲಾಗಿತ್ತು. ಶಿಷ್ಟಾಚಾರದ ಪ್ರಕಾರ, ಯಾವುದೇ ಸಾಂಪ್ರದಾಯಿಕ ಮತ್ತು ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ವಿರೋಧ ಪಕ್ಷದ ನಾಯಕರಿಗೆ ಮೊದಲ ಸಾಲಿನಲ್ಲಿಯೇ ಆಸನ ನೀಡಲಾಗುತ್ತದೆ.
ಇದನ್ನು ತೀವ್ರವಾಗಿ ಟೀಕಿಸಿದ್ದ ಕಾಂಗ್ರೆಸ್, ಸರ್ಕಾರವು ವಿರೋಧ ಪಕ್ಷದ ನಾಯಕರ ಕಚೇರಿಗೆ ಅವಮಾನ ಮಾಡಿದೆ ಎಂದು ಆರೋಪಿಸಿತ್ತು. ಆ ಸಮಾರಂಭದಲ್ಲಿ ಭಾಗವಹಿಸಿದ್ದ ಒಲಿಂಪಿಕ್ ಕ್ರೀಡಾಪಟುಗಳಿಗೆ ಆದ್ಯತೆ ನೀಡಲು ಈ ಆಸನದ ವ್ಯವಸ್ಥೆ ಮಾಡಲಾಗಿತ್ತು ಎಂದು ರಕ್ಷಣಾ ಸಚಿವಾಲಯ ಸ್ಪಷ್ಟಪಡಿಸಿತ್ತು. ಇದಾದ ಬಳಿಕ 2025ರ ಕೆಂಪು ಕೋಟೆಯ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೂ ರಾಹುಲ್ ಗಾಂಧಿ ಮತ್ತು ಖರ್ಗೆ ಗೈರಾಗಿದ್ದರು.
ರಾಷ್ಟ್ರೀಯ ಸಾಂಪ್ರದಾಯಿಕ ಕಾರ್ಯಕ್ರಮಗಳಲ್ಲಿ ತಮ್ಮ ನಾಯಕರನ್ನು ನಡೆಸಿಕೊಳ್ಳುವ ರೀತಿ ಮತ್ತು ಶಿಷ್ಟಾಚಾರದ ಕುರಿತು ಕಾಂಗ್ರೆಸ್ ಪದೇ ಪದೇ ಕಳವಳ ವ್ಯಕ್ತಪಡಿಸುತ್ತಲೇ ಬಂದಿದೆ. ಈ ವರ್ಷದ ಗಣರಾಜ್ಯೋತ್ಸವದ ಆಚರಣೆಯಲ್ಲೂ ರಾಹುಲ್ ಗಾಂಧಿ ಮತ್ತು ಖರ್ಗೆ ಅವರಿಗೆ ಮೂರನೇ ಸಾಲಿನಲ್ಲಿ ಆಸನ ನೀಡಲಾಗಿತ್ತು ಎಂದು ಆರೋಪಿಸಿ ಕಾಂಗ್ರೆಸ್ ಎನ್ಡಿಎ ಸರ್ಕಾರವನ್ನು ಟೀಕಿಸಿದೆ. ಆದರೆ 2025 ಮತ್ತು 2026ರ ಗಣರಾಜ್ಯೋತ್ಸವದ ಆಚರಣೆಯಲ್ಲಿನ ಆಸನ ವ್ಯವಸ್ಥೆಯನ್ನು ಆದ್ಯತಾ ಪಟ್ಟಿಗೆ ಅನುಗುಣವಾಗಿಯೇ ಮಾಡಲಾಗಿದೆ ಎಂದು ರಕ್ಷಣಾ ಸಚಿವಾಲಯ ಪ್ರತಿಪಾದಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




