Rajnath Singh: ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲು

Rajnath Singh Health Updates: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆರೋಗ್ಯ ತುಸು ಹದಗೆಟ್ಟಿದ್ದು ಗುರುವಾರ ರಾತ್ರಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜನಾಥ್ ಸಿಂಗ್​ಗೆ ಏನಾಗಿದೆ? ಅವರ ಆರೋಗ್ಯದ ಬಗ್ಗೆ ಏಮ್ಸ್ ವೈದ್ಯರು ಹೇಳಿದ್ದೇನು? ಎಲ್ಲ ವಿವರ ಇಲ್ಲಿದೆ.

Rajnath Singh: ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲು
ರಕ್ಷಣಾ ಸಚಿವ ರಾಜನಾಥ್ ಸಿಂಗ್
Image Credit source: PTI

Updated on: Jul 12, 2024 | 6:45 AM

ನವದೆಹಲಿ, ಜುಲೈ 12: ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಆಸ್ಪತ್ರೆಯ ನ್ಯೂರೋ ಸರ್ಜರಿ ವಿಭಾಗಕ್ಕೆ ಗುರುವಾರ ರಾತ್ರಿ ದಾಖಲಾಗಿದ್ದಾರೆ. ಅವರು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಅವರು ನ್ಯೂರೋ ಸರ್ಜನ್ ಡಾ. ಅಮೋಲ್ ರಹೇಜಾ ಅವರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಕ್ಷಣಾ ಸಚಿವರ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್‌ನ ಮಾಧ್ಯಮ ವಿಭಾಗದ ಉಸ್ತುವಾರಿ ಡಾ. ರೀಮಾ ದಾದಾ ತಿಳಿಸಿದ್ದಾರೆ. ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ. ಎಂಆರ್​​ಐ ಮಾಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಸ್ತುತ ಉತ್ತರ ಪ್ರದೇಶದ ರಾಜಧಾನಿ ಲಖನೌದಿಂದ ಸಂಸದರಾಗಿದ್ದಾರೆ. ಅವರು 1951 ರ ಜುಲೈ 10 ರಂದು ಉತ್ತರ ಪ್ರದೇಶದ ವಾರಾಣಸಿ ಜಿಲ್ಲೆಯ ಭಭೋರಾ ಗ್ರಾಮದಲ್ಲಿ ರಜಪೂತ ಕುಟುಂಬದಲ್ಲಿ ಜನಿಸಿದರು. ಅವರ ತಂದೆಯ ಹೆಸರು ರಾಮ್ ಬದನ್ ಸಿಂಗ್ ಮತ್ತು ತಾಯಿಯ ಹೆಸರು ಗುಜರಾತಿ ದೇವಿ. ಸಾಮಾನ್ಯ ರೈತ ಕುಟುಂಬದ ಹಿನ್ನೆಲೆಯ ರಾಜನಾಥ್ ಇಂದು ದೇಶದ ರಾಜಕೀಯದಲ್ಲಿ ದೊಡ್ಡ ಹೆಸರು. ಅವರು ಗೋರಖ್‌ಪುರ ವಿಶ್ವವಿದ್ಯಾಲಯದಲ್ಲಿ ಓದಿದ್ದಾರೆ.

ರಾಜನಾಥ್ ಸಿಂಗ್ ರಾಜಕೀಯ ಹಿನ್ನೆಲೆ

ರಾಜನಾಥ್ ಸಿಂಗ್ ಕೇವಲ 13 ನೇ ವಯಸ್ಸಿನಲ್ಲಿ ಆರ್‌ಎಸ್‌ಎಸ್‌ಗೆ ಸೇರಿದರು. 1977 ರಲ್ಲಿ ಅವರು ಮಿರ್ಜಾಪುರದಿಂದ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾದರು. ಜಯಪ್ರಕಾಶ ನಾರಾಯಣ ಚಳವಳಿಯಿಂದ ಅವರು ಬಹಳ ಪ್ರಭಾವಿತರಾಗಿದ್ದರು. 1975ರಲ್ಲಿ ತುರ್ತು ಪರಿಸ್ಥಿತಿ ಹೇರಿದಾಗ ರಾಜನಾಥ್ ಕೂಡ ಜೈಲಿಗೆ ಹೋಗಬೇಕಾಯಿತು. ಜೈಲಿನಿಂದ ಹೊರಬಂದ ನಂತರ ಮತ್ತೊಮ್ಮೆ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾದರು.

ಇದನ್ನೂ ಓದಿ: ಕೇಂದ್ರ ಸರ್ಕಾರದ ಉಚಿತ ಪಡಿತರ ಯೋಜನೆ ಮುಂದುವರಿಯಲಿದೆ; ಪ್ರಲ್ಹಾದ್ ಜೋಶಿ ಸ್ಪಷ್ಟನೆ

1991 ರಲ್ಲಿ ಭಾರತೀಯ ಜನತಾ ಪಕ್ಷವು ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ ಸರ್ಕಾರವನ್ನು ರಚಿಸಿದಾಗ, ರಾಜನಾಥ್ ಅವರಿಗೆ ಶಿಕ್ಷಣ ಸಚಿವರ ಜವಾಬ್ದಾರಿಯನ್ನು ನೀಡಲಾಯಿತು. ಇದಾದ ನಂತರ 2000ನೇ ಇಸವಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಯೂ ಆದರು. ರಾಜನಾಥ್ ಸಿಂಗ್ ಎರಡು ಬಾರಿ ಪಕ್ಷದ ಅಧ್ಯಕ್ಷರೂ ಆಗಿದ್ದಾರೆ. ರಾಜನಾಥ್ ಸಿಂಗ್ ಪಕ್ಷ ಯಾವುದೇ ಸಂಕೀರ್ಣ ಸಮಸ್ಯೆ ಎದುರಿಸಿದಾಗಲೆಲ್ಲಾ ಟ್ರಬಲ್‌ಶೂಟರ್ ಪಾತ್ರವನ್ನು ನಿರ್ವಹಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us