ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣ: ಅಭಿಷೇಕ್ ಬ್ಯಾನರ್ಜಿಗೆ ಸುಪ್ರೀಂಕೋರ್ಟ್​​​ನಲ್ಲಿ ಹಿನ್ನಡೆ

|

Updated on: Jul 10, 2023 | 5:55 PM

"ನಾವು ದೋಷಾರೋಪಣೆ ಮಾಡಲಾದ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಯಾಕೆಂದರೆ ಇದು ತನಿಖೆಯನ್ನು ಅಸ್ತವ್ಯಸ್ತಗೊಳಿಸುತ್ತದೆ. ಅರ್ಜಿದಾರರು ಕಾನೂನಿನಡಿಯಲ್ಲಿ ಲಭ್ಯವಿರುವ ಪರಿಹಾರಗಳನ್ನು ಪಡೆಯಬಹುದು" ಎಂದು ಸುಪ್ರೀಂಕೋರ್ಟ್ ಪೀಠ ಹೇಳಿದೆ.

ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣ: ಅಭಿಷೇಕ್ ಬ್ಯಾನರ್ಜಿಗೆ ಸುಪ್ರೀಂಕೋರ್ಟ್​​​ನಲ್ಲಿ ಹಿನ್ನಡೆ
ಅಭಿಷೇಕ್ ಬ್ಯಾನರ್ಜಿ
Follow us on

ದೆಹಲಿ: ಪಶ್ಚಿಮ ಬಂಗಾಳದ (WestBengal) ಶಿಕ್ಷಕರ ನೇಮಕಾತಿ ಹಗರಣದಲ್ಲಿ ಟಿಎಂಸಿ ನಾಯಕ, ಸಿಎಂ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ (Abhishek Banerjee) ವಿರುದ್ಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ತನಿಖೆಯಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ (Supreme Court) ಸೋಮವಾರ ನಿರಾಕರಿಸಿದ್ದು, ಪ್ರಕರಣದ ತನಿಖೆಯನ್ನು ಅಡ್ಡಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಪೀಠವು ಕಾನೂನಿನಡಿಯಲ್ಲಿ ಲಭ್ಯವಿರುವ ಪರಿಹಾರಗಳನ್ನು ಪಡೆಯಲು ಬ್ಯಾನರ್ಜಿ ಅವರಿಗೆ ಅವಕಾಶ ಮಾಡಿಕೊಟ್ಟಿತು. ಆದರೆ ಕಲ್ಕತ್ತಾ ಹೈಕೋರ್ಟ್‌ನ ಮೇ 18 ರ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿತು.

“ನಾವು ದೋಷಾರೋಪಣೆ ಮಾಡಲಾದ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಯಾಕೆಂದರೆ ಇದು ತನಿಖೆಯನ್ನು ಅಸ್ತವ್ಯಸ್ತಗೊಳಿಸುತ್ತದೆ. ಅರ್ಜಿದಾರರು ಕಾನೂನಿನಡಿಯಲ್ಲಿ ಲಭ್ಯವಿರುವ ಪರಿಹಾರಗಳನ್ನು ಪಡೆಯಬಹುದು” ಎಂದು ಪೀಠ ಹೇಳಿದೆ.

ಮೇ 26 ರಂದು, ಪಶ್ಚಿಮ ಬಂಗಾಳದ ಶಾಲಾ ಉದ್ಯೋಗ ಹಗರಣ ಪ್ರಕರಣಗಳಲ್ಲಿ ಸಿಬಿಐ ಮತ್ತು ಇಡಿ ಅಭಿಷೇಕ್ ಬ್ಯಾನರ್ಜಿಯನ್ನು ವಿಚಾರಣೆಗೆ ಒಳಪಡಿಸಬಹುದು ಎಂಬ ತನ್ನ ಹಿಂದಿನ ಆದೇಶವನ್ನು ಮರುಪಡೆಯಲು ಮಾಡಿದ ಮನವಿಯನ್ನು ವಜಾಗೊಳಿಸಿದ ಹೈಕೋರ್ಟ್, ಬ್ಯಾನರ್ಜಿ ಅವರ ಮೇಲೆ ₹ 25 ಲಕ್ಷ ವೆಚ್ಚವನ್ನು ವಿಧಿಸುವುದಕ್ಕೆ ತಡೆ ನೀಡಿತ್ತು.

ಇದನ್ನೂ ಓದಿ: Delhi Ordinance: ದೆಹಲಿ ಸುಗ್ರೀವಾಜ್ಞೆ ವಿಚಾರ; ಕೇಂದ್ರಕ್ಕೆ ಸುಪ್ರೀಂಕೋರ್ಟ್ ನೋಟಿಸ್

ಆದಾಗ್ಯೂ, ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆಗಳು ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನು ಪ್ರಶ್ನಿಸಬಹುದು ಎಂದು ಹೇಳಿದ್ದ ಹೈಕೋರ್ಟ್ ಆದೇಶದ ಭಾಗವನ್ನು ಸುಪ್ರೀಂಕೋರ್ಟ್ ತಡೆಹಿಡಿದಿಲ್ಲ. ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಿಬಿಐ ಮತ್ತು ಇಡಿಯಂತಹ ತನಿಖಾ ಸಂಸ್ಥೆಗಳು ತನ್ನನ್ನು ವಿಚಾರಣೆಗೆ ಒಳಪಡಿಸಬಹುದು ಎಂದು ತನ್ನ ಹಿಂದಿನ ಆದೇಶವನ್ನು ಹಿಂಪಡೆಯುವಂತೆ ಕೋರಿ ಲೋಕಸಭಾ ಸಂಸದ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್ ವಜಾಗೊಳಿಸಿದೆ.

ಶಾಲಾ ಉದ್ಯೋಗ ಹಗರಣ ಪ್ರಕರಣಗಳ ಕ್ರಿಮಿನಲ್ ಅಂಶವನ್ನು ಸಿಬಿಐ ತನಿಖೆ ನಡೆಸುತ್ತಿದ್ದರೆ, ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿಯಲ್ಲಿನ ಅಕ್ರಮಗಳಲ್ಲಿ ಭಾಗಿಯಾಗಿರುವ ಹಣದ ಜಾಡುಗಳನ್ನು ಇಡಿ ಪರಿಶೀಲಿಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ