ಶಿಮ್ಲಾದಲ್ಲಿ ಮೇಘಸ್ಫೋಟ: ಪ್ರವಾಹ ಸ್ಥಿತಿ ನಿರ್ಮಾಣ, 20 ಮಂದಿ ನಾಪತ್ತೆ

ಶಿಮ್ಲಾದಲ್ಲಿ ಮೇಘಸ್ಫೋಟ ಸಂಭವಿಸಿದ್ದು 20 ಮಂದಿ ನಾಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇನ್ನು ಉತ್ತರಾಖಂಡದಲ್ಲಿ ಕೂಡ ಪ್ರವಾಹ ಪರಿಸ್ಥಿತಿ ಇದ್ದು 8 ಮಂದಿ ಸಾವನ್ನಪ್ಪಿದ್ದಾರೆ. ಕೇರಳ, ಕರ್ನಾಟಕ, ದೆಹಲಿಯಲ್ಲೂ ಕೂಡ ಭಾರಿ ಮಳೆಯು ಅನಾಹುತವನ್ನು ಸೃಷ್ಟಿಸಿವೆ.

ಶಿಮ್ಲಾದಲ್ಲಿ ಮೇಘಸ್ಫೋಟ: ಪ್ರವಾಹ ಸ್ಥಿತಿ ನಿರ್ಮಾಣ, 20 ಮಂದಿ ನಾಪತ್ತೆ
ಶಿಮ್ಲಾ ಮೇಘಸ್ಫೋಟ
Image Credit source: Amarujala.com

Updated on: Aug 01, 2024 | 8:13 AM

ದೇಶಾದ್ಯಂತ ಭಾರಿ ಮಳೆಯಾಗುತ್ತಿದೆ, ಶಿಮ್ಲಾದಲ್ಲಿ ಕೂಡ ಮೇಘಸ್ಫೋಟ ಸಂಭವಿಸಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. 20 ಮಂದಿ ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯಲ್ಲಿ ಭಾರೀ ಅನಾಹುತ ಸಂಭವಿಸಿದೆ. ಇಲ್ಲಿ ಶಿಮ್ಲಾದಿಂದ 100 ಕಿಮೀ ದೂರದಲ್ಲಿರುವ ರಾಂಪುರದ ಜಕ್ರಿಯಲ್ಲಿ ಮೇಘಸ್ಫೋಟ ಉಂಟಾಗಿದೆ.

ಸದ್ಯ ಶಿಮ್ಲಾ ಡಿಸಿ ಅನುಪಮ್ ಕಶ್ಯಪ್ ಮತ್ತು ಎಸ್ಪಿ ಶಿಮ್ಲಾ ಸಂಜೀವ್ ಗಾಂಧಿ ಸ್ಥಳಕ್ಕೆ ತೆರಳಿದ್ದಾರೆ. ಇಲ್ಲಿ ಒಟ್ಟು 20 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಎನ್‌ಡಿಆರ್‌ಎಫ್ ತಂಡಗಳನ್ನೂ ಸ್ಥಳಕ್ಕೆ ಕಳುಹಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಎನ್‌ಡಿಎಸ್‌ಆರ್‌ಎಫ್ ತಂಡ, ಪೊಲೀಸರು ಮತ್ತು ರಕ್ಷಣಾ ತಂಡ ಘಟನಾ ಸ್ಥಳಕ್ಕೆ ತೆರಳಿದೆ ಎಂದು ಡಿಸಿ ಅನುಪಮ್ ಕಶ್ಯಪ್ ತಿಳಿಸಿದ್ದಾರೆ.

ನಮಗೆ ಬಂದಿರುವ ಮಾಹಿತಿಯ ಪ್ರಕಾರ ಮೇಘ ಸಿಡಿತದಿಂದ 20 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದರು. ಎಸ್‌ಡಿಎಂ ರಾಂಪುರ ನಿಶಾಂತ್ ತೋಮರ್ ಘಟನಾ ಸ್ಥಳಕ್ಕೆ ತಲುಪುತ್ತಿದ್ದಾರೆ. ಹಲವೆಡೆ ರಸ್ತೆ ಮುಚ್ಚಿದ ಕಾರಣ ರಕ್ಷಣಾ ತಂಡವು ಎರಡು ಕಿಲೋಮೀಟರ್ ದೂರದವರೆಗೆ ಉಪಕರಣಗಳೊಂದಿಗೆ ಘಟನಾ ಸ್ಥಳಕ್ಕೆ ತೆರಳಬೇಕಾಯಿತು ಎಂದು ತಿಳಿಸಿದ್ದಾರೆ.

ಕೂಡಲೇ ಪರಿಹಾರ ಕಾರ್ಯ ಆರಂಭಿಸಲಾಗಿದೆ ಎಂದು ಡಿಸಿ ಅನುಪಮ್ ಕಶ್ಯಪ್ ತಿಳಿಸಿದ್ದಾರೆ. ರಕ್ಷಣಾ ತಂಡದಲ್ಲಿ ಐಟಿಬಿಪಿ ಮತ್ತು ವಿಶೇಷ ಗೃಹ ರಕ್ಷಕ ದಳದವರನ್ನು ಕೂಡ ಸೇರಿಸಲಾಗಿದೆ ಎಂದು ಅವರು ಹೇಳಿದರು. ರಕ್ಷಣಾ ಕಾರ್ಯಾಚರಣೆಯಲ್ಲಿ ಎಲ್ಲಾ ತಂಡಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಹೇಳಿದರು. ಆಂಬ್ಯುಲೆನ್ಸ್ ಸೇರಿದಂತೆ ಎಲ್ಲ ಮೂಲ ಸೌಕರ್ಯಗಳನ್ನು ರಕ್ಷಣಾ ಕಾರ್ಯಾಚರಣೆಗೆ ಒಳಪಡಿಸಲಾಗಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.

ಮತ್ತಷ್ಟು ಓದಿ: ವಯನಾಡ್ ಭೂಕುಸಿತದಲ್ಲಿ ಸಾವಿಗೀಡಾದವರ ಸಂಖ್ಯೆ 238; ರಕ್ಷಣಾ ಕಾರ್ಯಕ್ಕೆ ಮಳೆ ಅಡ್ಡಿ

ಉತ್ತರಾಖಂಡದಲ್ಲಿ ಧಾರಾಕಾರ ಮಳೆ ಆರಂಭವಾಗಿದೆ. ಚಾರ್ ಧಾಮ್ ಯಾತ್ರೆಗೆ ಬರುವ ಜನರಿಗೆ ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚನೆ ನೀಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ.

ರುದ್ರಪ್ರಯಾಗದಲ್ಲಿ ಭಾರೀ ಮಳೆಯಿಂದಾಗಿ ಕೇದಾರನಾಥ ಯಾತ್ರೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ. ಭೀಮಾಲಿಯ ಕೇದಾರನಾಥ ಕಾಲುದಾರಿ ಮತ್ತು ಎರಡು ಸೇತುವೆಗಳು ಕೊಚ್ಚಿಹೋಗಿವೆ. ಭೀಮಾಲಿಯಲ್ಲಿ ಸಿಲುಕಿರುವ 200 ಮಂದಿಯನ್ನು ಹೊರತರುವ ಕಾರ್ಯ ನಡೆಯುತ್ತಿದೆ.

ಇನ್ನು ಕೇರಳದಲ್ಲೂ ಗುಡ್ಡಗಳು ಕುಸಿದು 170ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ರಕ್ಷಣಾ ಕಾರ್ಯ ಇನ್ನೂ ನಡೆಯುತ್ತಿದೆ. ಕರ್ನಾಟಕ ಹಾಗೂ ದೆಹಲಿಯಲ್ಲೂ ಕೂಡ ವರುಣನ ಆರ್ಭಟ ಜೋರಾಗಿ ಹಲವೆಡೆ ಭಾರಿ ಅನಾಹುಗಳನ್ನೇ ಸೃಷ್ಟಿ ಮಾಡಿವೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us