ನೀಟ್ ಪ್ರತಿಭಟನೆ, ಬಂಧಿತ 18 ವರ್ಷದೊಳಗಿನ ವಿದ್ಯಾರ್ಥಿಗಳ ಬಿಡುಗಡೆಗೊಳಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಸೂಚನೆ
ಸುಪ್ರೀಂ ಕೋರ್ಟ್ ನೀಟ್ ಪ್ರತಿಭಟನೆಗಳಲ್ಲಿ ಬಂಧಿತರಾಗಿದ್ದ 18 ವರ್ಷದೊಳಗಿನ ವಿದ್ಯಾರ್ಥಿಗಳನ್ನು ತಕ್ಷಣ ಬಿಡುಗಡೆ ಮಾಡಲು ಎಲ್ಲಾ ರಾಜ್ಯಗಳಿಗೆ ಆದೇಶಿಸಿದೆ. ಶಾಂತಿಯುತ ಪ್ರತಿಭಟನೆಯು ಸಾಂವಿಧಾನಿಕ ಹಕ್ಕು ಎಂದು ಸುಪ್ರೀಂ ಒತ್ತಿಹೇಳಿದೆ. ಪೊಲೀಸ್ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ಮತ್ತು ಹೊಸ ಭದ್ರತಾ ಶಿಷ್ಟಾಚಾರಗಳನ್ನು ರೂಪಿಸಲು ಸೂಚಿಸಿದೆ. ಇದು ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸುವ ಪ್ರಮುಖ ಹೆಜ್ಜೆಯಾಗಿದೆ.

ನವದೆಹಲಿ, ಜುಲೈ 28: ನೀಟ್(NEET) ಅಕ್ರಮದ ವಿರುದ್ಧ ದೆಹಲಿಯ ಜಂತರ್ ಮಂತರ್ ಸೇರಿ ರಾಜ್ಯದೆಲ್ಲೆಡೆ ಪ್ರತಿಭಟನೆಯಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿದ್ದ 18 ವರ್ಷದೊಳಗಿನ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಸುಪ್ರೀಂ ವಿದ್ಯಾರ್ಥಿಗಳನ್ನು ದಂಡನಾತ್ಮಕ ಕ್ರಮದಿಂದ ರಕ್ಷಿಸಿದೆ. ಮಂಗಳವಾರ, ಸುಪ್ರೀಂ ಕೋರ್ಟ್ ಕ್ರಿಮಿನಲ್ ದಾಖಲೆಗಳಿಲ್ಲದವರನ್ನು ಬಿಡುಗಡೆ ಮಾಡಲು ಆದೇಶಿಸಿದೆ.
ಕಾಕ್ರೋಚ್ ಜನತಾ ಪಾರ್ಟಿ ಹಾಗೂ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಸಂಭವಿಸಿದ ಹಿಂಸಾಚಾರ ಮತ್ತು ಪೊಲೀಸ್ ದೌರ್ಜನ್ಯದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಪ್ರತಿಭಟನೆಗಳ ವೇಳೆ ಬಂಧನಕ್ಕೊಳಗಾಗಿರುವ 18 ವರ್ಷದೊಳಗಿನ ಎಲ್ಲಾ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ದೇಶದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠ ಸೂಚನೆ ನೀಡಿದೆ.
ಸಾಂವಿಧಾನಿಕ ಹಕ್ಕು:ಶಾಂತಿಯುತ ಮತ್ತು ಕಾನೂನುಬದ್ಧ ಪ್ರತಿಭಟನೆ ನಡೆಸುವುದು ಸಂವಿಧಾನ ನೀಡಿರುವ ಮೂಲಭೂತ ಹಕ್ಕು. ಶಾಂತಿಯುತ ಆಂದೋಲನ ನಡೆಯುತ್ತಿರುವಾಗ ಕೇವಲ ಪ್ರತಿಭಟನೆ ಎಂಬ ಕಾರಣಕ್ಕೆ ಪೊಲೀಸರು ಅತಿಯಾದ ಬಲಪ್ರಯೋಗ ಅಥವಾ ದೌರ್ಜನ್ಯ ಎಸಗಲು ಸಾಧ್ಯವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.
ಮತ್ತಷ್ಟು ಓದಿ: ನಿಟ್ಟುಸಿರು ಬಿಟ್ಟ ನೀಟ್ ಪ್ರತಿಭಟನಾಕಾರರು: ಬಿಹಾರದ ಬೆನ್ನಲ್ಲೇ ಪ್ರಕರಣ ಹಿಂಪಡೆಯಲು ಅಸ್ಸಾಂ ಸರ್ಕಾರ ನಿರ್ಧಾರ
ಬಲಪ್ರಯೋಗ ನಡೆಸಿದ ಅಧಿಕಾರಿಗಳ ಜವಾಬ್ದಾರಿಯನ್ನು ನಿಗದಿಪಡಿಸದಿದ್ದರೆ ತನಿಖೆಗೆ ಬೆಲೆ ಇರುವುದಿಲ್ಲ. ಹಾಗಾಗಿ ಸ್ವತಂತ್ರ ತನಿಖೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಪ್ರತಿಭಟನೆಗಳ ವೇಳೆ ಅಶ್ರುವಾಯು, ವಿದ್ಯುತ್ ಲಾಠಿ, ಪೆಲೆಟ್ ಗನ್ಗಳ ಬಳಕೆಯನ್ನು ನಿಯಂತ್ರಿಸಲು ಹಾಗೂ ಪೊಲೀಸರಿಗೆ ಸೂಕ್ತ ರಕ್ಷಣಾ ಕವಚ ಒದಗಿಸಲು ದೇಶಾದ್ಯಂತ ಹೊಸ ಭದ್ರತಾ ಶಿಷ್ಟಾಚಾರ ರೂಪಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಜುಲೈ 20 ರಿಂದ 25 ರವರೆಗೆ ಜಂತರ್ ಮಂತರ್ ಸೇರಿದಂತೆ ವಿವಿಧೆಡೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಅತಿಯಾದ ಪೊಲೀಸ್ ಬಲಪ್ರಯೋಗ ನಡೆದಿದೆ ಎಂದು ಆರೋಪಿಸಿ ಆರ್ಜೆಡಿ (RJD) ರಾಜ್ಯಸಭಾ ಸಂಸದ ಪ್ರೊ. ಮನೋಜ್ ಝಾ ಸೇರಿದಂತೆ ಹಲವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಪೊಲೀಸ್ ದೌರ್ಜನ್ಯದ ಕುರಿತು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಮಾರ್ಗದರ್ಶನದಲ್ಲಿ ಹಾಗೂ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು. ಇದಕ್ಕಾಗಿ ಡಿಜಿಪಿ ದರ್ಜೆಯ ಅಧಿಕಾರಿ ಹಾಗೂ ಇಬ್ಬರು ಹಿರಿಯ ಮಹಿಳಾ ಐಪಿಎಸ್ (IPS) ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು (SIT) ರಚಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ. ದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಹಿಂಸಾಚಾರದಲ್ಲಿ 250 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಪ್ರತಿಭಟನೆಯೊಳಗೆ ಕೊಲೆ, ಅತ್ಯಾಚಾರ ಪ್ರಕರಣಗಳಲ್ಲಿ ಭಾಗಿಯಾದ ಸಮಾಜವಿರೋಧಿ ಶಕ್ತಿಗಳು ನುಸುಳಿದ್ದವು ಎಂದು ವಿವರಣೆ ನೀಡಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




