ಪಶ್ಚಿಮ ಬಂಗಾಳ: ತಾರಾಪೀಠದ ಖಾಸಗಿ ಹೋಟೆಲ್ನಲ್ಲಿ ಭೀಕರ ಅಗ್ನಿ ಅವಘಡ, 7 ಮಂದಿ ಸಾವು, ಹಲವರಿಗೆ ಗಂಭೀರ ಗಾಯ
West Bengal's Birbhum Fire Tragedy: ಪಶ್ಚಿಮ ಬಂಗಾಳದ ಬೀರ್ಭೂಮ್ ಜಿಲ್ಲೆಯ ತಾರಾಪೀಠದಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಮುಖ್ಯಾಂಶಗಳು
- ತಾರಾಪೀಠ ಹೋಟೆಲ್ನಲ್ಲಿ ಭೀಕರ ಅಗ್ನಿ ಅವಘಡ
- ಏಳು ಮಂದಿ ಸಾವು, ಹಲವರಿಗೆ ಗಂಭೀರ ಗಾಯ
- ಶಾರ್ಟ್ ಸರ್ಕ್ಯೂಟ್ ಶಂಕೆ
ಕೋಲ್ಕತ್ತ, ಆಗಸ್ಟ್ 17: ಪಶ್ಚಿಮ ಬಂಗಾಳದ (West Bengal) ಬೀರ್ಭೂಮ್ ಜಿಲ್ಲೆಯ ತಾರಾಪೀಠದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಸೋಮವಾರ ಮುಂಜಾನೆ ಖಾಸಗಿ ಹೋಟೆಲ್ನಲ್ಲಿ ಹೊತ್ತಿಕೊಂಡ ಬೆಂಕಿಗೆ ಕನಿಷ್ಠ ಏಳು ಮಂದಿ ಬಲಿಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಾರಾಪೀಠ ಪೊಲೀಸ್ ಠಾಣೆಯಿಂದ ಕೆಲವೇ ದೂರದಲ್ಲಿರುವ ನಾಲ್ಕು ಅಂತಸ್ತಿನ ಹೋಟೆಲ್ ಬಿದೇಶಿನಿಯ ನೆಲಮಹಡಿಯಲ್ಲಿ ಬೆಳಗ್ಗೆ ಸುಮಾರು 5 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡ ವೇಳೆ ಬಹುತೇಕ ಅತಿಥಿಗಳು ಗಾಢ ನಿದ್ದೆಯಲ್ಲಿದ್ದರು.
ಕೆಲವೇ ಕ್ಷಣಗಳಲ್ಲಿ ಬೆಂಕಿ ಹೋಟೆಲ್ನ ಇತರ ಭಾಗಗಳಿಗೂ ವ್ಯಾಪಿಸಿದ್ದು, ದಟ್ಟ ಹೊಗೆ ಆವರಿಸಿಕೊಂಡಿದೆ. ಇದರಿಂದ ಒಳಗಿದ್ದ ಅತಿಥಿಗಳು ಹೊರಬರಲು ಪರದಾಡುವಂತಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ದಟ್ಟ ಹೊಗೆಯಿಂದ ಅತಿಥಿಗಳು ಪರದಾಟ
ಬೆಂಕಿ ಕಾಣಿಸಿಕೊಂಡ ಬಳಿಕ ಹೋಟೆಲ್ನೊಳಗೆ ದಟ್ಟ ಹೊಗೆ ತುಂಬಿಕೊಂಡಿದ್ದರಿಂದ ಉಸಿರಾಟಕ್ಕೂ ತೊಂದರೆ ಉಂಟಾಗಿದೆ. ರಕ್ಷಣಾ ಸಿಬ್ಬಂದಿ ಗಾಯಾಳುಗಳನ್ನು ಹೊರತೆಗೆದು ರಾಂಪುರಹಾಟ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹೋಟೆಲ್ ಆಡಳಿತದ ಪ್ರಾಥಮಿಕ ಮಾಹಿತಿಯಂತೆ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಆದರೆ ಬೆಂಕಿಗೆ ನಿಖರ ಕಾರಣವನ್ನು ಅಧಿಕಾರಿಗಳು ಇನ್ನಷ್ಟೇ ಪತ್ತೆಹಚ್ಚಬೇಕಿದೆ.
ಹೋಟೆಲ್ನಲ್ಲಿದ್ದವರು ಹೇಳಿದ್ದೇನು?
ಅಗ್ನಿ ಅವಘಡದಿಂದ ಪಾರಾದ ಅತಿಥಿಯೊಬ್ಬರು, ಹಠಾತ್ತನೆ ಇಡೀ ಹೋಟೆಲ್ ಹೊಗೆಯಿಂದ ತುಂಬಿಕೊಂಡಿತ್ತು. ಉಸಿರಾಡಲು ಸಾಧ್ಯವಾಗದೆ, ತಕ್ಷಣ ಹೊರಹೋಗುವ ದಾರಿ ಸಿಗದೆ ಪರದಾಡಬೇಕಾಯಿತು ಎಂದು ತಿಳಿಸಿದ್ದಾರೆ.
ಭಕ್ತರಿಂದ ತುಂಬಿದ್ದ ತಾರಾಪೀಠ
ಅಗ್ನಿ ಅವಘಡ ಸಂಭವಿಸಿದ ದಿನ ಶ್ರಾವಣ ಮಾಸದ ಸೋಮವಾರವಾಗಿದ್ದರಿಂದ ತಾರಾಪೀಠದಲ್ಲಿ ಭಕ್ತರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿತ್ತು. ದೇವಾಲಯ ಪಟ್ಟಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದ ಹಿನ್ನೆಲೆಯಲ್ಲಿ ಹೋಟೆಲ್ಗಳಲ್ಲೂ ಹೆಚ್ಚಿನ ಜನಸಂದಣಿ ಇತ್ತು.
ಇದನ್ನೂ ಓದಿ: ವಾರಣಾಸಿ ಏರ್ಪೋರ್ಟ್ನಲ್ಲಿ ಭದ್ರತಾ ತಪಾಸಣೆ ವೇಳೆ ಆಕಸ್ಮಿಕವಾಗಿ ಫೈರ್ ಆದ ಬಂದೂಕು; ಇಬ್ಬರು ಸಿಬ್ಬಂದಿಗೆ ಗಾಯ
ಸ್ಥಳಕ್ಕೆ ಸ್ಥಳೀಯರು ಹಾಗೂ ಸ್ವಯಂಸೇವಕರು ಕೂಡ ಧಾವಿಸಿ ರಕ್ಷಣಾ ಕಾರ್ಯಕ್ಕೆ ನೆರವಾಗಿದ್ದಾರೆ. ಮಳೆಯ ಕಾರಣ ಮುಂಜಾನೆ ಬಹುತೇಕ ಹೋಟೆಲ್ ಅತಿಥಿಗಳು ನಿದ್ದೆಯಲ್ಲಿದ್ದರಿಂದ ಆರಂಭದಲ್ಲಿ ಒಳಗೆ ಏನಾಗುತ್ತಿದೆ ಎಂಬುದು ತಿಳಿಯಲಿಲ್ಲ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ




