ಎಸ್​ಐಆರ್ ನಡೆಸಲು ಇಸಿಗೆ ಅಧಿಕಾರವಿದೆ, ಅಗತ್ಯವಿದ್ದರೆ ನಾವು ನ್ಯೂನತೆಗಳನ್ನು ಸರಿಪಡಿಸುತ್ತೇವೆ: ಸುಪ್ರೀಂ

ದೇಶಾದ್ಯಂತ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲು ಚುನಾವಣಾ ಆಯೋಗವು (EC) ಸಾಂವಿಧಾನಿಕ ಮತ್ತು ಶಾಸನಬದ್ಧ ಅಧಿಕಾರವನ್ನು ಹೊಂದಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಸ್ಪಷ್ಟವಾಗಿ ಹೇಳಿದೆ. ಯಾವುದೇ ಅಕ್ರಮಗಳು ಕಂಡುಬಂದರೆ, ಪ್ರಕ್ರಿಯೆಯನ್ನು ತಡೆಹಿಡಿಯುವುದಿಲ್ಲ, ಆದರೆ ಸರಿಪಡಿಸುವ ನಿರ್ದೇಶನಗಳನ್ನು ನೀಡಲು ಹಿಂಜರಿಯುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಎಸ್​ಐಆರ್ ನಡೆಸಲು ಇಸಿಗೆ ಅಧಿಕಾರವಿದೆ, ಅಗತ್ಯವಿದ್ದರೆ ನಾವು ನ್ಯೂನತೆಗಳನ್ನು ಸರಿಪಡಿಸುತ್ತೇವೆ: ಸುಪ್ರೀಂ
ಸುಪ್ರೀಂಕೋರ್ಟ್​

Updated on: Nov 27, 2025 | 11:39 AM

ನವದೆಹಲಿ, ನವೆಂಬರ್ 27: ಹನ್ನೆರಡು ರಾಜ್ಯಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಬಗ್ಗೆ ಸುಪ್ರೀಂನಲ್ಲಿ ವಿರೋಧ ಪಕ್ಷಗಳು ಭಾರಿ ಹಿನ್ನಡೆ ಅನುಭವಿಸಿವೆ. ‘‘ಎಸ್​ಐಆರ್ ನಡೆಸಲು ಚುನಾವಣಾ ಆಯೋಗಕ್ಕೆ ಅಧಿಕಾರವಿದೆ, ಅಗತ್ಯವಿದ್ದರೆ ನಾವು ನ್ಯೂನತೆಗಳನ್ನು ಸರಿಪಡಿಸುತ್ತೇವೆ’’ ಎಂದು ಸುಪ್ರೀಂಕೋರ್ಟ್​ ಹೇಳಿದೆ.
ಚುನಾವಣಾ ಆಯೋಗವು ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ಮಾಡುವ ಅಧಿಕಾರವನ್ನು ಅದು ಹೊಂದಿದೆ, ಯಾರೂ ಅದನ್ನು ಪ್ರಶ್ನೆ ಮಾಡಲು ಸಾಧ್ಯವಿಲ್ಲ.ಯಾವುದೇ ಸಮಸ್ಯೆಗಳು ಅದರಲ್ಲಿ ಕಂಡು ಬಂದರೆ ನಾವು ಅದನ್ನು ನಿವಾರಿಸುತ್ತೇವೆ ಎಂದು ಪೀಠ ಹೇಳಿದೆ.

ಅರ್ಜಿದಾರರ ಪರವಾಗಿ ಚರ್ಚೆಯನ್ನು ಆರಂಭಿಸಿದ ಕಪಿಲ್ ಸಿಬಲ್, ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿದರು. ಇದಕ್ಕೆ ಪೀಠವು, ಚುನಾವಣಾ ಆಯೋಗವು ಯಾವುದೇ ಪ್ರಶ್ನೆಗಳನ್ನು ಕೇಳದೆ ಫಾರ್ಮ್ 6 ಅನ್ನು ಸ್ವೀಕರಿಸುವ ಅಂಚೆ ಕಚೇರಿಯಲ್ಲ ಎಂದು ಹೇಳಿದೆ. ದಾಖಲೆಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಆಯೋಗವು ಯಾವಾಗಲೂ ಶಾಸನಬದ್ಧ ಅಧಿಕಾರವನ್ನು ಹೊಂದಿರುತ್ತದೆ. ಈ ಬಾರಿ ನಡೆಯುತ್ತಿರುವ ಘಟನೆಗಳು ದೇಶದಲ್ಲಿ ಹಿಂದೆಂದೂ ನಡೆದಿಲ್ಲ ಎಂದು ಸಿಬಲ್ ಹೇಳಿದರು. ಇದು ಹಿಂದೆಂದೂ ಸಂಭವಿಸಿಲ್ಲ ಎಂಬ ಅಂಶವು ಪ್ರಕ್ರಿಯೆಯ ಸಿಂಧುತ್ವವನ್ನು ನಿರ್ಧರಿಸುವ ಮಾನದಂಡವಾಗಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಎಸ್‌ಐಆರ್‌ನ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳು ಬಾಕಿ ಉಳಿದಿವೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಈ ವಿಷಯವನ್ನು ವಿಚಾರಣೆ ನಡೆಸುತ್ತಿದೆ. ಒಬ್ಬ ಮತದಾರನಿಗೆ ಗಣತಿ ನಮೂನೆಯನ್ನು ಭರ್ತಿ ಮಾಡಲು ಏಕೆ ಕೇಳಬೇಕು? ಒಬ್ಬ ವ್ಯಕ್ತಿಯು ಭಾರತೀಯ ಪ್ರಜೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಲು ಚುನಾವಣಾ ಆಯೋಗ ಯಾರು? ಆಧಾರ್ ಕಾರ್ಡ್‌ನಲ್ಲಿ ನಿವಾಸದ ಸ್ಥಳ ಮತ್ತು ಜನ್ಮ ದಿನಾಂಕವನ್ನು ಉಲ್ಲೇಖಿಸಲಾಗಿದೆ, 18 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ತಾವು ಭಾರತೀಯ ಪ್ರಜೆಗಳು ಎಂದು ಸ್ವಯಂ ಘೋಷಣೆ ಮಾಡಿದರೆ ಮತದಾರರಾಗಿ ದಾಖಲಾಗಲು ಇದು ಸಾಕಾಗುತ್ತದೆ ಎಂದು ಸಿಬಲ್ ವಾದಿಸಿದರು.

ಮತ್ತಷ್ಟು ಓದಿ: ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಮುಂದೂಡುವಂತೆ ಕೋರಿ ಸುಪ್ರೀಂ ಮೆಟ್ಟಿಲೇರಿದ ಕೇರಳ ಸರ್ಕಾರ

ಬಿಹಾರದಲ್ಲಿ ಎಸ್‌ಐಆರ್‌ಗೆ ಸಂಬಂಧಿಸಿದಂತೆ, ಆರಂಭದಲ್ಲಿ ಲಕ್ಷಾಂತರ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ ಎಂದು ಹೇಳಲಾಗಿತ್ತು ಎಂದು ಸಿಜೆಐ ಕಾಂತ್ ವಿವರಿಸಿದರು. ಸಿಆರಂಭದಲ್ಲಿ, ಲಕ್ಷಾಂತರ ಮತದಾರರ ಹೆಸರುಗಳನ್ನು ಅಳಿಸಲಾಗುತ್ತಿದೆ ಎಂದು ಹೇಳಲಾಗಿತ್ತು. ನಾವು ಕೆಲವು ಮಾರ್ಗಸೂಚಿಗಳನ್ನು ನೀಡಿದ್ದೇವೆ. ಅಂತಿಮವಾಗಿ ಏನಾಯಿತೆಂದರೆ ಹೆಸರುಗಳನ್ನು ಅಳಿಸಿದವರಲ್ಲಿ ಮೃತ ವ್ಯಕ್ತಿಗಳು ಮತ್ತು ಸ್ಥಳಾಂತರಗೊಂಡವರು ಸೇರಿದ್ದಾರೆ. ಯಾರೂ ಆಕ್ಷೇಪಿಸಲಿಲ್ಲ. ಇದು ಚುನಾವಣೆ ಮೇಲೆ ಯಾವ ಪರಿಣಾಮವನ್ನೂ ಬೀರಲಿಲ್ಲ ಎಂದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us