ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಹೇಳಿಕೆ; ರಾಹುಲ್ ಗಾಂಧಿಗೆ ಜಾಮೀನು
2022ರ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಾಗಿದೆ. ಇಂದು ಲಕ್ನೋ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿಗೆ ಜಾಮೀನು ಮಂಜೂರು ಮಾಡಲಾಗಿದೆ. ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಭಾರತೀಯ ಸೈನಿಕರ ವಿರುದ್ಧ ನೀಡಿದ ಮಾನನಷ್ಟ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಅಜಯ್ ರೈ ಮತ್ತು ಉಸ್ತುವಾರಿ ಅವಿನಾಶ್ ಪಾಂಡೆ ಅವರೊಂದಿಗೆ ವಿಶೇಷ ಸಂಸದ/ಶಾಸಕ ನ್ಯಾಯಾಲಯಕ್ಕೆ ಅವರನ್ನು ಕರೆದೊಯ್ಯಲಾಯಿತು.

ಲಕ್ನೋ, ಜುಲೈ 15: 2022ರ ಭಾರತ್ ಜೋಡೋ ಯಾತ್ರೆಯ (Bharat Jodo Yatra) ಸಂದರ್ಭದಲ್ಲಿ ಭಾರತೀಯ ಸೇನೆಯ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಲಕ್ನೋ ನ್ಯಾಯಾಲಯ ಜಾಮೀನು ನೀಡಿದೆ. ಮಾಹಿತಿಯ ಪ್ರಕಾರ, ಹೆಚ್ಚುವರಿ ಸಿಜೆಎಂ ಅಲೋಕ್ ವರ್ಮಾ ನೇತೃತ್ವದ ಸಂಸದ-ಶಾಸಕ ನ್ಯಾಯಾಲಯವು ತಲಾ 20,000 ರೂ.ಗಳ ಎರಡು ಬಾಂಡ್ಗಳನ್ನು ಒದಗಿಸುವ ಮೂಲಕ ರಾಹುಲ್ ಗಾಂಧಿ ಅವರಿಗೆ ರಿಲೀಫ್ ನೀಡಿದೆ.
ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೈನಿಕರ ವಿರುದ್ಧ ರಾಹುಲ್ ಗಾಂಧಿ ನೀಡಿದ ಅವಹೇಳನಕಾರಿ ಹೇಳಿಕೆಗಳ ಕಾರಣದಿಂದ ಈ ಮಾನನಷ್ಟ ಪ್ರಕರಣ ದಾಖಲಿಸಲಾಗಿತ್ತು. ನ್ಯಾಯಾಲಯದ ಸಮನ್ಸ್ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಲಕ್ನೋದಲ್ಲಿರುವ ಸಂಸದರು ಮತ್ತು ಶಾಸಕರ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಇಂದು ಹಾಜರಾದರು.
ಇದನ್ನೂ ಓದಿ: ರಾಹುಲ್ ಗಾಂಧಿ, ರೇವಂತ್ ರೆಡ್ಡಿಯಿಂದ ಸಶಸ್ತ್ರ ಪಡೆಗಳಿಗೆ ಅವಮಾನ; ಕೇಂದ್ರ ಸಚಿವ ಕಿಶನ್ ರೆಡ್ಡಿ ಟೀಕೆ
ರಾಹುಲ್ ಗಾಂಧಿ ಏನು ಹೇಳಿದ್ದರು?:
ಡಿಸೆಂಬರ್ 16, 2022ರಂದು ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯನ್ನು ಪ್ರಸ್ತಾಪಿಸಿದ್ದರು. “ಚೀನಾದ ಸೈನಿಕರು ನಮ್ಮ ಸೈನಿಕರನ್ನು ಥಳಿಸುತ್ತಿದ್ದಾರೆ. ಯಾರೂ ಅದರ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಿಲ್ಲ” ಎಂದು ರಾಹುಲ್ ಟೀಕಿಸಿದ್ದರು. “ಚೀನಾದ ಸೈನಿಕರು ನಮ್ಮ ಸೈನಿಕರನ್ನು ಥಳಿಸುತ್ತಿದ್ದಾರೆ” ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು. ಏಕೆಂದರೆ ಭಾರತೀಯ ಸೇನೆಯು ಡಿಸೆಂಬರ್ 12ರಂದು ಅಧಿಕೃತ ಹೇಳಿಕೆಯನ್ನು ನೀಡಿತ್ತು. ಚೀನಾದ ಸೈನಿಕರು ಭಾರತದ ಪ್ರದೇಶಕ್ಕೆ ನುಸುಳಲು ಪ್ರಯತ್ನಿಸಿದರು. ಆದರೆ ಅವರಿಗೆ ದೃಢ ಮತ್ತು ಸೂಕ್ತ ಪ್ರತಿಕ್ರಿಯೆಯನ್ನು ನೀಡಲಾಯಿತು ಎಂದು ಸ್ಪಷ್ಟಪಡಿಸಿತ್ತು.
ಇದನ್ನೂ ಓದಿ: ನವದೆಹಲಿ: ಹುಟ್ಟುಹಬ್ಬದ ದಿನವೇ ಹೊಸ ಬಂಗಲೆಗೆ ಸ್ಥಳಾಂತರಗೊಂಡ ರಾಹುಲ್ ಗಾಂಧಿ
ರಾಹುಲ್ ಗಾಂಧಿಯವರ ಹೇಳಿಕೆಗಳ ನಂತರ, ಗಡಿ ರಸ್ತೆಗಳ ಸಂಘಟನೆಯ (BRO) ಮಾಜಿ ನಿರ್ದೇಶಕ ಉದಯ್ ಶಂಕರ್ ಶ್ರೀವಾಸ್ತವ ಲಕ್ನೋ ನ್ಯಾಯಾಲಯದಲ್ಲಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ರಾಹುಲ್ ಗಾಂಧಿ ಪರಿಹಾರ ಕೋರಿ ಅಲಹಾಬಾದ್ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ಆದರೆ ಅವರ ಅರ್ಜಿಯನ್ನು ವಜಾಗೊಳಿಸಲಾಯಿತು. ಚೀನಾ ಸೈನಿಕರು ಭಾರತೀಯ ಸೈನಿಕರನ್ನು ಥಳಿಸಿದ್ದಾರೆ ಎಂಬ ರಾಹುಲ್ ಗಾಂಧಿಯವರ ಹೇಳಿಕೆಯಿಂದ ತಮ್ಮ ಭಾವನೆಗಳಿಗೆ ನೋವಾಗಿದೆ ಎಂದು ದೂರುದಾರರು ಆರೋಪಿಸಿದ್ದರು. ಆದರೆ, ಕಳೆದ 5 ವಿಚಾರಣೆಗಳಲ್ಲಿ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಇದೇ ಮೊದಲ ಬಾರಿ ಅವರು ವಿಚಾರಣೆಗೆ ಹಾಜರಾಗಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




