Supreme Court: ವಕೀಲರ ಪದವಿ ಪರಿಶೀಲನೆಗೆ ಸುಪ್ರೀಂ ಕೋರ್ಟ್​​ನಿಂದ ಉನ್ನತ ಮಟ್ಟದ ಸಮಿತಿ ರಚನೆ

ಮಹತ್ವದ ಬೆಳವಣಿಗೆಯೊಂದರಲ್ಲಿ, ವಕೀಲರ ಕಾನೂನು ಪದವಿಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿಯೊಂದನ್ನು ರಚಿಸಲು ಸುಪ್ರೀಂ ಕೋರ್ಟ್​ ಸೋಮವಾರ ಆದೇಶಿಸಿದೆ.

Supreme Court: ವಕೀಲರ ಪದವಿ ಪರಿಶೀಲನೆಗೆ ಸುಪ್ರೀಂ ಕೋರ್ಟ್​​ನಿಂದ ಉನ್ನತ ಮಟ್ಟದ ಸಮಿತಿ ರಚನೆ
ಸುಪ್ರೀಂ ಕೋರ್ಟ್

Updated on: Apr 10, 2023 | 11:06 PM

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ವಕೀಲರ ಕಾನೂನು ಪದವಿಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ (Supreme Court) ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿಯೊಂದನ್ನು ರಚಿಸಲು ಸುಪ್ರೀಂ ಕೋರ್ಟ್​ ಸೋಮವಾರ ಆದೇಶಿಸಿದೆ. ವಕೀಲರು ನ್ಯಾಯಾಲಯದ ಕಾರ್ಯಕಲಾಪಗಳಲ್ಲಿ ಭಾಗಿಯಾಗಲು ಯೋಗ್ಯರೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ. ಒಂದು ವೇಳೆ ಸಮಿತಿಯ ಪರಿಶೀಲನೆ ವೇಳೆ ನಿರ್ದಿಷ್ಟ ವಕೀಲರು ಯೋಗ್ಯರಲ್ಲ ಎಂಬುದು ಕಂಡುಬಂದಲ್ಲಿ ಸಮಿತಿಯು ತನಿಖೆಯ ನಂತರ ಅವರನ್ನು ವ್ಯವಸ್ಥೆಯಿಂದ ಹೊರಗಿಡಲಿದೆ. ಸುಪ್ರೀಂ ಕೋರ್ಟ್​​ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಪಿಎಸ್ ನರಸಿಂಹ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು ವಕೀಲರ ಪದವಿ ಪರಿಶೀಲನೆ ಪ್ರಕ್ರಿಯೆಯಲ್ಲಿನ ಅಡೆತಡೆಗಳನ್ನು ಗಮನಿಸಿ ಈ ಆದೇಶ ನೀಡಿದೆ.

ಬಾರ್ ಕೌನ್ಸಿಲ್‌ನಲ್ಲಿ ನೋಂದಾಯಿಸಿಕೊಂಡಿರುವ ವಕೀಲರ ಪದವಿ ಸಂಬಂಧಿತ ಸಮರ್ಪಕ ಪರಿಶೀಲನೆಯು ಸುಪ್ರೀಂ ಕೋರ್ಟ್ ಆಡಳಿತಕ್ಕೆ ಮತ್ತು ನ್ಯಾಯಾಲಯದ ವ್ಯವಸ್ಥೆಯ ಸಮಗ್ರತೆಯನ್ನು ಕಾಪಾಡಲು ಅತ್ಯಂತ ಮಹತ್ವದ್ದಾಗಿದೆ. ವಕೀಲರು ಎಂದು ಹೇಳಿಕೊಳ್ಳುವ ವ್ಯಕ್ತಿಗಳು ಶೈಕ್ಷಣಿಕ ಅರ್ಹತೆ ಅಥವಾ ಪದವಿ ಪ್ರಮಾಣಪತ್ರವನ್ನು ಹೊಂದಿಲ್ಲದಿದ್ದರೆ ನ್ಯಾಯಾಂಗ ಪ್ರಕ್ರಿಯೆಗೆ ಪ್ರವೇಶವನ್ನು ನೀಡಲಾಗುವುದಿಲ್ಲ ಎಂದು ಪೀಠ ತಿಳಿಸಿದೆ.

ಇದನ್ನೂ ಓದಿ: Vande Bharat Express: ರಾಜಸ್ಥಾನದ ಮೊದಲ ವಂದೇ ಭಾರತ್​ ರೈಲಿಗೆ ಪ್ರಧಾನಿ ಮೋದಿ ಏ. 12ಕ್ಕೆ ಚಾಲನೆ

ಹೀಗಾಗಿ ತಮ್ಮ ಪದವಿಗಳನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿ ಸಹಕರಿಸುವುದು ಎಲ್ಲ ವಕೀಲರ ಕರ್ತವ್ಯವಾಗಿದೆ. ಕಾಲಕಾಲಕ್ಕೆ ಈ ಪ್ರಕ್ರಿಯೆ ಮಾಡದ ಹೊರತು ನ್ಯಾಯದಾನಕ್ಕೆ ತೀವ್ರ ತೊಂದರೆಯಾಗಲಿದೆ ಎಂದು ಪೀಠ ಹೇಳಿದೆ.

ಉನ್ನತಾಧಿಕಾರ ಸಮಿತಿಯಲ್ಲಿ ಯಾರೆಲ್ಲ?

ಉನ್ನತಾಧಿಕಾರ ಸಮಿತಿ ರಚನೆಗೆ ನಾವು ನಿರ್ದೇಶನ ನೀಡುತ್ತೇವೆ ಎಂದು ಮುಖ್ಯ ನ್ಯಾಯಮೂರ್ತಿಗಳು ಆದೇಶದಲ್ಲಿ ತಿಳಿಸಿದ್ದಾರೆ. ಸಮಿತಿಯ ನೇತೃತ್ವವನ್ನು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿಎಸ್ ಚೌಹಾಣ್ ವಹಿಸಲಿದ್ದಾರೆ. ಹಿರಿಯ ವಕೀಲರಾದ ರಾಕೇಶ್ ದ್ವಿವೇದಿ, ಮಣಿಂದರ್ ಸಿಂಗ್ ಸಮಿತಿಯ ಭಾಗವಾಗಲಿದ್ದಾರೆ.

ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಪರೀಕ್ಷಾ ಮಂಡಳಿಗಳು ಯಾವುದೇ ಶುಲ್ಕವಿಲ್ಲದೆ ಪದವಿಗಳ ನೈಜತೆಯನ್ನು ಪರಿಶೀಲಿಸಲಿವೆ. ಈ ವಿಚಾರವಾಗಿ 2023 ಆಗಸ್ಟ್ 31ರೊಳಗೆ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:04 pm, Mon, 10 April 23

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us