ಕೋವಿಡ್ ಇನ್ನೂ ಮುಗಿದಿಲ್ಲ, ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ನಾವು ಸಿದ್ಧ: ಮನ್ಸುಖ್ ಮಾಂಡವಿಯ

| Updated By: ರಶ್ಮಿ ಕಲ್ಲಕಟ್ಟ

Updated on: Dec 21, 2022 | 2:28 PM

ಚೀನಾ, ದಕ್ಷಿಣ ಕೊರಿಯಾ, ಅಮೆರಿಕ, ಜಪಾನ್ ಮತ್ತು ಬ್ರೆಜಿಲ್‌ನಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ಆರೋಗ್ಯ ಬಿಕ್ಕಟ್ಟನ್ನು ತಪ್ಪಿಸಲು ದೇಶದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಕೇಂದ್ರ ನಿರ್ಧರಿಸಿದೆ.

ಕೋವಿಡ್ ಇನ್ನೂ ಮುಗಿದಿಲ್ಲ, ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ನಾವು ಸಿದ್ಧ: ಮನ್ಸುಖ್ ಮಾಂಡವಿಯ
ಕೇಂದ್ರ ಆರೋಗ್ಯ ಸಚಿವರ ನೇತೃತ್ವದಲ್ಲಿ ಸಭೆ
Follow us on

ದೇಶದ ಕೋವಿಡ್ -19 (Covid 19) ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ (Mansukh Mandaviya) ಬುಧವಾರ ದೆಹಲಿಯಲ್ಲಿ ತಜ್ಞರ ತಂಡದೊಂದಿಗೆ ಸಭೆ ನಡೆಸಿದ್ದಾರೆ. ಚೀನಾ, ದಕ್ಷಿಣ ಕೊರಿಯಾ, ಅಮೆರಿಕ, ಜಪಾನ್ ಮತ್ತು ಬ್ರೆಜಿಲ್‌ನಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ಆರೋಗ್ಯ ಬಿಕ್ಕಟ್ಟನ್ನು ತಪ್ಪಿಸಲು ದೇಶದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಕೇಂದ್ರ ನಿರ್ಧರಿಸಿದೆ.ಈ ಸಭೆಯಲ್ಲಿ ಆರೋಗ್ಯ ಮತ್ತು ಆಯುಷ್ ಸಚಿವಾಲಯದ ಕಾರ್ಯದರ್ಶಿಗಳು, ಫಾರ್ಮಸ್ಯುಟಿಕಲ್ಸ್ ಮತ್ತು ಬಯೋಟೆಕ್ನಾಲಜಿ ವಿಭಾಗ, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ನಿರ್ದೇಶಕ ರಾಜೀವ್ ಬೇಲ್, ನೀತಿ ಆಯೋಗ (ಆರೋಗ್ಯ) ಸದಸ್ಯ ವಿ.ಕೆ ಪೌಲ್ ಮತ್ತು ನ್ಯಾಷನಲ್ ಟೆಕ್ನಿಕಲ್ ಅಡ್ವಸರಿ ಗ್ರೂಪ್ ಆನ್ ಇಮ್ಯುನೈಜೇಷನ್ (NTAGI) ಅಧ್ಯಕ್ಷ ಎನ್.ಎಲ್ ಆರೋರಾ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದಾರೆ.ಸಭೆಯಲ್ಲಿ ಎಲ್ಲರೂ ಮಾಸ್ಕ್ ಧರಿಸಿದ್ದರು.

ಪ್ರಸ್ತುತ ಚೀನಾ ಜೊತೆಗೆ ಜಪಾನ್, ಅಮೆರಿಕ, ಕೊರಿಯಾ ಮತ್ತು ಬ್ರೆಜಿಲ್ ದೇಶಗಳಲ್ಲಿಯೂ ಕೊರೊನಾ ಸೋಂಕು ವ್ಯಾಪಿಸಿದೆ. ಈ ಹಿನ್ನೆಲೆಯಲ್ಲಿ ಜಿನೋಮ್ ಸೀಕ್ವೆನ್ಸಿಂಗ್ ಬಗ್ಗೆ ಭಾರತ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವು ಮಹತ್ವ ಪಡೆದಿದೆ. ಜಿನೋಮ್ ಸೀಕ್ವೆನ್ಸಿಂಗ್​ ಪ್ರಮಾಣವು ಹೆಚ್ಚಾದರೆ ಮಾತ್ರ ದೇಶದಲ್ಲಿ ಹರಡುತ್ತಿರುವ ಹೊಸ ರೂಪಾಂತರಿಗಳನ್ನು ಪತ್ತೆ ಮಾಡಲು ಹಾಗೂ ಸಮುದಾಯ ಆರೋಗ್ಯಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಸಕಾಲದಲ್ಲಿ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ರಾಜ್ಯಗಳಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ. ಕೊವಿಡ್ ತಪಾಸಣೆಯನ್ನು ಹೆಚ್ಚಿಸಬೇಕು. ಪಾಸಿಟಿವ್ ಬಂದ ಎಲ್ಲ ಮಾದರಿಗಳನ್ನೂ ಜಿನೋಮ್ ಸೀಕ್ವೆನ್ಸಿಂಗ್​ಗಾಗಿ ಇನ್​ಸಾಕಾಗ್ ಪ್ರಯೋಗಾಲಯಗಳಿಗೆ (lGSLs – INSACOG Genome Sequencing Laboratories) ಕಡ್ಡಾಯವಾಗಿ ಕಳುಹಿಸಿಕೊಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಚೀನಾ ಸೇರಿದಂತೆ ವಿಶ್ವದ ಇತರ ದೇಶಗಳ ಕೊವಿಡ್ ಸೋಂಕು ಪ್ರಕರಣಗಳ ಅಂಕಿಅಂಶ ಮತ್ತು ಆರೋಗ್ಯ ಪರಿಸ್ಥಿತಿಯನ್ನು ಗಮನಿಸಲು ಕೇಂದ್ರ ಸರ್ಕಾರವು ಆಂತರಿಕ ಕಾರ್ಯಪಡೆಯೊಂದನ್ನು ರಚಿಸಿದೆ. ಈ ಸಮಿತಿಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿದ್ದು, ಭಾರತದ ಮೇಲಿನ ಪರಿಣಾಮ ಮತ್ತು ಸ್ಥಳೀಯವಾಗಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಕಣ್ಗಾವಲು ಇರಿಸಲು, ತುರ್ತು ನಿರ್ಧಾರ ತೆಗೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಕೋವಿಡ್ ನಿಯಮ ಪಾಲಿಸಿ ಇಲ್ಲವೇ ಭಾರತ್ ಜೋಡೋ ಯಾತ್ರೆ ನಿಲ್ಲಿಸಿ: ರಾಹುಲ್ ಗಾಂಧಿಗೆ ಕೇಂದ್ರ ಆರೋಗ್ಯ ಸಚಿವರ ಪತ್ರ

ಯಾವುದೇ  ಪರಿಸ್ಥಿತಿ  ನಿಭಾಯಿಸಲು ನಾವು ಸಿದ್ಧರಾಗಿದ್ದೇವೆ: ಕೇಂದ್ರ ಆರೋಗ್ಯ ಸಚಿವ

ಕೆಲವು ದೇಶಗಳಲ್ಲಿ ಕೋವಿಡ್ 19  ಪ್ರಕರಣಗಳು  ಹೆಚ್ಚುತ್ತಿರುವ ಹಿನ್ನಲೆಯಲ್ಲಿ  ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಇಂದು ಪರಿಶೀಲನಾ ಸಭೆ ನಡೆಸಿದ್ದೇನೆ. ಕೋವಿಡ್  ಇನ್ನೂ ಮುಗಿದಿಲ್ಲ. ಎಚ್ಚರಿಕೆ ಮತ್ತು ಹೆಚ್ಚಿನ ಕಣ್ಗಾವಲು ವಹಿಸುವುದಕ್ಕಾಗಿ ನಾವು ಎಲ್ಲ ಸೂಚನೆಗಳನ್ನು ನೀಡಿದ್ದೇವೆ. ನಾವು ಯಾವುದೇ ಪರಿಸ್ಥಿತಿ ನಿಭಾಯಿಸಲು ನಾವು ಸಿದ್ಧರಾಗಿದ್ದೇವೆ ಎಂದು ಮನ್ಸುಖ್ ಮಾಂಡವಿಯ ಟ್ವೀಟ್ ಮಾಡಿದ್ದಾರೆ.

ಭಾರತದಲ್ಲಿ ಬುಧವಾರ 131 ಹೊಸ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,408 ಕ್ಕೆ ಇಳಿದಿದೆ. ಸಕ್ರಿಯ ಪ್ರಕರಣಗಳು ಈಗ ಒಟ್ಟು ಸೋಂಕುಗಳ 0.01% ರಷ್ಟಿವೆ. ಕೇಂದ್ರ ಸರ್ಕಾರವು ಮಂಗಳವಾರ ರಾಜ್ಯಗಳು ಜಾಗರೂಕರಾಗಿರಬೇಕು ಮತ್ತು ಕೋವಿಡ್ ಪ್ರಕರಣಗಳ ಕಣ್ಗಾವಲು ಹೆಚ್ಚಿಸುವಂತೆ ಕೇಳಿಕೊಂಡಿದೆ.  ಈ ವರ್ಷದ ಜನವರಿ ತಿಂಗಳಲ್ಲಿ ಆರಂಭಿಸಲಾದ ಲಸಿಕೆ ಅಭಿಯಾನದಡಿ ಇದುವರೆಗೆ 220.01 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:59 pm, Wed, 21 December 22