ರಾಮ ಮಂದಿರ ದೇಣಿಗೆ ಕಳ್ಳತನ​: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಅನಿಲ್ ಮಿಶ್ರಾ ದಿಢೀರ್ ರಾಜೀನಾಮೆ

ಅಯೋಧ್ಯೆಯ ರಾಮ ಮಂದಿರ ಟ್ರಸ್ಟ್ ದೇಣಿಗೆ ಕಳ್ಳತನ ಹಗರಣದಲ್ಲಿ ಮಹತ್ವದ ತಿರುವು. ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಆಪ್ತ ಸಹಾಯಕ ಸೇರಿದಂತೆ 8 ಜನರ ಬಂಧನದ ನಂತರ, ರಾಯ್ ಮತ್ತು ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಈ ಘಟನೆಯು ವಿರೋಧ ಪಕ್ಷಗಳ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದ್ದು, ಮುಂಬರುವ ಯುಪಿ ಚುನಾವಣೆಯ ಮೇಲೆ ಪರಿಣಾಮ ಬೀರಬಹುದು.

ರಾಮ ಮಂದಿರ ದೇಣಿಗೆ ಕಳ್ಳತನ​: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಅನಿಲ್ ಮಿಶ್ರಾ ದಿಢೀರ್ ರಾಜೀನಾಮೆ
ಚಂಪತ್ ರಾಯ್

Updated on: Jun 26, 2026 | 1:36 PM

ಮುಖ್ಯಾಂಶಗಳು

  • ಚಂಪತ್ ರಾಯ್, ಅನಿಲ್ ಮಿಶ್ರಾ ರಾಮ ಮಂದಿರ ಟ್ರಸ್ಟ್‌ಗೆ ರಾಜೀನಾಮೆ
  • ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯ ಕೃಷ್ಣ ಮೋಹನ್ ಅವರು ದೂರು ದಾಖಲಿಸಿದ್ದಾರೆ
  • ಭಕ್ತರ ಕಾಣಿಕೆಗಳ ನಿರ್ವಹಣೆ, ಲೆಕ್ಕಪತ್ರ ನಿರ್ವಹಣೆ ಮತ್ತು ಮೇಲ್ವಿಚಾರಣೆಯಲ್ಲಿ ಗಂಭೀರ ಅಕ್ರಮಗಳನ್ನು ಗುರುತಿಸಿದೆ

ಲಕ್ನೋ, ಜೂನ್ 26: ಅಯೋಧ್ಯೆ(Ayodhya)ಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ದೇಣಿಗೆ ಮತ್ತು ಕಾಣಿಕೆ ಹಣದ ಕಳ್ಳತನ ಹಗರಣವು ಈಗ ದೇಶದ ಅತ್ಯಂತ ದೊಡ್ಡ ರಾಜಕೀಯ ಬಿರುಗಾಳಿಯಾಗಿ ಮಾರ್ಪಟ್ಟಿದೆ. ರಾಮ ಮಂದಿರ ಟ್ರಸ್ಟ್‌ನ  ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಆಪ್ತ ಸಹಾಯಕ (PA) ಟಿನ್ನು ಯಾದವ್ ಸೇರಿದಂತೆ ಎಂಟು ಜನರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ, ಟ್ರಸ್ಟ್‌ನ ಇಬ್ಬರು ಪ್ರಮುಖ ಉನ್ನತ ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ.

ವಿಶೇಷ ತನಿಖಾ ತಂಡ (SIT) ನಡೆಸಿದ ತೀವ್ರ ಕಾರ್ಯಾಚರಣೆಯ ನಂತರ ಎಂಟು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿತ್ತು. ಈ ಬಂಧನದ ಬೆಳವಣಿಗೆಯಿಂದಾಗಿ ಟ್ರಸ್ಟ್‌ನ ಆಡಳಿತ ಮಂಡಳಿಯ ಮೇಲೆ ಭಾರಿ ಒತ್ತಡ ಉಂಟಾಗಿತ್ತು. ಇದರ ಬೆನ್ನಲ್ಲೇ. ಅವರೊಂದಿಗೆ ಟ್ರಸ್ಟ್‌ನ ಮತ್ತೊಬ್ಬ ಹಿರಿಯ ಹಾಗೂ ಪ್ರಮುಖ ಸದಸ್ಯರಾದ ಅನಿಲ್ ಮಿಶ್ರಾ ಕೂಡ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಹಗರಣದ ತೀವ್ರತೆ ಹಾಗೂ ರಾಜೀನಾಮೆಗೆ ಕಾರಣ
ಬಂಧಿತ ಆರೋಪಿಗಳೆಲ್ಲರೂ ದೇವಸ್ಥಾನದ ಕಾಣಿಕೆ ಮತ್ತು ನಗದು ಹಣವನ್ನು ಎಣಿಕೆ ಮಾಡುವ ಪ್ರಕ್ರಿಯೆಯಲ್ಲಿದ್ದ ಸಿಬ್ಬಂದಿಯಾಗಿದ್ದರು. ಸ್ವತಃ ಚಂಪತ್ ರಾಯ್ ಅವರ ಅತ್ಯಂತ ಆಪ್ತ ಸಹಾಯಕನೇ ಸಿಸಿಟಿವಿ ಸಾಕ್ಷ್ಯಗಳ ಆಧಾರದ ಮೇಲೆ ಜೈಲು ಪಾಲಾಗಿರುವುದರಿಂದ, ಇಡೀ ಹಗರಣದ ನೈತಿಕ ಹೊಣೆ ಹೊತ್ತು ಅಥವಾ ತನಿಖೆಯ ತೀವ್ರತೆಗೆ ಹೆದರಿ ಈ ಇಬ್ಬರು ಪ್ರಮುಖರು ಟ್ರಸ್ಟ್‌ನಿಂದ ಹೊರನಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಓದಿ: ಅಯೋಧ್ಯೆ ರಾಮಮಂದಿರ ದೇಣಿಗೆ ವಂಚನೆ: ಲಕ್ನೋ ಹೈಕೋರ್ಟ್‌ನಲ್ಲಿ ಇಂದು ಅರ್ಜಿ ವಿಚಾರಣೆ

ವಿರೋಧ ಪಕ್ಷಗಳ ಹೋರಾಟಕ್ಕೆ ಸಿಕ್ಕ ದೊಡ್ಡ ಜಯ
ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನವೇ ಈ ಹಗರಣ ಆಡಳಿತಾರೂಢ ಬಿಜೆಪಿ ಮತ್ತು ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ದೊಡ್ಡ ಹಿನ್ನಡೆಯನ್ನು ತಂದೊಡ್ಡಿದೆ.

ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಈ ಕಳ್ಳತನದ ವಿರುದ್ಧ ನಿರಂತರವಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದವು ಹಾಗೂ ಉನ್ನತ ಅಧಿಕಾರಿಗಳ ರಾಜೀನಾಮೆಗೆ ಒತ್ತಾಯಿಸುತ್ತಿದ್ದವು.

ಈಗ ಟ್ರಸ್ಟ್‌ನ ಇಬ್ಬರು ಪ್ರಮುಖ ಹಿರಿಯರೇ ರಾಜೀನಾಮೆ ನೀಡಿರುವುದರಿಂದ ವಿರೋಧ ಪಕ್ಷಗಳ ಆರೋಪಗಳಿಗೆ ಮತ್ತಷ್ಟು ಬಲ ಬಂದಂತಾಗಿದೆ. ಮುಂಬರುವ ದಿನಗಳಲ್ಲಿ ಈ ಪ್ರಕರಣವು ಇನ್ನಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:33 pm, Fri, 26 June 26

Follow Us