Twisha Sharma death case: ಮಾಡೆಲ್ ತ್ವಿಶಾ ಶರ್ಮಾ ಸಾವು: ಅತ್ತೆ, ನಿವೃತ್ತ ನ್ಯಾಯಾಧೀಶೆ ಗಿರಿಬಾಲ ಸಿಂಗ್ ನಿರೀಕ್ಷಣಾ ಜಾಮೀನು ರದ್ದು
ಮಾಡೆಲ್ ತ್ವಿಶಾ ಶರ್ಮಾ ಸಾವಿನ ಪ್ರಕರಣದಲ್ಲಿ ಪ್ರಮುಖ ತಿರುವು. ಅವರ ಅತ್ತೆ, ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ಗೆ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ರದ್ದುಗೊಳಿಸಿದೆ. ಇದರಿಂದ ಸಿಬಿಐಗೆ ಅವರನ್ನು ಬಂಧಿಸಲು ಅಡೆತಡೆ ನಿವಾರಣೆಯಾಗಿದೆ. ತ್ವಿಶಾ ಪತಿ ಸಮರ್ಥ್ ಸಿಂಗ್ ಈಗಾಗಲೇ ಸಿಬಿಐ ವಶದಲ್ಲಿದ್ದಾರೆ. ವರದಕ್ಷಿಣೆ ಕಿರುಕುಳ ಮತ್ತು ಸಾಕ್ಷ್ಯ ನಾಶದ ಆರೋಪಗಳು ತನಿಖೆಯಲ್ಲಿದ್ದು, ಪ್ರಕರಣದಲ್ಲಿ ಮಾಜಿ ನ್ಯಾಯಾಧೀಶರ ಪಾತ್ರ ಸಂಚಲನ ಮೂಡಿಸಿದೆ.

ಭೋಪಾಲ್, ಮೇ 28: ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದ ಮಾಡೆಲ್ ತ್ವಿಶಾ ಶರ್ಮಾ(Twisha Sharma) ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರಿ ತಿರುವು ಸಿಕ್ಕಿದೆ. ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಿವೃತ್ತ ಜಿಲ್ಲಾ ನ್ಯಾಯಾಧೀಶೆ ಹಾಗೂ ತ್ವಿಶಾ ಶರ್ಮಾ ಅತ್ತೆಗೆ ಕೆಳ ನ್ಯಾಯಾಲಯ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಮಧ್ಯಪ್ರದೇಶ ಹೈಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ಗಿರಿಬಾಲಾ ಅವರನ್ನು ಬಂಧಿಸಲು ಕೇಂದ್ರ ತನಿಖಾ ದಳಕ್ಕೆ (CBI) ಇದ್ದ ಎಲ್ಲಾ ಕಾನೂನು ಅಡೆತಡೆಗಳು ನಿವಾರಣೆಯಾಗಿದ್ದು, ಯಾವುದೇ ಕ್ಷಣದಲ್ಲಿ ಅವರು ಬಂಧನಕ್ಕೊಳಗಾಗಬಹುದು ಅಥವಾ ನ್ಯಾಯಾಲಯಕ್ಕೆ ಶರಣಾಗಬಹುದು.
ಹೈಕೋರ್ಟ್ ಜಾಮೀನು ರದ್ದುಗೊಳಿಸಲು ಕಾರಣಗಳೇನು? ನ್ಯಾ. ದೇವನಾರಾಯಣ್ ಮಿಶ್ರಾ ಅವರು 17 ಪುಟಗಳ ಕಠಿಣ ಆದೇಶವನ್ನು ಹೊರಡಿಸಿದ್ದಾರೆ. ಮೇ 15, 2026 ರಂದು ಭೋಪಾಲ್ನ ಸೆಷನ್ಸ್ ನ್ಯಾಯಾಲಯವು ಗಿರಿಬಾಲಾ ಅವರಿಗೆ ನಿರೀಕ್ಷಣಾ ಜಾಮೀನು ನೀಡಿತ್ತು, ಇದನ್ನು ಹೈಕೋರ್ಟ್ ಈಗ ರದ್ದುಗೊಳಿಸಿದೆ. ಮೃತರ ಕುಟುಂಬದವರು ಸಲ್ಲಿಸಿದ ವಾಟ್ಸಾಪ್ ಸಂದೇಶಗಳಲ್ಲಿ ತ್ವಿಶಾ ಶರ್ಮಾ ಮೇಲೆ ಅವರ ಪತಿ ಮತ್ತು ಅತ್ತೆ ಗಿರಿಬಾಲಾ ಅವರಿಗೆ ಅನುಮಾನ ಇತ್ತು. ಆಕೆಗೆ ಗರ್ಭಪಾತ ಮಾಡಿಸಿಕೊಳ್ಳುವಂತೆ ನಿತ್ಯ ಒತ್ತಡ ಹೇರುತ್ತಿದ್ದರು ಎಂಬುದು ಸಾಬೀತಾಗಿದೆ.
ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ತ್ವಿಶಾ ಅವರ ದೇಹದ ಮೇಲೆ ಹಲವು ಗಾಯದ ಗುರುತುಗಳು ಪತ್ತೆಯಾಗಿವೆ ಎಂದು ಸಿಬಿಐ ಕೋರ್ಟ್ಗೆ ತಿಳಿಸಿದೆ. ಆರೋಪಿಗಳು ತನಿಖೆಗೆ ಸಹಕರಿಸುತ್ತಿಲ್ಲ ಮತ್ತು ಸಾಕ್ಷ್ಯಗಳನ್ನು ತಿರುಚುವ ಸಾಧ್ಯತೆ ಹೆಚ್ಚಿದೆ ಎಂದು ಸಿಬಿಐ ವಾದಿಸಿದೆ. ಕೆಳ ನ್ಯಾಯಾಲಯವು ಪ್ರಕರಣದ ಗಂಭೀರತೆಯನ್ನು ಸರಿಯಾಗಿ ಪರಿಗಣಿಸಲು ವಿಫಲವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಮತ್ತಷ್ಟು ಓದಿ: ಕೋರ್ಟ್ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಪತಿಯೂ ಸಿಬಿಐ ವಶಕ್ಕೆ: ಮೇ 12 ರಂದು ತ್ವಿಶಾ ಶರ್ಮಾ ಅವರು ತಮ್ಮ ವೈವಾಹಿಕ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ಸಾವಿನ ತನಿಖೆಯನ್ನು ಸುಪ್ರೀಂ ಕೋರ್ಟ್ನ ನಿರ್ದೇಶನದಂತೆ ಸಿಬಿಐ ವಹಿಸಿಕೊಂಡಿದೆ. ತ್ವಿಶಾ ಅವರ ಪತಿ, ವಕೀಲ ಸಮರ್ಥ್ ಸಿಂಗ್ ಅವರು ಘಟನೆಯ ನಂತರ 10 ದಿನಗಳ ಕಾಲ ತಲೆಮರೆಸಿಕೊಂಡಿದ್ದರು. ಮೇ22 ರಂದು ಅವರನ್ನು ಜಬಲ್ಪುರದಲ್ಲಿ ವಿಶೇಷ ತನಿಖಾ ತಂಡ ಬಂಧಿಸಿತ್ತು. ಪ್ರಸ್ತುತ ಭೋಪಾಲ್ ನ್ಯಾಯಾಲಯವು ಸಮರ್ಥ್ ಸಿಂಗ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಸಿಬಿಐ ಕಸ್ಟಡಿಗೆ ಒಪ್ಪಿಸಿದೆ.
ಬಿಎನ್ಎಸ್ (BNS) ಕಾಯ್ದೆಯ ವಿವಿಧ ಸೆಕ್ಷನ್ಗಳು ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆಯಡಿ ಇಬ್ಬರ ಮೇಲೂ ಪ್ರಕರಣ ದಾಖಲಾಗಿದ್ದು, ನಿವೃತ್ತ ನ್ಯಾಯಾಧೀಶರೇ ಈ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವುದು ಭಾರಿ ಸಂಚಲನ ಸೃಷ್ಟಿಸಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ





