West Bengal Results: ಗೆಲುವಿನ ರಹಸ್ಯ; ಬಂಗಾಳದ ಯುವಕರು, ಮಹಿಳೆಯರಿಗೆ ಬಂಪರ್ ಆಫರ್ ಕೊಟ್ಟು ಗೆದ್ದ ಬಿಜೆಪಿ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ಈಗಾಗಲೇ ಬಿಜೆಪಿ ಬಹುಮತ ಪಡೆದುಕೊಂಡಿದೆ. ಈ ಮೂಲಕ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಅಧಿಕಾರ ಅಂತ್ಯ ಕಂಡಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಬಂಗಾಳದ ಜನರಿಗೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಏನೆಲ್ಲ ಭರವಸೆಗಳನ್ನು ನೀಡಿತ್ತು? ಮೊದಲ ಬಾರಿಗೆ ಬಂಗಾಳದಲ್ಲಿ ಅಧಿಕಾರಕ್ಕೆ ಬರುತ್ತಿರುವ ಬಿಜೆಪಿ ಯಾವ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಎಂಬುದರ ಪೂರ್ತಿ ಮಾಹಿತಿ ಇಲ್ಲಿದೆ.

ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದ (West Bengal Elections) 294 ಕ್ಷೇತ್ರಗಳಲ್ಲಿ 197 ಕ್ಷೇತ್ರಗಳಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ. ಟಿಎಂಸಿ 90 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಹುಮತ ಪಡೆದು ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ಆದ 148 ಸ್ಥಾನಗಳನ್ನು ಪಡೆದಿರುವ ಬಿಜೆಪಿ ಅಧಿಕಾರಕ್ಕೇರುವುದು ಖಚಿತವಾಗಿದೆ. ಈ ಬಾರಿಯ ಚುನಾವಣೆಗೂ ಮುನ್ನ ಬಿಜೆಪಿ ಪಶ್ಚಿಮ ಬಂಗಾಳಕ್ಕೆ ಯಾವೆಲ್ಲ ಭರವಸೆಗಳನ್ನು ನೀಡಿತ್ತು? ಬಿಜೆಪಿ ಸರ್ಕಾರ ರಚನೆಯಾದರೆ ಯಾವ ಸಮುದಾಯಕ್ಕೆ ಹೆಚ್ಚು ಲಾಭವಾಗಲಿದೆ ಎಂಬುದರ ವಿವರ ಇಲ್ಲಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯಾದ ‘ಸಂಕಲ್ಪ ಪತ್ರ’ವನ್ನು ಬಿಡುಗಡೆ ಮಾಡಿದ್ದರು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ 6 ತಿಂಗಳೊಳಗೆ 7ನೇ ವೇತನ ಆಯೋಗ ಮತ್ತು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರುವ ಭರವಸೆಯನ್ನು ಬಿಜೆಪಿ ನೀಡಿತ್ತು. ಬಿಜೆಪಿ ನೀಡಿದ ಭರವಸೆಗಳಲ್ಲಿ ಮಹಿಳೆಯರಿಗೆ ಮತ್ತು ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಹೀಗಾಗಿ, ಮಹಿಳೆಯರು ಬಿಜೆಪಿಗೆ ಹೆಚ್ಚು ಮತ ಹಾಕಿರುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳಕ್ಕೆ ಬಿಜೆಪಿ ನೀಡಿರುವ ಭರವಸೆಗಳ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ! ಕೊನೆಗೂ ಮಮತಾರನ್ನು ಸೋಲಿಸಿದ್ಹೇಗೆ ಬಿಜೆಪಿ? ಇಲ್ಲಿವೆ ಕೆಲವು ಇಂಟರೆಸ್ಟಿಂಗ್ ಮಾಹಿತಿ
- ಎಲ್ಲಾ ಸರ್ಕಾರಿ ನೌಕರರು ಮತ್ತು ಸಂಬಳ ಪಡೆಯುವ ಕಾರ್ಮಿಕರಿಗೆ ತುಟ್ಟಿ ಭತ್ಯೆ (ಡಿಎ) ನೀಡಲಾಗುವುದು.
- ಹೊಸ ಬಿಜೆಪಿ ಸರ್ಕಾರದ ಅಡಿಯಲ್ಲಿ ಪ್ರತಿಯೊಬ್ಬ ಉದ್ಯೋಗಿಯ ಘನತೆಯನ್ನು ಎತ್ತಿಹಿಡಿಯಲು 7ನೇ ವೇತನ ಆಯೋಗವನ್ನು ಜಾರಿಗೆ ತರಲಾಗುವುದು.
- ಪ್ರತಿಯೊಬ್ಬ ಮಹಿಳೆಯ ಬ್ಯಾಂಕ್ ಖಾತೆಗಳಲ್ಲಿ 3,000 ರೂ.ಗಳನ್ನು ಹಾಕಲಾಗುವುದು.
- ಪೊಲೀಸ್ ಪಡೆ ಸೇರಿದಂತೆ ಪಶ್ಚಿಮ ಬಂಗಾಳದ ಎಲ್ಲ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಲಾಗುವುದು.
- ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು.
- ನಿರುದ್ಯೋಗಿ ಯುವಕರಿಗೆ 3,000 ಆರ್ಥಿಕ ನೆರವು ನೀಡಲಾಗುವುದು.
- ಎಲ್ಲಾ ಕೇಂದ್ರ ಸರ್ಕಾರದ ಯೋಜನೆಗಳ ಜೊತೆಗೆ ಆಯುಷ್ಮಾನ್ ಭಾರತ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು.
- ಬಡ ಕುಟುಂಬದ ಗರ್ಭಿಣಿಯರಿಗೆ 6 ಪೌಷ್ಟಿಕಾಂಶಗಳ ಕಿಟ್ ಮತ್ತು 21 ಸಾವಿರ ರೂ. ಹಣ ಸಹಾಯ.
- ಮಹಿಳೆಯರ ಉನ್ನತ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡಲು ಸ್ನಾತಕೋತ್ತರ ಪದವಿಗಳಿಗೆ ಸೇರುವ ಹೆಣ್ಣುಮಕ್ಕಳಿಗೆ 50,000 ರೂ. ಹಣ.
- ಮೀನುಗಾರರಿಗೆ ತಿಂಗಳಿಗೆ 9,000 ರೂ. ಧನ ಸಹಾಯ
- ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸುವವರನ್ನು ಉತ್ತೇಜಿಸಲು 15,000 ರೂ. ಧನ ಸಹಾಯ.
- ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ.
- ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರದಿಂದಾಗಿ ಅರ್ಹತಾ ವಯಸ್ಸಿನ ಮಿತಿಯನ್ನು ದಾಟಿದ ಯುವಕರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲಾಗುವುದು.
- ಬಂಗಾಳದಲ್ಲಿ 5 ವರ್ಷಗಳಲ್ಲಿ 1 ಕೋಟಿ ಹೊಸ ಉದ್ಯೋಗಾವಕಾಶ ಸೃಷ್ಟಿಸಲಾಗುವುದು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




