
ನವದೆಹಲಿ, ಆಗಸ್ಟ್ 31: ಸೆಪ್ಟೆಂಬರ್ 5ರಂದು ಕಾಕ್ರೋಚ್ ಜನತಾ ಪಾರ್ಟಿ (CJP) ಹಮ್ಮಿಕೊಂಡಿರುವ ಪ್ರತಿಭಟನಾ ಮೆರವಣಿಗೆಗೆ ತಡೆ ನೀಡಲು ಅಥವಾ ಈ ಕುರಿತು ಯಾವುದೇ ನಿರ್ದೇಶನಗಳನ್ನು ನೀಡಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ. ಸೂಕ್ತ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಅಗತ್ಯ ಬಿದ್ದರೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ಭರವಸೆ ವ್ಯಕ್ತಪಡಿಸಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ನ್ಯಾಯಪೀಠವು ಇಂದು ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು, ಉದ್ದೇಶಿತ ಮೆರವಣಿಗೆಯ ಸಮಯದಲ್ಲಿ ಯಾವುದೇ ಅನಾಹುತ ಸಂಭವಿಸುತ್ತದೆ ಎಂದು ನಂಬಲು ಸದ್ಯಕ್ಕೆ ಯಾವುದೇ ಬಲವಾದ ಕಾರಣಗಳಿಲ್ಲ ಎಂದು ಹೇಳಿದೆ. ಆದರೆ, ಯಾವುದೇ ಗಂಭೀರ ಘಟನೆ ಸಂಭವಿಸಿದಲ್ಲಿ, ಅರ್ಜಿದಾರರು ತಕ್ಷಣವೇ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಪೀಠವು ತಿಳಿಸಿದೆ.
ಇದನ್ನೂ ಓದಿ: ಜಂತರ್ ಮಂತರ್ ಸೀಸನ್ 2 ಶೀಘ್ರದಲ್ಲೇ ಆರಂಭ; ಹೊಸ ಪ್ರತಿಭಟನೆಯ ಸುಳಿವು ನೀಡಿದ ಸಿಜೆಪಿ ನಾಯಕ ದಿಪ್ಕೆ
“ಎಲ್ಲರೂ ಜವಾಬ್ದಾರಿಯಿಂದ, ಶಾಂತಿಯುತವಾಗಿ ಮತ್ತು ಕಾನೂನಿನ ಪ್ರಕಾರ ವರ್ತಿಸುತ್ತಾರೆ ಎಂಬ ನಿರೀಕ್ಷೆಯೊಂದಿಗೆ ನಾವು ಮುಂದುವರಿಯುತ್ತೇವೆ” ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಲ್ಲಾ ಕಡೆಯವರು ಕಾನೂನಿಗೆ ಬದ್ಧವಾಗಿರುತ್ತಾರೆ ಎಂಬ ಆಶಯ ವ್ಯಕ್ತಪಡಿಸಿದೆ.
ಜುಲೈ 25ರಂದು ಸಿಜೆಪಿ ಜತೆ ನಡೆಸಿದ್ದ ಸುದೀರ್ಘ ಆಂದೋಲನವನ್ನು ಅಂತ್ಯಗೊಳಿಸಲು ಕೇಂದ್ರ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಸಿಜೆಪಿ ನಾಯಕರು ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್ನಿಂದ ದೆಹಲಿ ಪೊಲೀಸ್ ಪ್ರಧಾನ ಕಚೇರಿಯವರೆಗೆ ಮೆರವಣಿಗೆ ನಡೆಸಲು ನಿರ್ಧರಿಸಿದೆ.
ಇದನ್ನೂ ಓದಿ: ಮಾತಿಗೆ ತಪ್ಪಿದ ಕೇಂದ್ರ ಸರ್ಕಾರ; ಸೆ. 5ರಂದು ದೆಹಲಿಯಲ್ಲಿ ಮತ್ತೆ ಬೃಹತ್ ಪ್ರತಿಭಟನೆ ಘೋಷಿಸಿದ ಸಿಜೆಪಿ
ದೆಹಲಿ ಮತ್ತು ಇತರ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದವರ ಮೇಲಿನ ಪ್ರಕರಣಗಳನ್ನು ಹಿಂತೆಗೆದುಕೊಳ್ಳಲು ಮತ್ತು ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯ ನಂತರ ಆತ್ಮಹತ್ಯೆ ಮಾಡಿಕೊಂಡ ನೀಟ್ (NEET) ಅಭ್ಯರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರ ಒಪ್ಪಿಕೊಂಡಿತ್ತು. ಆದರೆ ಸರ್ಕಾರ ಈ ಭರವಸೆಗಳನ್ನು ಈಡೇರಿಸಿಲ್ಲ ಎಂದು ಸಿಜೆಪಿ ಆರೋಪಿಸಿದೆ. ಅಭಿಜಿತ್ ದೀಪ್ಕೆ ನೇತೃತ್ವದ ಸಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯ ನಂತರ ಘೋಷಿಸಲಾದ ಈ ಮೆರವಣಿಗೆಯನ್ನು ಮೃತ ವಿದ್ಯಾರ್ಥಿಗಳ ಕುಟುಂಬಸ್ಥರು ಮುನ್ನಡೆಸಲಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ