Sign In

By signing in or creating an account, you agree with Associated Broadcasting Company's Terms & Conditions and Privacy Policy.

Mekedatu Project: ಮೇಕೆದಾಟು ಯೋಜನೆಗೆ ಅವಕಾಶ ನೀಡಬಾರದು; ಸ್ಟಾಲಿನ್ ನೇತೃತ್ವದಲ್ಲಿ ತಮಿಳುನಾಡು ನಾಯಕರ ನಿರ್ಧಾರ

Tamil Nadu CM MK Stalin: ಮೇಕೆದಾಟು ಯೋಜನೆ ವಿರುದ್ಧ ಸುಪ್ರೀಂಕೋರ್ಟ್​ನಲ್ಲಿ ಹೋರಾಟ ಮಾಡಲು ತಮಿಳುನಾಡು ಸರ್ಕಾರ ನಿರ್ಧಾರ ಮಾಡಿದೆ. ಈ ನಿರ್ಧಾರಕ್ಕೆ ತಮಿಳುನಾಡಿನ ಎಲ್ಲ ಪಕ್ಷಗಳೂ ಬೆಂಬಲ ನೀಡಿವೆ.

Mekedatu Project: ಮೇಕೆದಾಟು ಯೋಜನೆಗೆ ಅವಕಾಶ ನೀಡಬಾರದು; ಸ್ಟಾಲಿನ್ ನೇತೃತ್ವದಲ್ಲಿ ತಮಿಳುನಾಡು ನಾಯಕರ ನಿರ್ಧಾರ
ಬಿ ಎಸ್ ಯಡಿಯೂರಪ್ಪ ಮತ್ತು ಎಂ ಕೆ ಸ್ಟಾಲಿನ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 12, 2021 | 3:06 PM

ಚೆನ್ನೈ: ರಾಮನಗರದ ಬಳಿ ಇರುವ ಮೇಕೆದಾಟು ಎಂಬಲ್ಲಿ ಅಣೆಕಟ್ಟು (Mekedatu Dam Project) ನಿರ್ಮಿಸುವ ಕರ್ನಾಟಕ ಸರ್ಕಾರದ ಯೋಜನೆಗೆ ತಮಿಳುನಾಡಿನಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಈ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ (Tamil Nadu CM MK Stalin) ಇಂದು ಸರ್ವಪಕ್ಷ ಸಭೆ ಕರೆದಿದ್ದರು. ಈ ಸಭೆಯಲ್ಲಿ ಡಿಎಂಕೆ, (DMK) ಕಾಂಗ್ರೆಸ್ (Congress), ಬಿಜೆಪಿ (BJP), ಎಐಎಡಿಎಂಕೆ ಸೇರಿ ಎಲ್ಲ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಯಾವುದೇ ಕಾರಣಕ್ಕೂ ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಅನುಮತಿ ನೀಡಬಾರದು ಎಂದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಈ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸರ್ವಪಕ್ಷ ಸಭೆಯ ಬಳಿಕ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಕಾವೇರಿ ನದಿ ನೀರಿನ ಮೇಲೆ ಕರ್ನಾಟಕಕ್ಕೆ ಮಾತ್ರವಲ್ಲ, ತಮಿಳುನಾಡಿಗೂ ಸಂಪೂರ್ಣ ಹಕ್ಕಿದೆ. ನಾವು ಬೇರೆ ಬೇರೆ ಪಕ್ಷಗಳಲ್ಲಿದ್ದರೂ ಕಾವೇರಿಯ ವಿಚಾರ ಬಂದಾಗ ನಮ್ಮ ಹಕ್ಕನ್ನು ಬಿಟ್ಟುಕೊಡುವ ಮಾತೇ ಇಲ್ಲ. ಈ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಕಾವೇರಿ ನಮ್ಮ ಜೀವನದ ಹಕ್ಕಾಗಿದೆ. ಕರ್ನಾಟಕ ಸರ್ಕಾರ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟುವಿನಲ್ಲಿ ಡ್ಯಾಂ ನಿರ್ಮಿಸಿದರೆ ನಮ್ಮ ರಾಜ್ಯದ ರೈತರಿಗೆ ನೀರಿಗೆ ಬಹಳ ತೊಂದರೆಯಾಗುತ್ತದೆ ಎಂದು ಹೇಳಿದ್ದಾರೆ. ಈ ಮೂಲಕ

ಮೇಕೆದಾಟು ಯೋಜನೆ ವಿರುದ್ಧ ಸುಪ್ರೀಂಕೋರ್ಟ್​ನಲ್ಲಿ ಹೋರಾಟ ಮಾಡಲು ತಮಿಳುನಾಡು ಸರ್ಕಾರ ನಿರ್ಧಾರ ಮಾಡಿದೆ. ಈ ನಿರ್ಧಾರಕ್ಕೆ ತಮಿಳುನಾಡಿನ ಎಲ್ಲ ಪಕ್ಷಗಳೂ ಬೆಂಬಲ ನೀಡಿವೆ. ಎಲ್ಲ ಪಕ್ಷಗಳ ನಾಯಕರನ್ನೂ ಒಗ್ಗೂಡಿಸಿಕೊಂಡು ಮೇಕೆದಾಟು ಯೋಜನೆ ವಿರುದ್ಧ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಸಿಎಂ ಸ್ಟಾಲಿನ್ ಪ್ಲಾನ್ ಮಾಡಿದ್ದಾರೆ. ಮೇಕೆದಾಟು ಯೋಜನೆಗೆ ಸಮ್ಮತಿ ನೀಡದಿರಲು ನಿರ್ಧರಿಸಿರುವ ನಿರ್ಣಯವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ತಮಿಳುನಾಡು ಸರ್ಕಾರ ತೀರ್ಮಾನ ಮಾಡಿದೆ. ಈ ಹಿನ್ನೆಲೆಯಲ್ಲೇ ಸದ್ಯದಲ್ಲೇ ತಮಿಳುನಾಡಿನ ಸರ್ವಪಕ್ಷ ಸದಸ್ಯರ ನಿಯೋಗ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಈ ವೇಳೆ ಕರ್ನಾಟಕ ಸರ್ಕಾರ ಕೈಗೆತ್ತಿಕೊಂಡಿರುವ ಮೇಕೆದಾಟು ಯೋಜನೆಗೆ ತಡೆ ನೀಡುವಂತೆ ಸಚಿವರ ಬಳಿ ಮನವಿ ಮಾಡುವ ಸಾಧ್ಯತೆಯಿದೆ.

ಬೆಂಗಳೂರಿನ ಕುಡಿಯುವ ನೀರಿನ ಪೂರೈಕೆ ಮಾಡಲು 2008ರಲ್ಲಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ಘೋಷಿಸಿತ್ತು. ಇದರಿಂದ ತಮಿಳುನಾಡಿಗೆ ಹರಿದುಹೋಗುವ ಕಾವೇರಿ ನದಿ ನೀರಿನ ಪ್ರಮಾಣ ಕಡಿಮೆಯಾಗಲಿದೆ. ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಕೃಷಿಗೆ ಕಾವೇರಿ ನದಿ ನೀರನ್ನೇ ಅವಲಂಬಿಸಿರುವುದರಿಂದ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಅಡ್ಡಗಾಲು ಹಾಕಿತ್ತು.

ಏನಿದು ಮೇಕೆದಾಟು ಯೋಜನೆ?: ರಾಮನಗರದ ಬಳಿ ಇರುವ ಮೇಕೆದಾಟು ಎಂಬಲ್ಲಿ ಸಣ್ಣದಾದ ಅಣೆಕಟ್ಟನ್ನು ನಿರ್ಮಿಸಿ, ಸುಮಾರು 65ರಿಂದ 66 ಟಿಎಂಸಿ ಹೆಚ್ಚುವರಿ ನೀರನ್ನು ಸಂಗ್ರಹಿಸುವ ಉದ್ದೇಶ ಕರ್ನಾಟಕ ಸರ್ಕಾರದ್ದು. 2008ರಲ್ಲಿ ಈ ಯೋಜನೆಯನ್ನು ಆರಂಭಿಸಲಾಯಿತು. ಬೆಂಗಳೂರಿನಿಂದ 90 ಕಿ.ಮೀ. ದೂರದಲ್ಲಿರುವ ಮೇಕೆದಾಟುವಿನಲ್ಲಿ ಈ ಡ್ಯಾಂ ನಿರ್ಮಿಸಿದರೆ ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಸಾಧ್ಯವೆಂಬುದು ಸರ್ಕಾರದ ಲೆಕ್ಕಾಚಾರವಾಗಿತ್ತು. ಹಾಗೇ, ಇದರಿಂದ ವಿದ್ಯುತ್ ಉತ್ಪಾದನೆ ಮಾಡುವ ಯೋಚೆನಯೂ ಇತ್ತು. ಕೆಆರ್​ಎಸ್, ಕಬಿನಿ ಜಲಾಶಯಗಳಿಂದ ಹರಿಯುವ ಹೆಚ್ಚುವರಿ ನೀರನ್ನು ಸಂಗ್ರಹಿಸಲು ಈ ಮೇಕೆದಆಟು ಯೋಜನೆಯಿಂದ ಅನುಕೂಲವಾಗಲಿದೆ ಎಂದು 9 ಸಾವಿರ ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಸರ್ಕಾರ ಈ ಯೋಜನೆಯನ್ನು ಕೈಗೆತ್ತಿಕೊಂಡಿತ್ತು.

ತಮಿಳು ನಾಡಿನಲ್ಲಿ ಕಾವೇರಿ ಜಲಾನಯನ ಪ್ರದೇಶದ ಜನರಿಗೆ ಭತ್ತ ಇಳುವರಿ ಬೆಳೆಯಲು ಕಾವೇರಿ ನೀರನ್ನೇ ಅವಲಂಬಿಸಿದ್ದಾರೆ. ಕರ್ನಾಟಕ ಕಾವೇರಿ ನದಿಗೆ ಮೇಕೆದಾಟಿನಲ್ಲಿ ಅಣೆಕಟ್ಟು ಕಟ್ಟಿದರೆ ತಮಿಳು ನಾಡಿನ ಜನರಿಗೆ ವ್ಯವಸಾಯಕ್ಕೆ ನೀರಿಗೆ ಸಮಸ್ಯೆಯಾಗುತ್ತದೆ ಎಂಬುದು ತಮಿಳುನಾಡು ಸರ್ಕಾರದ ವಾದ. ಈ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ತಡೆಯೊಡ್ಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ತಮಿಳು ನಾಡು ಸರ್ಕಾರ ಪ್ರಯತ್ನಿಸುತ್ತಿದೆ.

ಈ ವಿಚಾರವಾಗಿ ಜುಲೈ 7ರಂದು ತಮಿಳುನಾಡಿನ ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮೇಕೆದಾಟು ಯೋಜನೆಯನ್ನು ತಡೆಯುವಂತೆ ಮನವಿ ಸಲ್ಲಿಸಿದ್ದರು. ಸದ್ಯದಲ್ಲೇ ತಮಿಳುನಾಡಿನ ಸರ್ವ ಪಕ್ಷಗಳ ಸದಸ್ಯರ ನಿಯೋಗ ಕೂಡ ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Mekedatu Project: ಮೇಕೆದಾಟು ಯೋಜನೆಗೆ ವಿರೋಧ; ಸರ್ವ ಪಕ್ಷ ನಾಯಕರ ಮಹತ್ವದ ಸಭೆ ಕರೆದ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

Published On - 3:03 pm, Mon, 12 July 21