ಸುಪ್ರೀಂಕೋರ್ಟ್​ನಲ್ಲಿ ಪರಮ್​ಬೀರ್ ಸಿಂಗ್ ಅರ್ಜಿ ವಿಚಾರಣೆ ನಾಳೆ

ತಮ್ಮನ್ನು ಮುಂಬೈ ಪೊಲೀಸ್ ಆಯುಕ್ತರ ಹುದ್ದೆಯಿಂದ ಗೃಹ ರಕ್ಷಕ ದಳಕ್ಕೆ ವರ್ಗಾಯಿಸಿದ ಕ್ರಮದ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್​ವೀರ್ ಸಿಂಗ್ ಸುಪ್ರೀಂಕೋರ್ಟ್​ನ ಮೆಟ್ಟಿಲೇರಿದ್ದರು. ಜತೆಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧದ ಭ್ರಷ್ಟಾಚಾರ ತನಿಖೆಯನ್ನು ನಿಷ್ಪಕ್ಷಪಾತವಾಗಿ, ಯಾವುದೇ ಹಸ್ತಕ್ಷೇಪ ಇಲ್ಲದೆ ನಡೆಸಬೇಕೆಂದು ಅವರು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಸುಪ್ರೀಂಕೋರ್ಟ್​ನಲ್ಲಿ ಪರಮ್​ಬೀರ್ ಸಿಂಗ್ ಅರ್ಜಿ ವಿಚಾರಣೆ ನಾಳೆ
ಪರಮ್​ವೀರ್ ಸಿಂಗ್

Updated on: Mar 23, 2021 | 6:39 PM

ದೆಹಲಿ: ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಾಳೆ (ಮಾರ್ಚ್ 24) ನಡೆಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಮತ್ತು ಸುಭಾಶ್ ರೆಡ್ಡಿ ಅರ್ಜಿಯ ವಿಚಾರಣೆ ನಡೆಸಲಿದ್ದಾರೆ ಎಂದು ನ್ಯಾಯಾಲಯದ ತಿಳಿಸಿವೆ. ಮುಂಬೈ ಪೊಲೀಸ್ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಮ್​ವೀರ್ ಸಿಂಗ್ ಅವರನ್ನು ಗೃಹ ರಕ್ಷಕ ದಳಕ್ಕೆ ವರ್ಗಾಯಿಸಲಾಗಿತ್ತು. ಈ ವರ್ಗಾವಣೆಯ ವಿರುದ್ಧವೂ ಪರಮ್​ವೀರ್ ಸಿಂಗ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಏನಿದು ಪ್ರಕರಣ?

ತಮ್ಮನ್ನು ಮುಂಬೈ ಪೊಲೀಸ್ ಆಯುಕ್ತರ ಹುದ್ದೆಯಿಂದ ಗೃಹ ರಕ್ಷಕ ದಳಕ್ಕೆ ವರ್ಗಾಯಿಸಿದ ಕ್ರಮದ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್​ವೀರ್ ಸಿಂಗ್ ಸುಪ್ರೀಂಕೋರ್ಟ್​ನ ಮೆಟ್ಟಿಲೇರಿದ್ದರು. ಜತೆಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧದ ಭ್ರಷ್ಟಾಚಾರ ತನಿಖೆಯನ್ನು ನಿಷ್ಪಕ್ಷಪಾತವಾಗಿ, ಯಾವುದೇ ಹಸ್ತಕ್ಷೇಪ ಇಲ್ಲದೆ ನಡೆಸಬೇಕೆಂದು ಅವರು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಪರಮ್​ವೀರ್ ಸಿಂಗ್ ಮಾಡಿರುವ ಆರೋಪದ ಪ್ರಕಾರ ಗೃಹ ಸಚಿವ ಅನಿಲ್ ದೇಶ್​ಮುಖ್ ಫೆಬ್ರವರಿಯಲ್ಲಿ ಸ್ವಂತ ಮನೆಯಲ್ಲಿ ಸಚಿನ್ ವಾಜೆ ಮತ್ತು ಇತರ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಪ್ರತಿ ತಿಂಗಳು ₹ 100 ಕೋಟಿ ಹಣವನ್ನು ಬಾರ್ ಮತ್ತು ರೆಸ್ಟೊರೆಂಟ್​ಗಳಿಂದ ವಸೂಲಿ ಮಾಡುವಂತೆ ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು.

ಮುಖ್ಯಮಂತ್ರಿ ಉದ್ಧವ್​ ಠಾಕ್ರೆಗೆ ಕಳೆದ ವಾರ ಬರೆದಿದ್ದ ಪತ್ರದಲ್ಲಿ ಗೃಹ ಸಚಿವ ಅನಿಲ್ ದೇಶ್​ಮುಖ್​ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಸಚಿನ್ ವಾಜೆ ಸೇರಿದಂತೆ ಹಲವು ಅಧಿಕಾರಿಗಳ ಜೊತೆ ಸೇರಿ ಅನಿಲ್​ ದೇಶ್​ಮುಖ್​ ವಸೂಲಿ ದಂಧೆ ಆರಂಭಿಸಿದ್ದರು. ನಗರದ ಪಬ್​ ಮತ್ತು ರೆಸ್ಟೊರೆಂಟ್​ಗಳಿಂದ ತಿಂಗಳಿಗೆ ₹ 100 ಕೋಟಿ ವಸೂಲಿ ಮಾಡಿಕೊಡುವಂತೆ ತಾಕೀತು ಮಾಡಿದ್ದರು ಎಂದು ಸಿಂಗ್ ದೂರಿದ್ದರು.

ಇದೀಗ ಸುಪ್ರೀಂಕೋರ್ಟ್​ ಮೆಟ್ಟಿಲೇರಿರುವ ಪರಮ್​ವೀರ್ ಸಿಂಗ್, ಮಹಾರಾಷ್ಟ್ರ ಪೊಲೀಸ್ ಇಲಾಖೆಯಲ್ಲಿ ಆಗಿರುವ ಹಲವು ಅಕ್ರಮಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ‘ಪೊಲೀಸ್ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಮಹಾರಾಷ್ಟ್ರ ಗೃಹಸಚಿವ ಅನಿಲ್ ದೇಶ್​ಮುಖ್ ಅವರ ಹಸ್ತಕ್ಷೇಪದ ಬಗ್ಗೆ 2020ರ ಆಗಸ್ಟ್​ 24, 25ರಂದು ಮಹಾರಾಷ್ಟ್ರ ಗುಪ್ತಚರ ಇಲಾಖೆಯ ಆಯುಕ್ತರಾದ ರಶ್ಮಿ ಶುಕ್ಲಾ ಪೊಲೀಸ್ ಮಹಾನಿರ್ದೇಶಕರ ಗಮನಕ್ಕೆ ತಂದಿದ್ದರು. ಪೊಲೀಸ್ ಮಹಾನಿರ್ದೇಶಕರು ಈ ವಿಷಯವನ್ನು ಮಹಾರಾಷ್ಟ್ರ ಸರ್ಕಾರದ ಗೃಹ ಇಲಾಖೆ ಕಾರ್ಯದರ್ಶಿ ಗಮನಕ್ಕೆ ತಂದಿದ್ದರು’ ಎಂದು ಪರಮ್​ವೀರ್ ಸಿಂಗ್ ಸುಪ್ರೀಂಕೋರ್ಟ್​ಗೆ ಸಲ್ಲಿಸಿರುವ ಮನವಿಯಲ್ಲಿ ಹೇಳಿದ್ದಾರೆ.

ಹಲವು ಅಪರಾಧ ಪ್ರಕರಣಗಳ ತನಿಖೆಯಲ್ಲಿಯೂ ಅನಿಲ್ ದೇಶ್​ಮುಖ್ ಮಧ್ಯಪ್ರವೇಶಿಸಿದ್ದರು ಎಂದು ಪರಮ್​ವೀರ್ ಸಿಂಗ್ ಆರೋಪಿಸಿದ್ದಾರೆ. ‘ಕೆಲ ಅಪರಾಧ ಪ್ರಕರಣಗಳ ತನಿಖೆ ವೇಳೆ ಕೆಳಹಂತದ ಪೊಲೀಸರನ್ನು ಅನಿಲ್ ದೇಶ್​ಮುಖ್ ನೇರವಾಗಿ ಸಂಪರ್ಕಿಸುತ್ತಿದ್ದರು. ಸಚಿನ್ ವಾಜೆ ಅಥವಾ ಪಾಟೀಲ್ ಅವರಂಥ ಸಿಬ್ಬಂದಿಯನ್ನು ಬಳಸಿಕೊಂಡು ಹಣ ವಸೂಲಿ ಮಾಡುತ್ತಿದ್ದರು. ಪೊಲೀಸರು ತಮ್ಮಿಷ್ಟದಂತೆ ತನಿಖೆ ನಡೆಸಬೇಕು ಎಂದು ಬಯಸುತ್ತಿದ್ದರು, ಅದಕ್ಕಾಗಿ ಒತ್ತಡ ಹೇರುತ್ತಿದ್ದರು. ಅಧಿಕಾರಿಗಳ ನಿಯೋಜನೆ, ವರ್ಗಾವಣೆಯಂಥ ವಿಚಾರಗಳಲ್ಲಿಯೂ ಅನಗತ್ಯವಾಗಿ ತಲೆಹಾಕುತ್ತಿದ್ದರು. ಯಾವುದೇ ಪ್ರಜಾಸತ್ತಾತ್ಮಕ ಸರ್ಕಾರದಲ್ಲಿ ಹೀಗೆ ನಡೆಯಲು ಅವಕಾಶ ಇರುವುದಿಲ್ಲ. ಅಧಿಕಾರ ದುರುಪಯೋಗದ ಬಗ್ಗೆ ಅನಿಲ್ ದೇಶ್​ಮುಖ್ ವಿರುದ್ಧ ಸಿಬಿಐ ತನಿಖೆ ನಡೆದರೆ ಮಾತ್ರ ಸತ್ಯ ಹೊರಬೀಳಲು ಸಾಧ್ಯ’ ಎಂದು ಪರಮ್​ವೀರ್ ಸಿಂಗ್​ ತಮ್ಮ ಮನವಿಯಲ್ಲಿ ಹೇಳಿದ್ದಾರೆ.

ಈ ಎಲ್ಲ ವಿಷಯಗಳ ಬಗ್ಗೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಗಮನ ಸೆಳೆದಿದ್ದೆ. ಈ ಬೆಳವಣಿಗೆಯ ಬೆನ್ನಲ್ಲೇ, ಅಂದರೆ ಮಾರ್ಚ್ 17ರಂದು ನನ್ನನ್ನು ಗೃಹರಕ್ಷಕ ವಿಭಾಗಕ್ಕೆ ವರ್ಗಾಯಿಸಲಾಯಿತು. ಕನಿಷ್ಠ ಸೇವಾವಧಿಯಾದ 2 ವರ್ಷ ಸೇವೆ ಸಲ್ಲಿಸುವ ಮೊದಲೇ ನನ್ನನ್ನು ವರ್ಗಾವಣೆ ಮಾಡಲಾಗಿದೆ ಎಂದು ಅವರು ಮನವಿಯಲ್ಲಿ ದೂರಿದ್ದಾರೆ.

ಇದನ್ನೂ ಓದಿ: ಗೃಹ ಸಚಿವ ಅನಿಲ್ ದೇಶ್​ಮುಖ್ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸಲು ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು; ಉದ್ಧವ್ ಠಾಕ್ರೆಗೆ ಪತ್ರ ಬರೆದ ಪರಮ್​ವೀರ್ ಸಿಂಗ್

guruganesh bhat
Follow Us