ರಾಮ ಮಂದಿರ ದೇಣಿಗೆ ಹಗರಣ; 8 ಆರೋಪಿಗಳಿಗೂ 14 ದಿನಗಳ ನ್ಯಾಯಾಂಗ ಬಂಧನ

ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗದ ಆರೋಪ ಎದುರಿಸುತ್ತಿರುವ ಎಲ್ಲಾ 8 ಮಂದಿ ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯವು ಇಂದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೆ ಆರೋಪಿಗಳು ನ್ಯಾಯಾಂಗ ಬಂಧನದಲ್ಲೇ ಮುಂದುವರಿಯಬೇಕು ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ ನಂತರ ಈ ಆದೇಶವನ್ನು ಹೊರಡಿಸಲಾಗಿದೆ.

ರಾಮ ಮಂದಿರ ದೇಣಿಗೆ ಹಗರಣ; 8 ಆರೋಪಿಗಳಿಗೂ 14 ದಿನಗಳ ನ್ಯಾಯಾಂಗ ಬಂಧನ
Ram Mandir Row
Image Credit source: TV9

Updated on: Jun 29, 2026 | 4:46 PM

ಮುಖ್ಯಾಂಶಗಳು

  • ರಾಮ ಮಂದಿರದ ದೇಣಿಗೆ ಕದ್ದ 8 ಆರೋಪಿಗಳಿಗೆ ಹಿನ್ನಡೆ
  • ಎಲ್ಲ ಆರೋಪಿಗಳಿಗೂ 14 ದಿನ ನ್ಯಾಯಾಂಗ ಬಂಧನ
  • ಆರೋಪಿಗಳ ಪರ ವಾದ ಮಾಡಲ್ಲ ಎಂದ ವಕೀಲರು

ಅಯೋಧ್ಯೆ, ಜೂನ್ 29: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗ ಪ್ರಕರಣದ (Ram Temple Donation Row) ಎಲ್ಲಾ 8 ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯವು ಇಂದಿನಿಂದ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಹೀಗಾಗಿ, ಈ ಆರೋಪಿಗಳು ಜುಲೈ 13ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಲಿದ್ದಾರೆ. 3 ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಎಂಟೂ ಜನ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ಅಯೋಧ್ಯೆ ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿತು.

ಅಯೋಧ್ಯೆಯ ರಾಮ ಮಂದಿರಕ್ಕೆ ಬಂದಿದ್ದ ದೇಣಿಗೆ ಹಣ ಮತ್ತು ಚಿನ್ನ, ಬೆಳ್ಳಿ ವಸ್ತುಗಳ ದುರುಪಯೋಗವು ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಗರಣದ ಬೆನ್ನಲ್ಲೇ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಅದರ ಸದಸ್ಯ ಅನಿಲ್ ಮಿಶ್ರಾ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಇದಕ್ಕೂ ಮುನ್ನ ಶನಿವಾರ, ಈ ಆರೋಪಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು ಎಂದು ಟ್ರಸ್ಟ್ ಭರವಸೆ ನೀಡಿತ್ತು.


ಚಂಪತ್ ರಾಯ್ ಅವರ ಮಾಜಿ ಚಾಲಕ ಸೇರಿದಂತೆ ದೇಣಿಗೆ ದುರುಪಯೋಗಪಡಿಸಿಕೊಂಡ ಆರೋಪ ಎದುರಿಸುತ್ತಿರುವ 8 ಜನರನ್ನು ಕಳೆದ ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ತಿಂಗಳಿಗೆ 15 ಸಾವಿರ ರೂ. ಸಂಬಳ, 22ನೇ ವಯಸ್ಸಿಗೆ ಕೋಟ್ಯಾಧಿಪತಿ: ರಾಮಮಂದಿರ ಕಾಣಿಕೆ ಲೂಟಿ ಮಾಡಿದ ಅನುಕಲ್ಪ್ ಮಿಶ್ರಾ ಅಕ್ರಮ ಆಸ್ತಿ ಕಂಡು ಪೊಲೀಸರೇ ಶಾಕ್!

ಆರೋಪಿಗಳ ಪರ ವಾದಿಸದಂತೆ ವಕೀಲರ ಸಂಘದ ನಿರ್ಣಯ;

ಅಯೋಧ್ಯೆಯ ಫೈಜಾಬಾದ್ ಬಾರ್ ಅಸೋಸಿಯೇಷನ್ ಇಂದು ಒಂದು ಮಹತ್ವದ ನಿರ್ಣಯವನ್ನು ಅಂಗೀಕರಿಸಿದ್ದು, ತನ್ನ ಯಾವುದೇ ಸದಸ್ಯರು ರಾಮ ಮಂದಿರ ದೇಣಿಗೆ ಕಳ್ಳತನದ ಆರೋಪಿಗಳ ಪರವಾಗಿ ವಕಾಲತ್ ವಹಿಸುವುದಿಲ್ಲ ಎಂದು ಘೋಷಿಸಿದೆ. ಈ ಆದೇಶವನ್ನು ಉಲ್ಲಂಘಿಸುವ ಯಾವುದೇ ವಕೀಲರಿಗೆ 5 ಲಕ್ಷ ರೂ. ದಂಡ ವಿಧಿಸಲಾಗುವುದು ಎಂದು ಅಸೋಸಿಯೇಷನ್ ಎಚ್ಚರಿಸಿದೆ. ಇದರಿಂದಾಗಿ ಆರೋಪಿಗಳ ಕಾನೂನು ಹೋರಾಟಕ್ಕೆ ವಕೀಲರು ಸಿಗದಂತಾಗಿದೆ.

ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ:

ರಾಮ ಮಂದಿರದ ದೇಣಿಗೆ ದುರುಪಯೋಗದ ಆರೋಪಗಳ ಕುರಿತು ನಿಷ್ಪಕ್ಷಪಾತ ಮತ್ತು ಕಾಲಮಿತಿಯ ತನಿಖೆಯನ್ನು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ವಿಷಯವನ್ನು ಬೇಸಿಗೆ ರಜೆಯ ನಂತರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ: ರಾಮನ ಹಣ ಕದ್ದವರಿಗೆ ಮತ್ತೊಂದು ಶಾಕ್; ಆರೋಪಿಗಳ ಪರ ವಾದಿಸುವ ವಕೀಲರಿಗೆ 5 ಲಕ್ಷ ರೂ. ದಂಡದ ಎಚ್ಚರಿಕೆ!

ರಾಮ ಮಂದಿರ ಟ್ರಸ್ಟ್‌ನ ವಿನಂತಿಯ ಮೇರೆಗೆ ಉತ್ತರ ಪ್ರದೇಶ ಸರ್ಕಾರವು ಜೂನ್ 13ರಂದು ಈ ಹಗರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿತ್ತು. ಈ ಎಸ್‌ಐಟಿಯಲ್ಲಿ ಲಕ್ನೋ ವಿಭಾಗೀಯ ಕಮಿಷನರ್ ವಿಜಯ್ ವಿಶ್ವಾಸ್ ಪಂತ್, ಐಜಿಪಿ ಕಿರಣ್ ಎಸ್ ಮತ್ತು ಹಣಕಾಸು ಇಲಾಖೆಯ ವಿಶೇಷ ಕಾರ್ಯದರ್ಶಿ ನೀಲ್ ರತನ್ ಇದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us