
ಕುಲ್ಗಾಂ, ಜುಲೈ 31: ಜಮ್ಮು ಕಾಶ್ಮೀರದ ಕುಲ್ಗಾಮ್ (Kulgam Terror Attack) ಜಿಲ್ಲೆಯಲ್ಲಿ ಇಂದು ಸಂಜೆ ಭಯೋತ್ಪಾದಕರು ಛತ್ತೀಸ್ಗಢ ಮೂಲದ ಇಬ್ಬರು ವಲಸೆ ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಒಬ್ಬರು ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಮಾಹಿತಿಯಂತೆ, ಕುಲ್ಗಾಮ್ನ ಕೆಲ್ಲಂ ಪ್ರದೇಶದಲ್ಲಿ ಅಪರಿಚಿತ ಬಂದೂಕುಧಾರಿಗಳು ಕಾರ್ಮಿಕರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದಾಗ ಈ ಘಟನೆ ಸಂಭವಿಸಿದೆ.
ಲಷ್ಕರ್-ಎ-ತೊಯ್ಬಾ (LeT) ಉಗ್ರ ಸಂಘಟನೆಯ ಉಪ-ಸಂಘಟನೆಯಾದ ‘ದಿ ರೆಸಿಸ್ಟೆನ್ಸ್ ಫ್ರಂಟ್’ (TRF) ಈ ದಾಳಿಯ ಹೊಣೆ ಹೊತ್ತುಕೊಂಡಿದೆ. ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ ಅವರು ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿ, ದಾಳಿಕೋರರನ್ನು ಮಟ್ಟಹಾಕುವಂತೆ ಭದ್ರತಾ ಪಡೆಗಳಿಗೆ ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ: ‘ವಾಣಿಜ್ಯ ಹಡಗು, ನಾವಿಕರ ಮೇಲಿನ ದಾಳಿ ತಡೆಯಿರಿ’; ಇರಾನ್ ವಿದೇಶಾಂಗ ಸಚಿವರ ಜೊತೆ ಭಾರತ ಮಾತುಕತೆ
ಕಳೆದ ವಾರವಷ್ಟೇ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದರು. ಕಳೆದ 2 ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರನ್ನು, ಅದರಲ್ಲೂ ವಿಶೇಷವಾಗಿ ಹೊರರಾಜ್ಯದ ವಲಸೆ ಕಾರ್ಮಿಕರನ್ನು ಮತ್ತು ಯಾತ್ರಿಕರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಸರಣಿ ದಾಳಿಗಳು ಭದ್ರತಾ ವ್ಯವಸ್ಥೆಯ ಕುರಿತು ತೀವ್ರ ಕಳವಳ ಮೂಡಿಸಿವೆ.
VIDEO | Jammu and Kashmir: Open fire reported in Kulgam; one dead and another injured; probe underway.
(Full video available on PTI Videos – https://t.co/n147TvrpG7) pic.twitter.com/8KNsRtltOx
— Press Trust of India (@PTI_News) July 31, 2026
ಸಂತ್ರಸ್ತರನ್ನು ಛತ್ತೀಸ್ಗಢ ನಿವಾಸಿಗಳಾದ ದೀಪಕ್ ಮತ್ತು ಭೂಪೇಂದರ್ ಕುಮಾರ್ ಎಂದು ಗುರುತಿಸಲಾಗಿದೆ. ದೀಪಕ್ ಆಸ್ಪತ್ರೆಗೆ ತಲುಪುವಷ್ಟರಲ್ಲೇ ಮೃತಪಟ್ಟಿದ್ದಾರೆ. ಭೂಪೇಂದರ್ ಕುಮಾರ್ ಗಾಯಗೊಂಡಿದ್ದು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದಾಳಿಯ ಬೆನ್ನಲ್ಲೇ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರಿದಿದ್ದು, ದಾಳಿಕೋರರ ಪತ್ತೆಗಾಗಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ.
ಇದನ್ನೂ ಓದಿ: ಬಿಹಾರದ ಮಾಜಿ ಸಿಎಂ ನಿತೀಶ್ ಕುಮಾರ್ ನಿವಾಸದ ಹೊರಗೆ ಭಾರಿ ಗುಂಡಿನ ದಾಳಿ: ಇಬ್ಬರು ಯುವಕರಿಗೆ ಗಂಭೀರ ಗಾಯ
ಇದಕ್ಕೂ ಮುನ್ನ ಗುರುವಾರ, ರಾಜೌರಿ ಜಿಲ್ಲೆಯ ಭಂಗಾಯಿ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರ ಶಂಕಿತ ಅಡಗುದಾಣವೊಂದನ್ನು ಭದ್ರತಾ ಪಡೆಗಳು ಪತ್ತೆ ಹಚ್ಚಿದ್ದು, ಉಗ್ರರು ಬಳಸುತ್ತಿದ್ದರೆನ್ನಲಾದ ಪಡಿತರ ಸಾಮಗ್ರಿಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ಸಂಜೆ ತಾನಮಂಡಿ ವಲಯದಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ ಈ ಅಡಗುದಾಣ ಪತ್ತೆಯಾಗಿತ್ತು. ದಟ್ಟವಾದ ಅರಣ್ಯದ ಪೊದೆಗಳ ನಡುವೆ ಇದನ್ನು ಮರೆಮಾಚಿ ನಿರ್ಮಿಸಲಾಗಿತ್ತು ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ