ಡಿಎಂಕೆ ಅಧಿಕಾರಾವಧಿಯಲ್ಲಿ ರೈತರು, ಶಿಕ್ಷಕರ ವಿರುದ್ಧ ದಾಖಲಾಗಿದ್ದ ಕೇಸ್ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ

ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರದ ಅವಧಿಯಲ್ಲಿ ಪ್ರತಿಭಟನೆ ನಡೆಸಿದ್ದ ರೈತರು ಮತ್ತು ಶಿಕ್ಷಕರ ವಿರುದ್ಧ ದಾಖಲಿಸಲಾಗಿದ್ದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಘೋಷಿಸಿದ್ದಾರೆ. ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಎಂ. ಕೆ. ಸ್ಟಾಲಿನ್ ನೇತೃತ್ವದ ಹಿಂದಿನ ಸರ್ಕಾರ ನಡೆಸಿಕೊಂಡ ರೀತಿ ಅಮಾನವೀಯವಾಗಿತ್ತು ಎಂದು ಅವರು ಟೀಕಿಸಿದ್ದಾರೆ. ಟಿವಿಕೆ ನೇತೃತ್ವದ ತಮಿಳುನಾಡು ಸರ್ಕಾರದ ಈ ನಿರ್ಧಾರದಿಂದಾಗಿ ರೈತರು ಮತ್ತು ಶಿಕ್ಷಕರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಡಿಎಂಕೆ ಅಧಿಕಾರಾವಧಿಯಲ್ಲಿ ರೈತರು, ಶಿಕ್ಷಕರ ವಿರುದ್ಧ ದಾಖಲಾಗಿದ್ದ ಕೇಸ್ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ
ಸಿಎಂ ವಿಜಯ್
Image Credit source: PTI

Updated on: Sep 02, 2026 | 6:23 PM

ಚೆನ್ನೈ, ಸೆಪ್ಟೆಂಬರ್ 2: ಹಿಂದಿನ ಡಿಎಂಕೆ ಸರ್ಕಾರದ ಅವಧಿಯಲ್ಲಿ ಪ್ರತಿಭಟನೆ ನಡೆಸಿದ್ದ ರೈತರು ಮತ್ತು ಶಿಕ್ಷಕರ ವಿರುದ್ಧ ದಾಖಲಿಸಲಾಗಿದ್ದ ಎಲ್ಲಾ ಪೋಲೀಸ್ ಪ್ರಕರಣಗಳನ್ನು ಹಿಂಪಡೆಯಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಇಂದು ತಮಿಳುನಾಡು ವಿಧಾನಸಭೆಯಲ್ಲಿ ಘೋಷಿಸಿದ್ದಾರೆ. ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ವಿಜಯ್, 2021ರ ಮೇ ತಿಂಗಳಿಂದ 2026ರ ಏಪ್ರಿಲ್​ವರೆಗೆ ತಮ್ಮ ಜೀವನೋಪಾಯ ಮತ್ತು ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಹೋರಾಡಿದ ಅನೇಕ ರೈತರು ಹಾಗೂ ಶಿಕ್ಷಕರ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಈ ಪ್ರಕರಣಗಳನ್ನು ಹಿಂಪಡೆಯುವುದರಿಂದ ಪ್ರಜಾಸತ್ತಾತ್ಮಕ ಹಕ್ಕುಗಳು ಬಲಗೊಳ್ಳುತ್ತವೆ ಮತ್ತು ಸಾರ್ವಜನಿಕರು ಹಾಗೂ ಸರ್ಕಾರದ ನಡುವಿನ ನಂಬಿಕೆ ಮತ್ತಷ್ಟು ಆಳವಾಗುತ್ತದೆ ಎಂದು ಅವರು ಹೇಳಿದ್ದಾರೆ.

ತಮಿಳುನಾಡು ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ವಿಜಯ್, ಮೇ 2021ರಿಂದ 2026ರ ನಡುವೆ ರೈತರು ಮತ್ತು ಶಿಕ್ಷಕರ ವಿರುದ್ಧ ಸಾಲು ಸಾಲು ಪ್ರಕರಣಗಳನ್ನು ದಾಖಲಿಸಲಾಗಿತ್ತು. ಈ ಪ್ರಕರಣಗಳು ಬಾಕಿ ಇರುವುದರಿಂದ ಹಲವರು ಇಂದಿಗೂ ತೊಂದರೆ ಅನುಭವಿಸುತ್ತಿದ್ದಾರೆ. “ನಮ್ಮ ಸರ್ಕಾರವು ರೈತರು ಮತ್ತು ಶಿಕ್ಷಕರ ನ್ಯಾಯಯುತ ಬೇಡಿಕೆಗಳ ಪರವಾಗಿ ನಿಲ್ಲಲಿದೆ. ಈ ನಿರ್ಧಾರವು ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಮತ್ತಷ್ಟು ಬಲಪಡಿಸುತ್ತದೆ ಹಾಗೂ ಆಡಳಿತ ಮತ್ತು ಸಾರ್ವಜನಿಕರ ನಡುವಿನ ನಂಬಿಕೆಯನ್ನು ಹೆಚ್ಚಿಸುತ್ತದೆ” ಎಂದು ಮುಖ್ಯಮಂತ್ರಿ ವಿಜಯ್ ಹೇಳಿದ್ದಾರೆ.

ಇದನ್ನೂ ಓದಿ: ಪರಂದೂರು ರದ್ದಾದ ಬೆನ್ನಲ್ಲೇ ಚೆನ್ನೈ ಬಳಿ ಹೊಸ ವಿಮಾನ ನಿಲ್ದಾಣಕ್ಕೆ ಸ್ಥಳ ಶೋಧ: ತಮಿಳುನಾಡು ಸರ್ಕಾರದ ಮಹತ್ವದ ಹೆಜ್ಜೆ

ತಮಿಳುನಾಡು ರಾಜ್ಯದ ಬೆನ್ನೆಲುಬಾಗಿರುವ ರೈತರು ಸಿಪ್ಕಾಟ್ ಕೈಗಾರಿಕಾ ಯೋಜನೆಗಳು ಮತ್ತು ಪರಂದೂರು ಪ್ರಸ್ತಾವಿತ ವಿಮಾನ ನಿಲ್ದಾಣದಂತಹ ಯೋಜನೆಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾಗ ಕೇಸುಗಳನ್ನು ದಾಖಲಿಸಲಾಗಿತ್ತು. ಅದೇ ರೀತಿ ತಮ್ಮ ಬೇಡಿಕೆಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧರಣಿ ನಡೆಸಿದ್ದ ಶಿಕ್ಷಕರ ಮೇಲೂ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಪ್ರಕರಣಗಳನ್ನು ಎದುರಿಸುತ್ತಿರುವವರು ಅನುಭವಿಸುತ್ತಿರುವ ಕಷ್ಟಗಳನ್ನು ಪರಿಗಣಿಸಿ, ಇಂತಹ ಪ್ರಕರಣಗಳನ್ನೆಲ್ಲ ಹಿಂಪಡೆಯಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ವಿಜಯ್ ತಿಳಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು ವಿಧಾನಸಭೆಯ ಸಂಪ್ರದಾಯ ಮುರಿದ ಸಿಎಂ ವಿಜಯ್: ಸಿಎಂ ಕುರ್ಚಿ ಬಿಟ್ಟು ಸಚಿವರ ಪಕ್ಕದಲ್ಲಿ ಕುಳಿತ ನಾಯಕ

ತಿರುವಣ್ಣಾಮಲೈ ಜಿಲ್ಲೆಯಲ್ಲಿ ಸಿಪ್ಕಾಟ್ ಯೋಜನೆ ವಿರೋಧಿಸಿದ ರೈತರ ಮೇಲೆ ಗೂಂಡಾ ಕಾಯ್ದೆಯಡಿ ಕೂಡ ಪ್ರಕರಣ ದಾಖಲಿಸಲಾಗಿತ್ತು. ಕೃಷಿ ಭೂಮಿ, ಜಲಮೂಲಗಳು ಮತ್ತು ಜೀವನೋಪಾಯಕ್ಕೆ ಧಕ್ಕೆಯಾಗುತ್ತದೆ ಎಂದು ರೈತರು ಪ್ರತಿಭಟಿಸುತ್ತಿದ್ದ ಪರಂದೂರು ವಿಮಾನ ನಿಲ್ದಾಣ ಯೋಜನೆಯನ್ನೇ ಟಿವಿಕೆ ನೇತೃತ್ವದ ನೂತನ ಸರ್ಕಾರ ಇತ್ತೀಚೆಗೆ ಸಂಪೂರ್ಣವಾಗಿ ಕೈಬಿಟ್ಟಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us